ಲಖನೌ: ಕೊರೋನಾವೈರಸ್ ಲಾಕ್ ಡೌನ್ ಮಧ್ಯೆ ರಾಜ್ಯದಲ್ಲಿ ಪೊಲೀಸ್ ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸುವವರ ವಿರುದ್ಧ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಕಠಿಣ ಕ್ರಮ ಕೈಗೊಳ್ಳುವಂತೆ ಉತ್ತರ ಪ್ರದೇಶ ಸರ್ಕಾರ ನಿರ್ದೇಶನ ನೀಡಿದೆ.
ಆರೋಪಿಗಳ ವಿರುದ್ಧ ಎನ್ಎಸ್ಎ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗುವುದು ಎಂದು ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರ ಹೇಳಿದ್ದು "ಲಾಕ್ ಡೌನ್ ಸಮಯದಲ್ಲಿ, ರಾಜ್ಯದ ಯಾವುದೇ ಸ್ಥಳದಲ್ಲಿ ಪೊಲೀಸರ ಮೇಲೆ ಹಲ್ಲೆ ನಡೆಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಅವರ ಮೇಲೆ ಎನ್ಎಸ್ಎ ಅಡಿಯಲ್ಲಿ ಪ್ರಕರಣ ದಾಖಲಿಸಲಾಗುವುದು" ಎಂದು ಅದು ಹೇಳಿದೆ.
ಈ ಹಿಂದೆ, ಮಧ್ಯಪ್ರದೇಶ ಸರ್ಕಾರವು ಆರೋಗ್ಯ ಕಾರ್ಯಕರ್ತರು ಅಥವಾ ಪೊಲೀಸರ ಮೇಲೆ ಹಲ್ಲೆ ನಡೆಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಬಗ್ಗೆ ಎಚ್ಚರಿಕೆ ನೀಡಿತ್ತು. ದೇಶದ ಹಲವಾರು ಭಾಗಗಳಲ್ಲಿ, ಶಂಕಿತ ಕೋವಿಡ್-19 ರೋಗಿಗಳು ಸ್ಥಳೀಯರೊಂದಿಗೆ ಆರೋಗ್ಯ ಕಾರ್ಯಕರ್ತರು ಮತ್ತು ತಮ್ಮ ಪ್ರದೇಶಗಳಿಗೆ ಭೇಟಿ ನೀಡುವ ಪೊಲೀಸರ ಮೇಲೆ ಹಲ್ಲೆ ನಡೆಸುತ್ತಿದ್ದಾರೆ
ಉತ್ತರ ಪ್ರದೇಶದ ರಾಂಪುರದ ತಾಂಡಾ ಪ್ರದೇಶದಲ್ಲಿ ಅಧಿಕಾರಿಗಳ ಮೇಲೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ ಹಿನ್ನೆಲೆಯಲ್ಲಿ ನಿನ್ನೆ ಮೂವರನ್ನು ವಶಕ್ಕೆ ಪಡೆಯಲಾಗಿದೆ.