ದೇಶ

ದೆಹಲಿಯಲ್ಲಿ ಭುಗಿಲೆದ್ದ ಹಿಂಸಾಚಾರ: ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರತ ವರ್ಚಸ್ಸಿಗೆ ಧಕ್ಕೆ ತರಲು ಪಿತೂರಿ- ಗೃಹ ಸಚಿವಾಲಯ

Manjula VN

ನವದೆಹಲಿ: ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ದೆಹಲಿಯಲ್ಲಿ ಹಿಂಸಾಚಾರ ಭುಗಿಲೆದ್ದಿದ್ದು, ಹಿಂಸಾಚಾರದ ಮೂಲಕ ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರತದ ವರ್ಚಸ್ಸಿಗೆ ಧಕ್ಕೆ ತರಲು ಪಿತೂರಿ ನಡೆಸಲಾಗಿದೆ ಎಂದು ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ ಕಿಶನ್ ರೆಡ್ಡಿಯವರು ಹೇಳಿದ್ದಾರೆ. 

ದೆಹಲಿ ಹಿಂಸಾಚಾರ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಭಾರತದ ಹೆಸರಿಗೆ ಕೆಟ್ಟ ಹೆಸರು ತರುವ ಸಲುವಾಗಿ ಪಿತೂರಿ ನಡೆಸಲಾಗಿದೆ. ಹಿಂಸಾಚಾರದಲ್ಲಿ ಪೊಲೀಸ್ ಪೇದೆಯೊಬ್ಬರು ಸಾವನ್ನಪ್ಪಿದ್ದಾರೆ. ಹಿಂಸಾಚಾರದ ಜವಬ್ದಾರಿಯನ್ನು ಯಾರು ತೆಗೆದುಕೊಳ್ಳುತ್ತಾರೆಂದು ಕಾಂಗ್ರೆಸ್ ಹಾಗೂ ಇತರೆ ರಾಜಕೀಯ ಪಕ್ಷಗಳನ್ನು ನಾನು ಪ್ರಶ್ನಿಸುತ್ತೇನೆ. ಈ ಪಿತೂರಿಯನ್ನು ಯಾವ ಕಾರಣಕ್ಕೆ ನಡೆಸಲಾಯಿತು ಎಂದು ಕೇಳಿದ್ದಾರೆ. 

ಕಳೆದೆರಡು ತಿಂಗಳುಗಳಿಂದ ಶಾಹೀನ್ ಬಾಗ್ ನಲ್ಲಿ ಪ್ರತಿಭಟನೆ ನಡೆಸಿ ರಸ್ತೆಗಳನ್ನು ಬಂದ್ ಮಾಡಿಸಲಾಗಿತ್ತು. ಆದರೂ ಕೇಂದ್ರ ಸರ್ಕಾರ ಯಾವುದೇ ಕ್ರಮಗಳನ್ನು ಕೈಗೊಳ್ಳಲಿಲ್ಲ. ಪ್ರತಿಭಟನೆಗಳು ನಿಯಂತ್ರಣದಲ್ಲಿದ್ದರೆ, ಸಹಿಸಿಕೊಳ್ಳಬಹುದು. ಆದರೆ, ಪ್ರತಿಭಟನೆ ಹಿಂಸಾರೂಪ ಪಡೆದುಕೊಂಡರೆ ಸಹಿಸಲು ಸಾಧ್ಯವಿಲ್ಲ. ಹಿಂಸಾಚಾರದ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕಾಗುತ್ತದೆ. ಹಿಂಸಾಚಾರಕ್ಕೆ ಯಾರೇ ಕಾರಣರಾದರೂ ಯಾರನ್ನೂ ಸುಮ್ಮನೆ ಬಿಡುವುದಿಲ್ಲ ಎಂದು ಎಚ್ಚರಿಸಿದ್ದಾರೆ. 

ಅಮೆರಿಕಾ ಅಧ್ಯಕ್ಷ ಟ್ರಂಪ್ ಅವರು ಭಾರತಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿಯೇ ಹಿಂಸಾಚಾರ ನಡೆಸಲಾಗಿದೆ. ಈ ಹಿಂಸಾಚಾರದ ಹಿಂದೆ ಯಾರಿದ್ದಾರೆಂಬುದನ್ನು ಕಾಂಗ್ರೆಸ್ ಹಾಗೂ ರಾಹುಲ್ ಗಾಂಧಿ ಬಹಿರಂಗಪಡಿಸಬೇಕು. ದೆಹಲಿ ಪೊಲೀಸರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೂಚನೆ ನೀಡಿದ್ದು, ಅಗತ್ಯ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಹಿಂಸಾಚಾರದಲ್ಲಿ ಭಾಗಿಯಾಗಿದ್ದ ಒಬ್ಬೊಬ್ಬರನ್ನೂ ಗುರುತು ಹಿಡಿಯಲಾಗುತ್ತದೆ. ತಪ್ಪಿತಸ್ಥರನ್ನು ಸುಮ್ಮನೆ ಬಿಡುವುದಿಲ್ಲ ಎಂದು ತಿಳಿಸಿದ್ದಾರೆ.

SCROLL FOR NEXT