ಪಾಟ್ನಾ: ಜೆಡಿಯು ನಾಯಕರಾದ ಪ್ರಶಾಂತ್ ಕಿಶೋರ್ ಮತ್ತು ಪವನ್ ವರ್ಮಾ ಅವರನ್ನು ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಆರೋಪದ ಮೇಲೆ ಪಕ್ಷದಿಂದ ಉಚ್ಚಾಟಿಸಲಾಗಿದೆ.
ಈ ಇಬ್ಬರು ನಾಯಕರು ಜೆಡಿಯು ನಿಲುವಿಗೆ ವ್ಯತಿರಿಕ್ತವಾಗಿ ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ಎನ್ಆರ್ಸಿಯನ್ನು ಬಲವಾಗಿ ವಿರೋಧಿಸಿದ್ದರು.
ಪ್ರಶಾಮತ್ ಕಿಶೋರ್ ಮತ್ತು ಪವನ್ ವರ್ಮಾ ಇಬ್ಬರೂ ಕೂಡ ಪಕ್ಷದ ನಿರ್ಧಾರಕ್ಕೆ ವಿರುದ್ಧವಾಗಿ ನಡೆದುಕೊಳ್ಳುತ್ತಿದ್ದಾರೆ. ಇದು ಪಕ್ಷದ ಶಿಸ್ತಿನ ಉಲ್ಲಂಘನೆಯಾಗಿದೆ. ಹಾಗೆಯೇ ಬಿಹಾರ ಮುಖ್ಯಮಂತ್ರಿ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ಧಾರೆ. ಹೀಗಾಗಿ, ಇವರನ್ನು ಪಕ್ಷದಿಂದ ಉಚ್ಛಾಟಿಸಿರುವುದಾಗಿ ಜೆಡಿಯು ಪ್ರಧಾನ ಕಾರ್ಯದರ್ಶಿ ಕೆ.ಸಿ. ತ್ಯಾಗಿ ಹೇಳಿದ್ಧಾರೆ.
ಕೇಂದ್ರ ಸಚಿವ ಅಮಿತ್ ಶಾ ಅವರ ಶಿಫಾರಸಿನ ಮೇರೆಗೆ ಪ್ರಶಾಂತ್ ಕಿಶೋರ್ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳಲಾಗಿತ್ತು ಎಂದು ಬಿಹಾರ ಮುಖ್ಯಮಂತ್ರಿ ನಿತಿಶ್ ಕುಮಾರ್ ಅವರು ಹೇಳಿದ್ದರು. ಆದರೆ ಅವರ ಹೇಳಿಕೆಯನ್ನು ಸ್ಪಷ್ಟವಾಗಿ ತಳ್ಳಿಹಾಕಿದ್ದ ಜೆಡಿಯು ಮಾಜಿ ಉಪಾಧ್ಯಕ್ಷ ಹಾಗೂ ಚುನಾವಣಾ ಚಾಣಕ್ಯ ಪ್ರಶಾಂತ್ ಕಿಶೋರ್ ಅವರು, ನಿತಿಶ್ ಕುಮಾರ್ ಸುಳ್ಳು ಹೇಳುತ್ತಿದ್ದಾರೆ. ಅವರು ಒಬ್ಬ ಸುಳ್ಳುಗಾರ ಎಂದಿದ್ದರು.
ಪ್ರಶಾಂತ್ ಕಿಶೋರ್ ಹೆಸರು ಹೇಳದೆಯೇ ಮಾತನಾಡಿದ್ದ ನಿತೀಶ್ ಕುಮಾರ್, ಒಬ್ಬರು ಪತ್ರ ಬರೆದಿದ್ದರು, ನಾನು ಅದಕ್ಕೆ ಪ್ರತಿಕ್ರಿಯೆ ನೀಡಿದ್ದೇನೆ, ಯಾರೋ ಒಬ್ಬರು ಟ್ವೀಟ್ ಮಾಡಿದ್ದಾರೆ ಮಾಡಿಕೊಳ್ಳಲಿ, ಅದಕ್ಕೆ ನಾನೇನು ಮಾಡಲಿ? ಅವರಿಗೆ ಬೇಕಾಗುವವರೆಗೂ ಜೆಡಿಯು ನಲ್ಲಿ ಮುಂದುವರೆಯಬಹುದು. ಬೇಡವಾದಲ್ಲಿ ಪಕ್ಷ ತೊರೆಯಬಹುದು ಎಂದು ವಾಗ್ದಾಳಿ ನಡೆಸಿದ್ದರು.