ದೇಶ

ಆಂಧ್ರ ಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ: ನಾಲ್ವರು ಮಕ್ಕಳ ಸಾವು, 15 ಮಂದಿಗೆ ಗಾಯ

Srinivasamurthy VN

ಕರ್ನೂಲ್: ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ದುರ್ಘಟನೆಯಲ್ಲಿ ನಾಲ್ವರು ಮಕ್ಕಳು ಸಾವನ್ನಪ್ಪಿ 15ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಂಗಳವಾರ ಸಂಭವಿಸಿದೆ. 

ಕ್ರಿಸ್ಮಸ್ ಹಬ್ಬ ಹತ್ತಿರ ಬರುತ್ತಿರುವ ಹಿನ್ನೆಲೆಯಲ್ಲಿ ಯೆರ್ರಾಕುಂಟ್ಲಾದ ಸ್ಥಳೀಯರು ಹಾಗೂ 30 ಮಕ್ಕಳು ಪ್ರಾರ್ಥನೆ ಸಲ್ಲಿಸುವ ಸಲುವಾಗಿ ಇಂದು ಬೆಳಗಿನ ಜಾವ 4.30ರ ಸುಮಾರಿಗೆ ಚರ್ಚೆಗೆ ತೆರಳುತ್ತಿದ್ದರು. ಈ ವೇಳೆ ಕರ್ನೂಲ್-ಚಿತ್ತೂರಿ ಹೆದ್ದಾರಿ ದಾಟುವ ವೇಳೆ ವ್ಯಾನ್ ವೊಂದು ವೇಗವಾಗಿ ಬಂದಿದ್ದು, ರಭಸದಿಂದ ಡಿಕ್ಕಿ ಹೊಡೆದಿದೆ. 

ಪರಿಣಾಮ ಇಬ್ಬರು ಮಕ್ಕಳು ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಮತ್ತಿಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆಂದು ವರದಿಗಳು ತಿಳಿಸಿವೆ. 

ಅಲ್ಲದೆ, ಘಟನೆಯಲ್ಲಿ 15 ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಇದರಲ್ಲಿ ದಂಪತಿಗಳಿಬ್ಬರ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ. 

ಬೆಳಗಿನ ಜಾವವಾಗಿದ್ದರಿಂದ ಮಂಜಿನ ವಾತಾವರಣವಿತ್ತು. ಪರಿಣಾಮ ದುರ್ಘಟನೆ ಸಂಭವಿಸಿದೆ ಎಂದು ಪೊಲೀಸರು ಹೇಳಿದ್ದಾರೆ. 

ಮಕ್ಕಳಿಗೆ ಡಿಕ್ಕಿ ಹೊಡೆದ ಬಳಿಕವು ವ್ಯಾನ್ ಚಾಲಕ ವಾಹನವನ್ನು ನಿಲ್ಲಿಸದೇ ಮುಂದಕ್ಕೆ ಸಾಗಿದ್ದ. ಈ ವೇಳೆ ಸ್ಥಳೀಯರು ವಾಹನವನ್ನು ಹಿಂಬಾಲಿಸಿ ಹೋಗಿ ಚಾಲಕನನ್ನು ಹಿಡಿದಿದ್ದರು. ಬಳಿಕ ಪೊಲೀಸರ ವಶಕ್ಕೆ ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ. 

SCROLL FOR NEXT