ಬೆಂಗಳೂರು: ಕರ್ನಾಟಕ, ಮಹಾರಾಷ್ಟ್ರ, ತೆಲಂಗಾಣ ಸೇರಿದಂತೆ ದೇಶದ ಒಟ್ಟು 6 ರಾಜ್ಯಗಳು ಏಪ್ರಿಲ್.30ರ ವರೆಗೂ ಲಾಕ್'ಡೌನ್ ವಿಸ್ತರಣೆ ಮಾಡಿದ್ದು, ಕೊರೋನಾ ವೈರಸ್ ಮಟ್ಟಹಾಕಲು ದಿಟ್ಟ ಕ್ರಮಗಳನ್ನು ಕೈಗೊಳ್ಳುತ್ತಿವೆ. ಈ ನಡುವೆ ದೇಶದಲ್ಲಿ ಸೋಂಕಿತರ ಸಂಖ್ಯೆ 7,529ಕ್ಕೆ ಏರಿಕೆಯಾಗಿದ್ದು, ಸಾವಿನ ಸಂಖ್ಯೆ 250 ತಲುಪಿದೆ.
ಕೇಂದ್ರ ಸರ್ಕಾರ ಘೋಷಣೆ ಮಾಡಿದ್ದ ದೇಶದಾದ್ಯಂತ ಲಾಕ್'ಡೌನ್ ಏಪ್ರಿಲ್ 14ಕ್ಕೆ ಅಂತ್ಯಗೊಳ್ಳಲಿದ್ದು, ಈ ಹಿನ್ನೆಲೆಯಲ್ಲಿ ನಿನ್ನೆಯಷ್ಟೇ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತುಕತೆ ನಡೆಸಿದ್ದರು,
ಈ ವೇಳೆ ಹಲವು ರಾಜ್ಯಗಳ ಮುಖ್ಯಮಂತ್ರಿಗಳು ಲಾಕ್'ಡೌನ್ ವಿಸ್ತರಿಸುವಂತೆ ಮನವಿ ಮಾಡಿಕೊಂಡಿದ್ದು, ಲಾಕ್'ಡೌನ್ ವಿಸ್ತರಣೆ ಕುರಿತಂತೆ ಮಾತುಕತೆ ನಡೆಸಿದ್ದಾರೆಂದು ಹೇಳಲಾಗುತ್ತಿದೆ.
ಮೋದಿ ಜೊತೆಗಿನ ಮಾತುಕತೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕರ್ನಾಟಕ ಮುಖ್ಯಮಂತ್ರಿ ಯಡಿಯೂರಪ್ಪ ಅವರು, ಏಪ್ರಿಲ್ 30ರವರೆಗೂ ಲಾಕ್'ಡೌನ್ ವಿಸ್ತರಣೆ ಮಾಡುವುದಾಗಿ ಘೋಷಣೆ ಮಾಡಿದ್ದರು. ಇದಾದ ಬಳಿಕ ಒಡಿಶಾ, ಪಂಜಾಬ್, ಪಶ್ಚಿಮಬಂಗಾಳ, ಮಹಾರಾಷ್ಟ್ರ ಹಾಗೂ ತೆಲಂಗಾಣ ರಾಜ್ಯಗಳೂ ಕೂಡ ಲಾಕ್'ಡೌನ್ ವಿಸ್ತರಣೆ ಮಾಡಿತ್ತು.
ಈ ನಡುವೆ ದೇಶದಲ್ಲಿ ಶನಿವಾರ ಒಂದೇ ದಿನದಲ್ಲಿ ವೈರಸ್'ಗೆ 40 ಮಂದಿ ಸಾವನ್ನಪ್ಪಿದ್ದು, ಹೊಸದಾಗಿ 1,035 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಇದರಂತೆ ದೇಶದಲ್ಲಿ ಸೋಂಕಿತರ ಸಂಖ್ಯೆ ಸಂಖ್ಯೆ 7,529ಕ್ಕೆ ಏರಿಕೆಯಾಗಿದ್ದು, ಸಾವಿನ ಸಂಖ್ಯೆ 250 ತಲುಪಿದೆ.