ದೇಶ

ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಡಳಿತಕ್ಕೆ ಕೇಂದ್ರ ಸಚಿವ ಸಂಪುಟ ಶಿಫಾರಸು

Lingaraj Badiger

ನವದೆಹಲಿ: ಮಹಾರಾಷ್ಟ್ರದಲ್ಲಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ಬಿಜೆಪಿ ಸೇರಿದಂತೆ ಯಾವೊಂದು ಪಕ್ಷಗಳು ಸರ್ಕಾರ ರಚನೆಗೆ ಹಕ್ಕು ಮಂಡಿಸದ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಸಂಪುಟ ಮಂಗಳವಾರ ರಾಷ್ಟ್ರಪತಿ ಆಡಳಿತಕ್ಕೆ ಶಿಫಾರಸು ಮಾಡಿದೆ.

ಸರ್ಕಾರ ರಚಿಸುವಲ್ಲಿ ಬಿಜೆಪಿ, ಶಿವಸೇನಾ ವಿಫಲವಾದ ಬೆನ್ನಲ್ಲೇ, ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಹೇರುವಂತೆ ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದ್ದರು. ಈ ಹಿನ್ನೆಲೆಯಲ್ಲಿ ಇಂದು ತುರ್ತು ಸಚಿವ ಸಂಪುಟ ಸಭೆ ನಡೆಸಿದ ಪ್ರಧಾನಿ ನರೇಂದ್ರ ಮೋದಿ ಅವರು ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಡಳಿತ ಜಾರಿಗೊಳಿಸುವಂತೆ ರಾಷ್ಟ್ರಪತಿ ರಾಮನಾಥ್ ಕೊವಿಂದ್ ಅವರಿಗೆ ಶಿಫಾರಸು ಮಾಡಿದ್ದಾರೆ.

ಸಚಿವ ಸಂಪುಟ ಸಭೆಯ ಬಳಿಕ ಪ್ರಧಾನಿ ಮೋದಿ ಅವರು ಬ್ರಿಕ್ಸ್ ಶೃಂಗ ಸಭೆಯಲ್ಲಿ ಭಾಗವಹಿಸುವುದಕ್ಕಾಗಿ ಬ್ರೆಜಿಲ್ ಗೆ ಪ್ರಯಾಣ ಬೆಳೆಸಿದ್ದಾರೆ.

ರಾಜ್ಯಪಾಲರು ಮೊದಲ ಬಿಜೆಪಿ ನಂತರ ಶಿವಸೇನಾ ಹಾಗೂ ನಿನ್ನೆ ಸರ್ಕಾರ ರಚನೆಗೆ ಎನ್​ಸಿಪಿಗೆ ಆಹ್ವಾನ ನೀಡಿದ್ದರು. ಅಲ್ಲದೆ ಎನ್ ಸಿಪಿಗೆ ಸರ್ಕಾರ ರಚಿಸಲು ಇಂದು ರಾತ್ರಿ 8:30ರವರೆಗೆ ಗಡುವು ನೀಡಿದ್ದರೂ ರಾಜ್ಯಪಾಲರು ಏಕಾಏಕಿ ರಾಷ್ಟ್ರಪತಿ ಆಳ್ವಿಕೆಗೆ ಶಿಫಾರಸು ಮಾಡಿರುವುದು ತೀವ್ರ ಅಚ್ಚರಿ ಮೂಡಿಸಿದೆ.

ಯಾವುದೇ ಪಕ್ಷದಿಂದಲೂ ಸರ್ಕಾರ ರಚಿಸುವ ಪ್ರಯತ್ನ ಕಂಡುಬರದ ಹಿನ್ನೆಲೆಯಲ್ಲಿ ರಾಜ್ಯಪಾಲರು ರಾಷ್ಟ್ರಪತಿ ಆಳ್ವಿಕೆಗೆ ಶಿಫಾರಸು ಮಾಡಿದ್ದಾರೆ ಎನ್ನಲಾಗಿದೆ. ರಾಜ್ಯಪಾಲರ ಶಿಫಾರಸು ಪತ್ರ ಕೇಂದ್ರ ಸರ್ಕಾರವನ್ನು ತಲುಪಿದ್ದು, ಸಂಪುಟ ಸಭೆಯಲ್ಲಿ ಇದಕ್ಕೆ ಒಪ್ಪಿಗೆ ಸಿಕ್ಕಿದೆ. ಈ ಮೂಲಕ ಬಿಜೆಪಿ, ಶಿವಸೇನೆ, ಕಾಂಗ್ರೆಸ್​ ಮತ್ತು ಎನ್​ಸಿಪಿ ನಡುವಿನ ಹಗ್ಗಜಗ್ಗಾಟಕ್ಕೆ ರಾಷ್ಟ್ರಪತಿ ಅಂಕುಶದ ಅಂತ್ಯ ಸಿಕ್ಕಿದೆ.

SCROLL FOR NEXT