ಮುಂಬೈ: ಮಹಾರಾಷ್ಟ್ರದಲ್ಲಿ ಶಿವಸೇನೆ, ಎನ್ ಸಿಪಿ ಮತ್ತು ಕಾಂಗ್ರೆಸ್ ಸರ್ಕಾರ ರಚನೆಯ ಮಾತುಕತೆಗಳನ್ನು ಅಂತಿಮಗೊಳಿಸಿವೆ ಎಂದು ಹೇಳಲಾಗುತ್ತಿದ್ದು ಹಲವು ವಾರಗಳ ರಾಜಕೀಯ ಅನಿಶ್ಚಿತತೆ ಕೊನೆಗೊಳ್ಳುವ ಸಾಧ್ಯತೆಯಿದೆ.
ಈ ಕುರಿತು ಮೂರೂ ಪಕ್ಷಗಳು ನಾಳೆ ಜಂಟಿ ಸುದ್ದಿಗೋಷ್ಠಿಯಲ್ಲಿ ಅಧಿಕೃತವಾಗಿ ಘೋಷಣೆ ಮಾಡುವ ಸಾಧ್ಯತೆಯಿದೆ. ಇಂದು ಎನ್ ಸಿಪಿ ನಾಯಕ ಶರದ್ ಪವಾರ್ ಮತ್ತು ಕಾಂಗ್ರೆಸ್ ಪಕ್ಷ ಭೇಟಿಯಾಗಿ ಮತ್ತೊಂದು ಸುತ್ತಿನ ಮಾತುಕತೆ ನಡೆಯುವ ಸಾಧ್ಯತೆಯಿದೆ.
ಇಂದಿನವರೆಗೆ ಸಿಕ್ಕಿರುವ ಮಾಹಿತಿ ಪ್ರಕಾರ ಶಿವಸೇನೆ ಮತ್ತು ಎನ್ ಸಿಪಿ ತಲಾ ಎರಡೂವರೆ ವರ್ಷಗಳ ಕಾಲ ಮುಖ್ಯಮಂತ್ರಿ ಹುದ್ದೆಯನ್ನು ವಹಿಸಿಕೊಳ್ಳಲಿದ್ದು, ಯಾವ ಪಕ್ಷ ಮೊದಲು ಮುಖ್ಯಮಂತ್ರಿ ಸ್ಥಾನ ವಹಿಸಿಕೊಳ್ಳಲಿದೆ ಎಂದು ಸ್ಪಷ್ಟವಾಗಿಲ್ಲ.
ಮೂಲಗಳಿಂದ ಸಿಕ್ಕಿರುವ ಮಾಹಿತಿ ಪ್ರಕಾರ ಎನ್ ಸಿಪಿಗೆ ಮೊದಲು ಮುಖ್ಯಮಂತ್ರಿ ಸ್ಥಾನ ಲಭ್ಯವಾಗಲಿದ್ದು ಶರದ್ ಪವಾರ್ ಅಥವಾ ಅವರ ಪುತ್ರಿ ಸುಪ್ರಿಯಾ ಸುಳೆ ಮುಖ್ಯಮಂತ್ರಿಯಾಗುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.