ದೇಶ

ಪೊಲೀಸ್-ವಕೀಲರ ಕಲಹ: ಪ್ರತಿಭಟನೆ ಕೈಬಿಡುವಂತೆ ಪೊಲೀಸರಿಗೆ ದೆಹಲಿ ಪೊಲೀಸ್ ಆಯುಕ್ತರ ಆಗ್ರಹ

Lingaraj Badiger

ನವದೆಹಲಿ: ತಮ್ಮ ಮೇಲೆ ಹಲ್ಲೆ ನಡೆಸಿದ ವಕೀಲರು ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ದೆಹಲಿ ಪೊಲೀಸರಿಗೆ ಪ್ರತಿಭಟನೆ ಕೈಬಿಟ್ಟು ಕೆಲಸಕ್ಕೆ ಹಾಜರಾಗುವಂತೆ ದೆಹಲಿ ಪೊಲೀಸ್ ಆಯುಕ್ತ ಅಮುಲ್ಯ ಪಟ್ನಾಯಕ್ ಅವರು ಮಂಗಳವಾರ ಆಗ್ರಹಿಸಿದ್ದಾರೆ.

ಪೊಲೀಸ್ ಪ್ರಧಾನ ಕಚೇರಿ ಬಳಿ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಪಟ್ನಾಯಕ್ ಅವರು, ನಾವು ಶಿಸ್ತಿನ ಪೊಲೀಸ್ ಪಡೆಯಂತೆ ವರ್ತಿಸಬೇಕು. ಹೀಗಾಗಿ ಕೂಡಲೇ ಪ್ರತಿಭಟನೆ ಕೈಬಿಡಿ ಎಂದು ಮನವಿ ಮಾಡಿದರು.

ನಾವು ಕಾನೂನು ಕಾಪಾಡಬೇಕು ಎಂದು ಸರ್ಕಾರ ಮತ್ತು ಜನತೆ ಬಯಸುತ್ತಾರೆ. ನಿಮ್ಮ ಸಮಸ್ಯೆಗಳನ್ನು ಪರಿಹರಿಸಲಾಗುವುದು. ನೀವು ಈ ಕೂಡಲೇ ಕೆಲಸಕ್ಕೆ ಹಾಜರಾಗಬೇಕು ಎಂದು ನಾನು ಒತ್ತಾಯಿಸುತ್ತೇನೆ ಎಂದರು,

ಈ ಪೊಲೀಸರ ಮತ್ತು ವಕೀಲರ ನಡುವಿನ ಕಲಹಕ್ಕೆ ಸಂಬಂಧಿಸಿದಂತೆ ದೆಹಲಿ ಹಿರಿಯ ಪೊಲೀಸ್ ಅಧಿಕಾರಿಗಳು ವರದಿ ನೀಡಿರುವುದಾಗಿ ಕೇಂದ್ರ ಗೃಹ ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ.

ಕಳೆದ ನವೆಂಬರ್ 2ರಂದು ತೀಸ್ ಹಜಾರಿ ಕೋರ್ಟ್ ನಲ್ಲಿ ಪಾರ್ಕಿಂಗ್ ವಿಚಾರಕ್ಕೆ ಸಂಬಂಧಿಸಿದಂತೆ ಪೊಲೀಸರ ಮತ್ತು ವಕೀಲರ ನಡುವೆ ಘರ್ಷಣೆಯಾಗಿತ್ತು. ಈ ವೇಳೆ ವಕೀಲರು ಪೊಲೀಸ್ ವಾಹನಗಳಿಗೆ ಬೆಂಕಿ ಹಚ್ಚಿದ್ದರು.

ಪೊಲೀಸರ ಗುಂಡಿನ ದಾಳಿಯಲ್ಲಿ ತಮ್ಮ ಇಬ್ಬರು ಸಹೋದ್ಯೋಗಿಗಳು ಗಾಯಗೊಂಡಿದ್ದಾರೆ ಎಂದು ವಕೀಲರು ಆರೋಪಿಸಿದ್ದಾರೆ. ಆದರೆ ವಕೀಲರ ಆರೋಪವನ್ನು ತಳ್ಳಿಹಾಕಿರುವ ಪೊಲೀಸರು, ತಾವು ಗುಂಡು ಹಾರಿಸಿಲ್ಲ ಎಂದು ಹೇಳಿದ್ದಾರೆ.

ಘರ್ಷಣೆಯಲ್ಲಿ ಓರ್ವ ವಕೀಲ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಸೇಂಟ್ ಸ್ಟೀಫನ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

SCROLL FOR NEXT