ನವದೆಹಲಿ: ಜಗತ್ತಿನಾದ್ಯಂತ ತೀವ್ರ ಆತಂಕ ಹಾಗೂ ಭಯ ಭೀತಿ ಸೃಷ್ಟಿಸಿರುವ ಮಾರಕ ಕೊರೋನಾವೈರಸ್ ಸೋಂಕಿತರ ಸಂಖ್ಯೆ ದೇಶದಲ್ಲಿಯೂ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.
ಇಂದು ವಿವಿಧೆಡೆ ಮೂರು ಸಾವುಗಳ ವರದಿಯೊಂದಿಗೆ ಈ ಸೋಂಕಿನಿಂದ ಒಟ್ಟಾರೇ ಮೃತಪಟ್ಟವರ ಸಂಖ್ಯೆ 114ಕ್ಕೆ ಏರಿಕೆ ಆಗಿದ್ದು, ಸೋಂಕಿತರ ಸಂಖ್ಯೆ 4421ಕ್ಕೆ ಏರಿಕೆ ಆಗಿದೆ. ನಿನ್ನೆ ದಿನ 704 ಕೊರೋನಾವೈರಸ್ ಸೋಂಕಿನ ಪ್ರಕರಣಗಳು ಹಾಗೂ 28 ಸಾವಿನ ಪ್ರಕರಣಗಳು ವರದಿಯಾಗಿದ್ದವು.
ಕಳೆದ 24 ಗಂಟೆಗಳ ಅವಧಿಯಲ್ಲಿ ಭಾರಿ ಸಂಖ್ಯೆಯಲ್ಲಿ ಸೋಂಕಿತರ ಸಂಖ್ಯೆಯಲ್ಲಿ ಏರಿಕೆಯಾಗಿದ್ದು, ಲಾಕ್ ಡೌನ್ ವಿಸ್ತರಣೆಗೆ ತೆಲಂಗಾಣದ ಮುಖ್ಯಮಂತ್ರಿ ಚಂದ್ರಶೇಖರ್ ರಾವ್ ಸೇರಿದಂತೆ ಹಲವು ರಾಜ್ಯಗಳು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಿವೆ.
ರಾಜ್ಯ ಸರ್ಕಾರಗಳ ಜೊತೆಗೆ ವಿವಿಧ ಕ್ಷೇತ್ರಗಳ ತಜ್ಞರು ಕೂಡಾ ಲಾಕ್ ಡೌನ್ ವಿಸ್ತರಿಸುವಂತೆ ಕೇಂದ್ರ ಸರ್ಕಾರದ ಬಳಿ ಮನವಿ ಮಾಡಿಕೊಂಡಿದ್ದಾರೆ. ತೀವ್ರ ಒತ್ತಡಗಳ ಬೆನ್ನಲ್ಲೇ, ಕೇಂದ್ರ ಸರ್ಕಾರ ಕೂಡಾ ಲಾಕ್ ಡೌನ್ ವಿಸ್ತರಣೆಗೆ ಚಿಂತನೆ ನಡೆಸಿದೆ ಎಂಬುದು ಸರ್ಕಾರದ ಮೂಲಗಳಿಂದ ತಿಳಿದುಬಂದಿದೆ.