ದೇಶ

ಕೊರೋನಾ ಸೋಂಕು ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ: ವೀಡಿಯೋ ಸಂವಾದದಲ್ಲಿ ಪ್ರಧಾನಿ ಮೋದಿ

Manjula VN

ನವದೆಹಲಿ: ದೇಶದಲ್ಲಿ ಭಾರೀ ಆತಂಕ ಸೃಷ್ಟಿಸಿರುವ ಕೊರೋನಾ ವೈರಸ್ ನಿಯಂತ್ರಣ ಕ್ರಮಗಳನ್ನು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿ ರಾಜ್ಯ ಸರ್ಕಾರಗಳಿಗೆ ಕಟ್ಟಾದೇಶ ಮಾಡಿದ್ದಾರೆ.

ಕೋವಿಡ್-19 ವೈರಸ್ ಸೋಂಕು ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳ ಕುರಿತು ಪ್ರಧಾನಿ ಅವರು ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಇಂದು ವೀಡಿಯೋ ಸಂವಾದ ನಡೆಸಿದರು.

ಕೊರೋನಾ ವೈರಸ್ ಸಮಸ್ಯೆ ಕಾಣಿಸಿಕೊಂಡ ನಂತರ ಮೋದಿ ಅವರು ನಡೆಸಿದ ಎರಡನೇ ವಿಡಿಯೋ ಸಂವಾದ ಇದಾಗಿದೆ.

ದೇಶ ಎದುರಿಸುತ್ತಿರುವ ಸವಾಲುಗಳು, ಕೊರೋನಾ ಸಮಸ್ಯೆ ನಿಭಾಯಿಸುವ ಬಗೆ, ಇದಕ್ಕೆ ರಾಜ್ಯ ಸರ್ಕಾರಗಳ ಸಹಕಾರ ಕುರಿತು ಸೂಕ್ತ ಸಲಹೆ, ಸೂಚನೆ ನೀಡಿದರು.

ದೆಹಲಿಯ ತಬ್ಲಿಕ್ ಜಮಾತ್ ನ ಧಾರ್ಮಿಕ ಕಾರ್ಯಕ್ರಮದಲ್ಲಿ ಹೆಚ್ಚಿನ ಜನ ಪಾಲ್ಗೊಂಡ ನಂತರದ ಪರಿಸ್ಥಿತಿ, ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದವರನ್ನು ಪತ್ತೆಮಾಡಿ ಪರೀಕ್ಷೆಗೊಳಪಡಿಸುವ ಕುರಿತಂತೆಯೂ ಸೂಚನೆ ನೀಡದ್ದಾರೆ.

ಮಹಾರಾಷ್ಟ್ರ, ಕೇರಳ, ಉತ್ತರ ಪ್ರದೇಶಗಳಲ್ಲಿ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದ್ದು, ಸೂಕ್ತ ಪ್ರತಿಬಂಧಕ ಕ್ರಮಗಳನ್ನು ಕೈಗೊಳ್ಳುವಂತೆ ಪ್ರಧಾನಿ ಅವರು ಸೂಚಿಸಿದ್ದಾರೆ.

ಸಾಮಾಜಿಕ ಅಂತರ ಕಾಯ್ದುಕೊಳ್ಳುವ, ಜನ ಸಾಮಾನ್ಯರಿಗೆ ಅಗತ್ಯ ವಸ್ತುಗಳ ಪೂರೈಕೆ ಮತ್ತಿತರ ವಿಚಾರಗಳ ಕುರಿತು ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳಿಂದ ಪ್ರಧಾನಿ ಮಾಹಿತಿ ಪಡೆದರು.

ವಿಡಿಯೋ ಸಂವಾದದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಮಧ್ಯಪ್ರದೇಶ ನೂತನ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚವ್ಹಾಣ್, ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಮತ್ತಿತತರು ಪಾಲ್ಗೊಂಡಿದ್ದರು.

ವಿಡಿಯೋ ಸಂವಾದದಲ್ಲಿ ಗೃಹ ಸಚಿವ ಅಮಿತ್ ಷಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಆರೋಗ್ಯ ಸಚಿವ ಡಾ. ಹರ್ಷವರ್ಧನ್, ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು.

ದೇಶದಲ್ಲಿ ಹೊಸ 298 ಪ್ರಕರಣಗಳು ದೃಢಪಡುವುದರೊಂದಿಗೆ ಸೋಂಕಿತ ಒಟ್ಟು ಪ್ರಕರಣಗಳ ಸಂಖ್ಯೆ 1,965 ಕ್ಕೆ ಏರಿದೆ.

ದೇಶಾದ್ಯಂತ ಇನ್ನೂ 12 ಸಾವುಗಳು ವರದಿಯಾಗಿದ್ದು, ಒಟ್ಟು ಸಾವಿನ ಸಂಖ್ಯೆ 50 ಕ್ಕೆ ತಲುಪಿದೆ ಎಂದು ಸರ್ಕಾರ ತಿಳಿಸಿದೆ.

ಗುರುವಾರ ಬೆಳಿಗ್ಗೆವರೆಗೆ ಸಕ್ರಿಯ ಕೊವಿದ್‍-19 ಪ್ರಕರಣಗಳ ಸಂಖ್ಯೆ 1,764 ರಷ್ಟಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.

ಒಟ್ಟು 150 ಪ್ರಕರಣಗಳನ್ನು ಗುಣಪಡಿಸಲಾಗಿದ್ದು, ಆಸ್ಪತ್ರೆಯಿಂದ ಮನೆಗೆ ಕಳುಹಿಸಲಾಗಿದೆ ಎಂದು ಎಂದು ಸಚಿವಾಲಯ ತಿಳಿಸಿದೆ.
 

SCROLL FOR NEXT