ದೇಶ

ನಿಜಾಮುದ್ದೀನ್ ನಿಂದ ಸ್ಥಳಾಂತರಿಸಿದವರಲ್ಲಿ ಇಬ್ಬರು ಕೊರೋನಾ ವೈರಸ್ ನಿಂದ ಸಾವು: ಕೇಜ್ರಿವಾಲ್

Lingaraj Badiger

ನವದೆಹಲಿ: ದೆಹಲಿಯಲ್ಲಿ ಕೊರೋನಾ ವೈರಸ್ ಹಾಟ್ ಸ್ಪಾಟ್ ಆಗಿರುವ ನಿಜಾಮುದ್ದೀನ್ ಮರ್ಕಝ್ ನಿಂದ ಸ್ಥಳಾಂತರಿಸಲಾಗಿದ್ದವರ ಪೈಕಿ ಇಬ್ಬರು ಕೊವಿಡ್-19 ನಿಂದ ಮೃತಪಟ್ಟಿದ್ದಾರೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಗುರುವಾರ ಹೇಳಿದ್ದಾರೆ.

ಇಂದು ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಕೇಜ್ರಿವಾಲ್, ನಿಜಾಮುದ್ದೀನ್ ಮರ್ಕಝ್ ನಿಂದ ಒಟ್ಟು 2,346 ಮಂದಿಯನ್ನು ಸ್ಥಳಾಂತರಿಸಲಾಗಿದ್ದು, ಈ ಪೈಕಿ 108 ಮಂದಿಗೆ ಕೊರೋನಾ ವೈರಸ್ ಪಾಸಿಟಿವ್ ದೃಢಪಟ್ಟಿದೆ. ಇಂದು ಇಬ್ಬರು ಮೃತಪಟ್ಟಿದ್ದಾರೆ ಎಂದು ತಿಳಿಸಿದರು.

ಮರ್ಕಝ್ ನ ತಬ್ಲಿಘಿ ಜಮಾತ್ ಸಭೆಯಲ್ಲಿ ಭಾಗವಹಿಸಿದ್ದ ಎಲ್ಲರನ್ನೂ ಸರ್ಕಾರ ಪರೀಕ್ಷೆಗೆ ಒಳಪಡಿಸುತ್ತಿದ್ದು, ರಾಜ್ಯದಲ್ಲಿ ಕೊವಿಡ್-19 ಪ್ರಕರಣಗಳ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದಿದ್ದಾರೆ.

ದೆಹಲಿಯಲ್ಲಿ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ 219ಕ್ಕೆ ಏರಿಕೆಯಾಗಿದ್ದು, ಇದುವರೆಗೆ ನಾಲ್ವರು ಮೃತಪಟ್ಟಿದ್ದಾರೆ. 208 ಜನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, 202 ಜನರ ಆರೋಗ್ಯ ಸ್ಥಿರವಾಗಿದೆ. ಉಳಿದವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಎಂದು ದೆಹಲಿ ಸಿಎಂ ತಿಳಿಸಿದರು.

SCROLL FOR NEXT