ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಹೀನಾಯ ಸೋಲು ಅನುಭವಿಸಿರುವ ಕಾಂಗ್ರೆಸ್ ಪಕ್ಷ ಮತ್ತೊಂದು ನಿರ್ಣಯ ಕೈಗೊಂಡಿದೆ. ಮಾಧ್ಯಮಗಳಲ್ಲಿ ನಡೆಯುವ ಚರ್ಚೆಗಳಿಗೆ ತಮ್ಮ ವಕ್ತಾರರನ್ನು ಒಂದು ತಿಂಗಳ ಕಾಲ ಕಳುಹಿಸದಿರಲು ನಿರ್ಧರಿಸಿದೆ. ಈ ಕುರಿತು ಕಾಂಗ್ರೆಸ್ ವಕ್ತಾರರು ಟ್ವೀಟ್ ಮೂಲಕ ಸಂದೇಶ ರವಾನಿಸಿದ್ದಾರೆ.
ಕಾಂಗ್ರೆಸ್ ಪಕ್ಷದ ಪ್ರತಿನಿಧಿಗಳು ಮತ್ತು ವಕ್ತಾರರು ತಮ್ಮ ಕಾರ್ಯಕ್ರಮಗಳಲ್ಲಿ ನಿಯೋಜಿಸದಂತೆ ಎಲ್ಲಾ ಸುದ್ದಿ ಮಾಧ್ಯಮಗಳಿಗೆ, ಸಂಪಾದಕರುಗಳಿಗೆ ಮನವಿ ಮಾಡುತ್ತೇವೆ ಎಂದು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಮುಖ್ಯಸ್ಥ ಮತ್ತು ಕಾಂಗ್ರೆಸ್ ಸಂವಹನ ವಿಭಾಗದ ಮುಖ್ಯಸ್ಥ ರಣದೀಪ್ ಸಿಂಗ್ ಸುರ್ಜೆವಾಲಾ ತಿಳಿಸಿದ್ದಾರೆ.