ನವದೆಹಲಿ: ಉತ್ತರ ಪ್ರದೇಶದಲ್ಲಿ ಮಹಿಳಾ ಸುರಕ್ಷತೆ ವಿಚಾರವಾಗಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ, ಬಿಜೆಪಿ ಅಧಿಕಾರಕ್ಕೆ ಬಂದ ನಂತರ ರಾಜ್ಯದಲ್ಲಿ ಅಪರಾಧಗಳ ಸಂಖ್ಯೆ ಹೆಚ್ಚಳವಾಗಿದೆ ಎಂದು ಆರೋಪಿಸಿದ್ದಾರೆ.
ಉತ್ತರ ಪ್ರದೇಶದಲ್ಲಿ ಪ್ರತಿನಿತ್ಯ ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣಗಳು ನಡೆಯುತ್ತಿವೆ. ಪಿರೋಜಾಬಾದ್ ನಲ್ಲಿ ಅತ್ಯಾಚಾರಕ್ಕೊಳಗಾದ ಸಂತ್ರಸ್ತೆಯ ತಂದೆಯನ್ನು ಹತ್ಯೆ ಮಾಡಲಾಗಿದೆ. ಸಿತಾಪುರದಲ್ಲಿ ಯುವತಿ ಮೇಲೆ ಅತ್ಯಾಚಾರವೆಸಗಿ ಹತ್ಯೆ ಮಾಡಲಾಗಿದೆ ಎಲ್ಲಿದೆ ಸರ್ಕಾರ ಎಂದು ಪ್ರಶ್ನಿಸಿರುವ ಪ್ರಿಯಾಂಕಾ, ಬಿಜೆಪಿ ಸರ್ಕಾರದ ಅಡಿಯಲ್ಲಿ ಮಹಿಳೆಯರ ಮೇಲೆ ಅಪರಾಧಗಳು ಹೆಚ್ಚಾಗಿ ನಡೆಯುತ್ತಿವೆ ಆದರೆ, ಆದರೆ ಯಾರೂ ಕೂಡಾ ಜವಾಬ್ದಾರಿ ತೆಗೆದುಕೊಳ್ಳುತ್ತಿಲ್ಲ ಎಂದು ಟ್ವಿಟರ್ ನಲ್ಲಿ ಪ್ರಿಯಾಂಕಾ ವಾಗ್ದಾಳಿ ನಡೆಸಿದ್ದಾರೆ.
ಕಬ್ಬು ಬೆಳೆಗಾರರಿಗೆ ಬಾಕಿ ಪಾವತಿ ವಿಳಂಬ, ಭತ್ತ ಖರೀದಿಯಲ್ಲಿ ನಿರ್ಲಕ್ಷ್ಯ, ಬುಂದೇಲ್ ಕಂಡದಲ್ಲಿ ರೈತರ ಆತ್ಮಹತ್ಯೆ ಮತ್ತಿತರ ವಿಚಾರಗಳನ್ನು ಪ್ರಸ್ತಾಪಿಸುವ ಮೂಲಕ ಪ್ರಿಯಾಂಕಾ ಗಾಂಧಿ, ಯೋಗಿ ಆದಿತ್ಯನಾಥ್ ಸರ್ಕಾರವನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ.
ರಾಜ್ಯದಲ್ಲಿ ಯುವಕರು ಹಾಗೂ ಯುವತಿಯರನ್ನು ಸಮಾನ ರೀತಿಯಲ್ಲಿ ನೋಡಲಾಗುತ್ತಿದೆ ಯಾವುದೇ ತಾರತಮ್ಯ ಮಾಡುತ್ತಿಲ್ಲ ಎಂದು ಯೋಗಿ ಆದಿತ್ಯನಾಥ್ ಹೇಳಿಕೆ ನೀಡಿದ್ದರು.