ದೇಶ

ಅಮಿತ್ ಶಾ ಭೇಟಿ ಮಾಡಿದ ಕೇಜ್ರಿವಾಲ್, ದೆಹಲಿಗೆ ಸಂಬಂಧಿಸಿದ ವಿಷಯಗಳ ಕುರಿತು ಚರ್ಚೆ

Lingaraj Badiger

ನವದೆಹಲಿ: ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿ ಮೂರನೇ ಬಾರಿ ರಾಷ್ಟ್ರ ರಾಜಧಾನಿಯ ಮುಖ್ಯಮಂತ್ರಿಯಾದ ನಂತರ ಮೊದಲ ಬಾರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ ಅರವಿಂದ್ ಕೇಜ್ರಿವಾಲ್ ಅವರು, ದೆಹಲಿ ಅಭಿವೃದ್ಧಿಗೆ ಸಂಬಂಧಿಸಿದಂತೆ ಚರ್ಚಿಸಿದ್ದಾರೆ.
  
‘ಮಾನ್ಯ ಗೃಹ ಸಚಿವರಾದ ಅಮಿತ್ ಶಾ ಜಿ ಅವರನ್ನು ಭೇಟಿ ಮಾಡಿದೆ. ತುಂಬಾ ಉತ್ತಮ ಮತ್ತು ಫಲಪ್ರದ ಮಾತುಕತೆ ನಡೆಸಿದ್ದೇವೆ. ದೆಹಲಿಗೆ ಸಂಬಂಧಿಸಿದ ಹಲವಾರು ವಿಷಯಗಳ ಬಗ್ಗೆ ಚರ್ಚಿಸಿದ್ದೇವೆ. ದೆಹಲಿಯ ಅಭಿವೃದ್ಧಿಗೆ ಜತೆಗೂಡಿ ಕೆಲಸ ಮಾಡುವುದಾಗಿ ಇಬ್ಬರೂ ಒಪ್ಪಿದ್ದೇವೆ’ ಎಂದು ಸಭೆಯ ನಂತರ ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ.
  
ಫೆ.16 ರಂದು ರಾಮ್ ಲೀಲಾ ಮೈದಾನದಲ್ಲಿ ಆಮ್ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ ಸಂಚಾಲಕರಾದ ಕೇಜ್ರಿವಾಲ್ ಸತತ ಮೂರನೇ ರಾಷ್ಟ್ರ ರಾಜಧಾನಿಯ ಗದ್ದುಗೆಗೆ ಏರಿದ್ದರು.
  
70 ಸದಸ್ಯ ಬಲದ ದೆಹಲಿ ವಿಧಾನಸಭೆಯ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ 62 ಸ್ಥಾನಗಳನ್ನು ಪಡೆದರೆ, ಬಿಜೆಪಿ ಎಂಟು ಸ್ಥಾನಗಳನ್ನು ಗಳಿಸಿದೆ. ಕೇಜ್ರಿವಾಲ್ ವಿರುದ್ಧ ಬಿಜೆಪಿಯ ಆಕ್ರಮಣಕಾರಿ ಪ್ರಚಾರದ ನೇತೃತ್ವ ವಹಿಸಿದ್ದ  ಅಮಿತ್ ಶಾ ಅವರು, ಚುನಾವಣೆಗಳ ಸಂದರ್ಭದಲ್ಲಿ ಬಿಜೆಪಿ ನಾಯಕರು ಅವಹೇಳನಾಕಾರಿ ಭಾಷಣಗಳನ್ನು ಮಾಡಬಾರದು ಎಂದು ಹೇಳಿದ್ದರು.

SCROLL FOR NEXT