ದೇಶ

7 ವರ್ಷಗಳ ನಂತರ ಅಪರಾಧಿಗಳಿಗೆ ಗಲ್ಲು ಫಿಕ್ಸ್, ನಿರ್ಭಯಾ ತಾಯಿ ಹೇಳಿದ್ದೇನು?

Vishwanath S

ನವದೆಹಲಿ: ನಿರ್ಭಯಾ ಅತ್ಯಾಚಾರ ಪ್ರಕರಣದ ಸಂಬಂಧ ದೆಹಲಿಯ ಪಟಿಯಾಲ ಕೋರ್ಟ್ ನಾಲ್ವರು ಅಪರಾಧಿಗಳನ್ನು ಜನವರಿ 22ರಂದು ಗಲ್ಲಿಗೇರಿಸಲು ಡೆತ್ ವಾರೆಂಟ್ ಜಾರಿ ಮಾಡಿದ ಬೆನ್ನಲ್ಲೇ ನಿರ್ಭಯಾ ತಾಯಿ ಹೇಳಿಕೆ ಸಂತಸ ವ್ಯಕ್ತಪಡಿಸಿದ್ದಾರೆ. 

ತಮ್ಮ ಮಗಳ ಪ್ರಕರಣದಲ್ಲಿ ನ್ಯಾಯಕ್ಕಾಗಿ ಕಳೆದ ಏಳು ವರ್ಷಗಳಿಂದ ಎದುರು ನೋಡುತ್ತಿದ್ದೇವು. ನ್ಯಾಯಾಲಯ  ನ್ಯಾಯ ಒದಗಿಸಿದೆ. ಈ ತೀರ್ಪು ದೇಶದ ಮಹಿಳೆಯರಲ್ಲಿ ಕಾನೂನಿನ ಮೇಲಿನ ನಂಬಿಕೆ, ಗೌರವವನ್ನು ಹೆಚ್ಚಿಸಿದೆ ಎಂದು ನಿರ್ಭಯಾ ತಾಯಿ ಹೇಳಿದ್ದಾರೆ.

ಈ ಪ್ರಕರಣದಲ್ಲಿ ಎಲ್ಲಾ ಆರು ಆರೋಪಿಗಳನ್ನು ಬಂಧಿಸಲಾಗಿದ್ದು, ಅತ್ಯಾಚಾರ ಮತ್ತು ಕೊಲೆ ಆರೋಪ ಹೊರಿಸಲಾಗಿದೆ. ಅವರಲ್ಲಿ ಒಬ್ಬರು ಅಪ್ರಾಪ್ತ ವಯಸ್ಕ,ಮೂರು ವರ್ಷಗಳ ಜೈಲುವಾಸದ ನಂತರ ಬಿಡುಗಡೆಯಾಗಿದ್ದಾನೆ. ಮತ್ತೊಬ್ಬ ಆರೋಪಿ ತಿಹಾರ್ ಜೈಲಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ವಿಚಾರಣಾ ನ್ಯಾಯಾಲಯ ೨೦೧೩ ರ ಸೆಪ್ಟೆಂಬರ್‌ನಲ್ಲಿ ಉಳಿದ ನಾಲ್ವರಿಗೆ ಮರಣದಂಡನೆ ವಿಧಿಸಿತು. 2014ರ ಮಾರ್ಚ್‌ನಲ್ಲಿ ತೀರ್ಪನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ. ಈ ತೀರ್ಪನ್ನು 2017ರ ಮೇನಲ್ಲಿ ಸುಪ್ರೀಂ ಕೋರ್ಟ್ ಎತ್ತಿಹಿಡಿದಿತ್ತು. ಅಪರಾಧಿಗಳು ಸಲ್ಲಿಸಿದ್ದ  ಮರು ಪರಿಶೀಲನಾ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿತ್ತು.

2012ರ ಡಿಸೆಂಬರ್ 16 ರಂದು 23 ವರ್ಷದ ನಿರ್ಭಯಾಳ ಮೇಲೆ ಅಪರಾಧಿಗಳು ದೆಹಲಿಯಲ್ಲಿ ಚಲಿಸುವ ಬಸ್ಸಿನಲ್ಲಿ ಸಾಮೂಹಿಕ ಅತ್ಯಾಚಾರ ನಡೆಸಿ ನಂತರ ಅತ್ಯಂತ ಕ್ರೂರವಾಗಿ ಹಿಂಸಿಸಿ, ಬಸ್ಸಿನಿಂದ ಹೊರದಬ್ಬಿ ಪರಾರಿಯಾಗಿದ್ದರು. 13 ದಿನಗಳ ಕಾಲ  ಸಾವು ಬದುಕಿನ ನಡುವೆ ಹೋರಾಟ ನಡೆಸಿ ನಿರ್ಭಯಾ 2012 ರ ಡಿಸೆಂಬರ್ 29ರಂದು ಸಿಂಗಪುರ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಳು.

SCROLL FOR NEXT