ದೇಶ

ಪರಿಸರಕ್ಕೆ ಹಾನಿ ಮಾಡುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮಕ್ಕೆ ಸುಪ್ರೀಂಕೋರ್ಟ್ ಸೂಚನೆ

Srinivasamurthy VN

ನವದೆಹಲಿ: ರಾಷ್ಟ್ರರಾಜಧಾನಿಯಲ್ಲಿ ಜನರ ಪ್ರಾಣ ಕಾಪಾಡುವುದು ಸರ್ಕಾರದ ಆದ್ಯ ಕರ್ತವ್ಯವಾಗಿದ್ದು ಪರಿಸರಕ್ಕೆ ಹಾನಿ, ಧಕ್ಕೆ ಉಂಟು ಮಾಡುವವರ ವಿರುದ್ಧ ಯಾವುದೇ ಮುಲಾಜು ನೋಡದೇ ಕಠಿಣ ಕ್ರಮ ಜರುಗಿಸಬೇಕೆಂದು ಸುಪ್ರೀಂಕೋರ್ಟ್ ದೆಹಲಿ ಮತ್ತು ಕೇಂದ್ರ ಸರ್ಕಾರಕ್ಕೆ ಖಡಕ್ ಸೂಚನೆ ಕೊಟ್ಟಿದೆ.

ದೆಹಲಿಯ ವಿಷಕಾರಿ ಮಾಲಿನ್ಯ ಮತ್ತು ನವೆಂಬರ್ 4 ರಿಂದ ದೆಹಲಿಯಲ್ಲಿ ಜಾರಿಗೆ ತರಲಾಗಿರುವ  ಸಮಬೆಸ ಸೂತ್ರದ ನಡುವೆಯೇ, 'ಮಾಲಿನ್ಯವು ಜನರನ್ನು ಉಸಿರುಗಟ್ಟಿಸುತ್ತಿದೆ' ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯ ವ್ಯಕ್ತಪಡಿಸಿದೆ. ಮಾಲಿನ್ಯದಿಂದ ಮನೆಗಳಲ್ಲೂ ಉತ್ತಮ ಗಾಳಿ ಲಭಿಸುತ್ತಿಲ್ಲ. ನಾವು ಈ ರೀತಿ ಬದುಕಬಹುದೇ? ಎಂದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳನ್ನು ಪ್ರಶ್ನಿಸಿದ ಸುಪ್ರೀಂಕೋರ್ಟ್, ಉಭಯ ಸರ್ಕಾರಗಳು ಪರಸ್ಪರ ದೂಷಿಸುವಲ್ಲಿ ನಿರತವಾಗಿವೆಯೇ ಹೊರತು ಈ ಬಗ್ಗೆ  ಸೂಕ್ತ ಕ್ರಮ ತೆಗೆದುಕೊಳ್ಳುತ್ತಿಲ್ಲ ಎಂದು  ದೆಹಲಿಯಲ್ಲಿ ಹೆಚ್ಚುತ್ತಿರುವ ಮಾಲಿನ್ಯದ ಬಗ್ಗೆ ಸುಪ್ರೀಂ ಕೋರ್ಟ್ ಕಳವಳ ವ್ಯಕ್ತಪಡಿಸಿದೆ.

ದೆಹಲಿಯಲ್ಲಿ ಉಸಿರುಗಟ್ಟುವ ವಾತಾವರಣ ಮನೆ ಮಾಡಿದೆ. ಪ್ರತಿ ವರ್ಷವೂ ಇದೇ ಪರಿಸ್ಥಿತಿ ಇರುತ್ತದೆ. ಆದಾಗ್ಯೂ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುತ್ತಿಲ್ಲ.  ಸುಸಂಸ್ಕೃತ ದೇಶಗಳಲ್ಲಿ ಈ ರೀತಿ ಇರಲು ಸಾಧ್ಯವೇ ಎಂದು ಬೇಸರ ವ್ಯಕ್ತಪಡಿಸಿದ ಸರ್ವೋಚ್ಚ ನ್ಯಾಯಾಲಯ, 'ಬದುಕುವ ಹಕ್ಕು ಅತ್ಯಂತ ಮುಖ್ಯ. ಈ ರೀತಿಯ ವಾತಾವರಣದಲ್ಲಿ ಬದುಕುವುದು ನಿಜಕ್ಕೂ ಅಸಹನೀಯ. ಈ ಕಾರಣದಿಂದಾಗಿ ನಾವು ನಮ್ಮ ಜೀವನದ ಅಮೂಲ್ಯ ವರ್ಷಗಳನ್ನು ಕಳೆದುಕೊಳ್ಳುತ್ತಿದ್ದೇವೆ.  ದೆಹಲಿ ಮತ್ತು ಅಕ್ಕಪಕ್ಕದ ರಾಜ್ಯಗಳಲ್ಲಿ ರೈತರು ಕೂಳೆ ಸುಡುವುದನ್ನು ನಿಲ್ಲಿಸಬೇಕು. ಇದಕ್ಕಾಗಿ ರಾಜ್ಯ ಸರ್ಕಾರಗಳು ಕ್ರಮಗಳನ್ನು ತೆಗೆದುಕೊಳ್ಳಬೇಕಾಗುತ್ತದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. 

ದೆಹಲಿ, ಹರ್ಯಾಣ ಸರ್ಕಾರದ ವಿರುದ್ಧ ಕಿಡಿಕಾರಿದ ಸರ್ವೋಚ್ಛ ನ್ಯಾಯಾಲಯ, 'ವಾಯುಮಾಲಿನ್ಯಕ್ಕೆ ಕಾರಣವಾಗುವ ಈ ಅಂಶಗಳ ಕುರಿತು ಆಡಳಿತವು ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳಬೇಕು ಮತ್ತು ಅಧಿಕಾರಿಗಳ ಜೊತೆಗೆ ಗ್ರಾಮದ ಮುಖ್ಯಸ್ಥರ ಜವಾಬ್ದಾರಿಯನ್ನು ನಿಗದಿಪಡಿಸಬೇಕು ಎಂದು ಹೇಳಿದೆ. ಐಐಟಿಯ ತಜ್ಞರಲ್ಲದೆ, ಸಚಿವಾಲಯದ ಯಾರನ್ನಾದರೂ ಆಹ್ವಾನಿಸಿ, ಮಾಲಿನ್ಯವನ್ನು ತಡೆಗಟ್ಟಲು ಯಾವ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ನ್ಯಾಯಾಲಯಕ್ಕೆ ಅರ್ಧಗಂಟೆಯಲ್ಲಿ ತಿಳಿಸಬೇಕು ಎಂದು ಕೋರ್ಟ್ ಆದೇಶಿಸಿದೆ.

SCROLL FOR NEXT