ದೇಶ

ಕೊವಿಡ್-19: ತಮಿಳುನಾಡಿನಲ್ಲಿ 75 ಹೊಸ ಪ್ರಕರಣ ಪತ್ತೆ, ಈ ಪೈಕಿ 74 ಮಂದಿ ಜಮಾತ್ ಸಭೆಯಲ್ಲಿ ಭಾಗಿ

Lingaraj Badiger

ಚೆನ್ನೈ: ದೆಹಲಿಯ ನಿಜಾಮುದ್ದೀನ್ ನಂಜು ದೇಶಾದ್ಯಂತ ವಿಶೇಷವಾಗಿ ತಮಿಳುನಾಡಿನಲ್ಲಿ ತೀವ್ರ ವ್ಯಾಪಕವಾಗಿ ಹರಡುತ್ತಿದ್ದು, ಗುರುವಾರ ಮತ್ತೆ 75 ಮಂದಿಗೆ ಕೊರೋನಾ ವೈರಸ್ ಪಾಸಿಟಿವ್ ದೃಢಪಟ್ಟಿದೆ. ಈ ಪೈಕಿ 74 ಮಂದಿ ದೆಹಲಿಯ ನಿಜಾಮುದ್ದೀನ್ ನಲ್ಲಿ ನಡೆದ ತಬ್ಲಿಘಿ ಜಮಾತ್ ಸಭೆಯಲ್ಲಿ ಭಾಗವಹಿಸಿದ್ದರು.

ನಿನ್ನೆಯಷ್ಟೇ ಕಳೆದ ಮಾರ್ಚ್ ತಿಂಗಳಲ್ಲಿ ದೆಹಲಿಯ ನಿಜಾಮುದ್ದೀನ್ ನಲ್ಲಿ ನಡೆದ ತಬ್ಲಿಘಿ ಜಮಾತ್ ಧಾರ್ಮಿಕ ಸಭೆಯಲ್ಲಿ ಭಾಗವಹಿಸಿದ್ದ ತಮಿಳುನಾಡಿನ 110 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿತ್ತು. ಇಂದು ಮತ್ತೆ 75 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 309ಕ್ಕೆ ಏರಿಕೆಯಾಗಿದೆ.

ಜಮಾತ್ ಸಭೆಯಲ್ಲಿ ಭಾಗವಹಿಸಿದ ಎಲ್ಲರೂ ಸ್ವಯಂ ಪ್ರೇರಿತವಾಗಿ ತಪಾಸಣೆಗೆ ಒಳಗಾಗಿ ಎಂದು ತಮಿಳುನಾಡು ಸರ್ಕಾರ ಕರೆ ನೀಡಿದ ಹಿನ್ನೆಲೆಯಲ್ಲಿ ರಾಜ್ಯದ 15 ಜಿಲ್ಲೆಗಳ ಜನರನ್ನು ತಪಾಸಣೆಗೆ ಒಳಪಡಿಸಲಾಗಿದ್ದು, ನಿನ್ನೆ 15 ಜಿಲ್ಲೆಗಳ 110 ಮಂದಿಯ ವರದಿ ಇಂದು 75 ಮಂದಿಯ ವರದಿ ಪಾಸಿಟಿವ್ ಬಂದಿದೆ.

ತಮಿಳುನಾಡಿನಿಂದ ಸುಮಾರು 1500 ಮಂದಿ ದೆಹಲಿಯ ಜಮಾತ್ ಸಭೆಯಲ್ಲಿ ಭಾಗವಹಿಸಿದ್ದಾರೆ ಎನ್ನಲಾಗಿದ್ದು, ತಮಿಳುನಾಡು ಸರ್ಕಾರ ಈ ಎಲ್ಲರನ್ನು ಗುರುತಿಸಿ, ಪರೀಕ್ಷೆಗೆ ಒಳಪಡಿಸಬೇಕಾಗಿದೆ.

ಜಮಾತ್ ಸಭೆಯಲ್ಲಿ ದೇಶದ ವಿವಿಧ ರಾಜ್ಯಗಳಿಂದ ಸುಮಾರು 2,000ಕ್ಕೂ ಅಧಿಕ ಜನರು ಪಾಲ್ಗೊಂಡಿದ್ದರು. ಮಾ. 13ರಿಂದ 15ರವರೆಗೆ ಈ ಸಭೆ ನಡೆದಿತ್ತು. ಇದೀಗ ಸಭೆಯಲ್ಲಿ ಭಾಗವಹಿಸಿದ್ದ ತಮಿಳುನಾಡಿನ 110 ಮಂದಿಯನ್ನು ಪರೀಕ್ಷೆಗೆ ಒಳಪಡಿಸಿದಾಗ ಸೋಂಕು ತಗುಲಿರುವುದು ದೃಢಪಟ್ಟಿದೆ.

SCROLL FOR NEXT