ದೇಶ

ಕೋವಿಡ್-19: ದೆಹಲಿ ಸರ್ಕಾರದಿಂದ ಕ್ವಾರಂಟೈನ್ ನಲ್ಲಿರುವವರ ಮೊಬೈಲ್ ಟ್ರ್ಯಾಕಿಂಗ್

Srinivasamurthy VN

ನವದೆಹಲಿ: ದೆಹಲಿಯಲ್ಲಿ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗುತ್ತಿರುವ ಹಿನ್ನಲೆಯಲ್ಲಿ ಸಿಎಂ ಅರವಿಂದ್ ಕೇಜ್ರಿವಾಲ್ ನೇತೃತ್ವದ ದೆಹಲಿ ಸರ್ಕಾರ ಕ್ವಾರಂಟೈನ್ ನಲ್ಲಿರುವವರ ಮೊಬೈಲ್ ಅನ್ನು ಟ್ರ್ಯಾಕ್ ಮಾಡಲು ಮುಂದಾಗಿದೆ.

ದೇಶದಲ್ಲಿ ಕೊರೋನಾ ವೈರಸ್ ಸೋಂಕಿತರ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದ್ದು, ಇದಕ್ಕೆ ಕಳೆದ 24 ಗಂಟೆಯಲ್ಲಿ 386 ಪ್ರಕರಣಗಳು ಪತ್ತೆಯಾಗಿವೆ. ಪ್ರಮುಖವಾಗಿ ದೆಹಲಿಯ ನಿಜಾಮುದ್ದೀನ್ ಪ್ರದೇಶದ ಮರ್ಕಜ್ ಧಾರ್ಮಿಕ ಕಾರ್ಯಕ್ರಮದಿಂದಾಗಿ ಸೋಂಕು ಪ್ರಕರಣಗಳ ಸಂಖ್ಯೆ  ಹೆಚ್ಚಾಗಿದ್ದು, ಮಸೀದಿಯಲ್ಲಿದ್ದವರೆಲ್ಲರನ್ನೂ ಹುಡುಕಿ ಕ್ವಾರಂಟೈನ್ ಮಾಡಲಾಗಿದೆ. ಅಲ್ಲದೆ ಅವರ ಚಲನವಲನಗಳ ಮೇಲೆ ನಿಗಾ ಇರಿಸಲು ದೆಹಲಿ ಸರ್ಕಾರ ಅವರ ಮೊಬೈಲ್ ಗಳನ್ನು ಟ್ರಾಕ್ ಮಾಡಲು ನಿರ್ಧರಿಸಿದೆ.

ಭಾರತದಲ್ಲಿ ಲಾಕ್​ಡೌನ್​ನಿಂದಾಗಿ ಕೊರೋನಾ ಸೋಂಕಿತರ ಪ್ರಮಾಣ ನಿಯಂತ್ರಣಕ್ಕೆ ಬರುತ್ತಿದೆ. ಆದರೆ, ದೆಹಲಿಯ ನಿಜಾಮುದ್ದೀನ್​ನಲ್ಲಿ ನಡೆದ ಧಾರ್ಮಿಕ ಸಭೆಯಲ್ಲಿ ಭಾಗವಹಿಸಿದ್ದ 10 ಜನ ಕೊರೋನಾದಿಂದ ಸಾವನ್ನಪ್ಪುವ ಮೂಲಕ ದೇಶದಲ್ಲಿ ಕೊರೋನಾ ಸೋಂಕಿತರ ಪ್ರಮಾಣ  ಇನ್ನಷ್ಟು ಹೆಚ್ಚಾಗುವ ಭೀತಿ ಶುರುವಾಗಿದೆ. 4 ಸಾವಿರಕ್ಕೂ ಅಧಿಕ ಜನರು ಪಾಲ್ಗೊಂಡಿದ್ದ ಈ ಧಾರ್ಮಿಕ ಸಭೆಯಲ್ಲಿ ಭಾಗವಹಿಸಿದ್ದವರಿಂದ ದೇಶಾದ್ಯಂತ ಕೊರೋನಾ ಹರಡುವ ಆತಂಕ ಎದುರಾಗಿದೆ.

ಕಳೆದ 24 ಗಂಟೆಗಳಲ್ಲಿ 386 ಕೊರೋನಾ ಸೋಂಕು ಪತ್ತೆ
ದೇಶದಲ್ಲಿ ಕೊರೋನಾ ವೈರಸ್ ಸೋಂಕಿತರ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದ್ದು, ಇದಕ್ಕೆ ಕಳೆದ 24 ಗಂಟೆಯಲ್ಲಿ 386 ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಜಂಟಿ ಕಾರ್ಯದರ್ಶಿ ಲವ ಅಗರ್ ವಾಲ್ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ದೆಹಲಿಯ ತಬ್ಲಿಘಿ ಜಮಾತ್ ನಲ್ಲಿ ಪಾಲ್ಗೊಂಡಿದ್ದವರು ದೇಶಾದ್ಯಂತ ಸಂಚರಿಸಿದ್ದು, ಇದರ ಪರಿಣಾಮ ಸೋಂಕು ಹೆಚ್ಚಾಗಿದೆ. ಒಟ್ಟಾರೆ ಸೋಂಕಿತರ ಸಂಖ್ಯೆ 1,637 ಕ್ಕೆ ಏರಿಕೆಯಾಗಿದ್ದು, 38 ಮಂದಿ ಮೃತಪಟ್ಟಿದ್ದಾರೆ.. ಜಮಾತ್ ನಲ್ಲಿ  ಪಾಲ್ಗೊಂಡಿದ್ದವರನ್ನು ಪತ್ತೆ ಮಾಡಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದರು. ಲಾಕ್ ಡೌನ್ ವಿಚಾರದಲ್ಲಿ ಯಥಾ ಸ್ಥಿತಿ ಕಾಪಾಡಲು ತೀರ್ಮಾನಿಸಲಾಗಿದ್ದು, ಸಾಮಾಜಿಕ ಅಂತರಕ್ಕೆ ಒತ್ತು ನೀಡಲಾಗಿದೆ. ಸಂಪುಟ ಕಾರ್ಯದರ್ಶಿ ಅವರು ಇಂದು ವಿಡಿಯೋ ಸಂವಾದ ನಡೆಸಿದ್ದು, ವಲಸೆ  ಕಾರ್ಯಕರ ಹಿತ ರಕ್ಷಣೆ ಮಾಡುವಂತೆ ಎಲ್ಲಾ ರಾಜ್ಯಗಳಿಗೆ ಸೂಚಿಸಿದ್ದಾರೆ. ರೈಲ್ವೆ ಇಲಾಖೆ ಕೊರೋನಾ ಚಿಕಿತ್ಸೆಗಾಗಿ ಎರಡು ಲಕ್ಷಕ್ಕೂ ಹೆಚ್ಚು ಐಸೋಲೇಷನ್ ಹಾಸಿಗೆಗಳನ್ನು ಸಿದ್ಧಪಡಿಸುವ ಗುರಿ ಹೊಂದಿದ್ದು, ಮೊದಲ ಹಂತದಲ್ಲಿ 20 ಸಾವಿರ ಬೆಡ್ ಗಳು ಸಿದ್ಧವಾಗುತ್ತಿವೆ ಎಂದರು. 

ದೆಹಲಿ ಸರ್ಕಾರದಿಂದ ಮೃತ ವೈದ್ಯಕೀಯ ಸಿಬ್ಬಂದಿಗೆ 1 ಕೋಟಿ ರೂ ಪರಿಹಾರ
ಕೊರೋನಾ ಪೀಡಿತರಿಗೆ ಚಿಕಿತ್ಸೆ ನೀಡುವಾಗ ಮಡಿಯುವ ವೈದ್ಯರಿಗೆ 1 ಕೋಟಿ ರೂ. ಪರಿಹಾರ ನೀಡುವುದಾಗಿ ದೆಹಲಿ ಮುಖ್ಯಮಂತ್ರಿ ಅರವಿಂದ್​​ ಕೇಜ್ರಿವಾಲ್​​​ ಘೋಷಣೆ ಮಾಡಿದ್ದಾರೆ. ಈ ಸಂಬಂಧ ಸುದ್ದಿಗಾರರೊಂದಿಗೆ ಮಾತಾಡಿದ ಅರವಿಂದ್​ ಕೇಜ್ರಿವಾಲ್​​​, ಕೊರೋನಾ  ಸೋಂಕಿತರಿಗೆ ಚಿಕಿತ್ಸೆ ನೀಡುವ ವೈದ್ಯರಿಗೆ ಮತ್ತು ಆರೋಗ್ಯ ಸೇವೆ ಮಾಡುವ ಸಿಬ್ಬಂದಿಗೆ ಮೊದಲು ಸೋಂಕು ತಗಲುವ ಸಾಧ್ಯತೆ ಇದೆ. ಇದರಿಂದ ಜೀವಕ್ಕೆ ಅಪಾಯವಿದೆ ಎಂದು ಹಲವರಲ್ಲಿ ಆತಂಕ ಇದೆ. ಇಂತವರಿಗೆ ಧೈರ್ಯ ತುಂಬುವ ಸಲುವಾಗಿ ಒಂದು ವೇಳೆ ಆರೋಗ್ಯ ಸೇವೆಯಲ್ಲಿ  ಯಾರಾದರೂ ಮಡಿದರೇ ದೆಹಲಿ ಸರ್ಕಾರ 1 ಕೋಟಿ. ರೂ ಪರಿಹಾರ ನೀಡಲಿದೆ ಎಂದು ಪ್ರಕಟಿಸಿದ್ದಾರೆ.

SCROLL FOR NEXT