ದೇಶ

ಮಮತಾಗೆ ಬಿಗ್ ಶಾಕ್: ಟಿಎಂಸಿ ತೊರೆದ ಮತ್ತೊಬ್ಬ ಶಾಸಕಿ, 48 ಗಂಟೆಗಳಲ್ಲಿ ನಾಲ್ವರು ದೀದಿಗೆ ಗುಡ್ ಬೈ

Lingaraj Badiger

ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಕೇವಲ ಐದು ತಿಂಗಳು ಬಾಕಿ ಇರುವಂತೆಯೇ ಪಕ್ಷಾಂತರ ಪರ್ವ ಆರಂಭವಾಗಿದ್ದು, ಒಬ್ಬರಾದ ನಂತರ ಮತ್ತೊಬ್ಬರಂತೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ತೃಣಮೂಲ ಕಾಂಗ್ರೆಸ್ ಶಾಸಕರು ಪಕ್ಷ ತೊರೆಯುತ್ತಿದ್ದಾರೆ. ಮೂವರು ಶಾಸಕರು ರಾಜೀನಾಮೆ ನೀಡಿದ ಬೆನ್ನಲ್ಲೇ ಈಗ ಮತ್ತೋರ್ವ ಶಾಸಕರು ಸಹ ದೀದಿಗೆ ಗುಡ್ ಬೈ ಹೇಳಿದ್ದಾರೆ.

ಇಂದು ಸಂಜೆ ಟಿಎಂಸಿ ಶಾಸಕ ಬನಶ್ರೀ ಮೈಟಿ ಅವರು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದು, ಇ-ಮೇಲ್ ಮೂಲಕ ತಮ್ಮ ರಾಜೀನಾಮೆ ಪತ್ರವನ್ನು ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರಿಗೆ ರವಾನಿಸಿರುವುದಾಗಿ ಹೇಳಿದ್ದಾರೆ. ಇದರೊಂದಿಗೆ ಕಳೆದ 48 ಗಂಟೆಗಳಲ್ಲಿ ಟಿಎಂಸಿಯ ನಾಲ್ವರು ಶಾಸಕರು ರಾಜೀನಾಮೆ ನೀಡಿದಂತಾಗಿದೆ.

ತೃಣಮೂಲ ಕಾಂಗ್ರೆಸ್ ಪಕ್ಷದ ಶಾಸಕ ಶಿಲ್ಭದ್ರ ದತ್ತ ಇಂದು ಬೆಳಗ್ಗೆ ಟಿಎಂಸಿ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ನಿನ್ನೆಯಷ್ಟೇ ಸುವೇಂದು ಅಧಿಕಾರಿ ಮತ್ತು ಜಿತೇಂದ್ರ ತಿವಾರಿ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದರು.

ಅಖಿಲ ಭಾರತ ತೃಣಮೂಲ ಕಾಂಗ್ರೆಸ್ ನ ಪ್ರಾಥಮಿಕ ಸದಸ್ಯತ್ವಕ್ಕೆ ಮತ್ತು ಪಕ್ಷದಲ್ಲಿ ನನಗೆ ನೀಡಲಾಗಿರುವ ಎಲ್ಲಾ ಹುದ್ದೆಗಳಿಗೂ ರಾಜೀನಾಮೆ ನೀಡುತ್ತೇನೆ" ಎಂದು ಮೈಟಿ ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ.

2016ರ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಸುವೇಂದು ಅಧಿಕಾರಿ ಬಿಜೆಪಿ ಮುಖಂಡರನ್ನು ಭೇಟಿ ಮಾಡಿದ ಬೆನ್ನಲ್ಲೇ, ಅವರ ಹಲವು ಆಪ್ತ ಶಾಸಕರು ಬಿಜೆಪಿಯತ್ತ ಮುಖ ಮಾಡಿದ್ದಾರೆ ಎನ್ನಲಾಗಿದೆ.

SCROLL FOR NEXT