ದೇಶ

ಇಂದು ಓರ್ವ ಉಗ್ರನನ್ನು ಹೊಡೆದುರುಳಿಸಿದ ಭಾರತೀಯ ಸೇನೆ!

Vishwanath S

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಓರ್ವ ಉಗ್ರನನ್ನು ಹೊಡೆದುರುಳಿಸುವಲ್ಲಿ ಭಾರತೀಯ ಸೇನೆ ಯಶಸ್ವಿಯಾಗಿದೆ. 

ದಕ್ಷಿಣ ಕಾಶ್ಮೀರ ಜಿಲ್ಲೆಯಾದ ಕುಲ್ಗಾಮ್‍ನಲ್ಲಿ ಶನಿವಾರ ಭದ್ರತಾ ಪಡೆಗಳು ಆರಂಭಿಸಿದ ತೀವ್ರ ಶೋಧ ಕಾರ್ಯಾಚರಣೆ ವೇಳೆ ನಡೆದ ಗುಂಡಿನ ಚಕಮಕಿಯಲ್ಲಿ ಅಪರಿಚಿತ ಉಗ್ರನನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸ್ ವಕ್ತಾರರು ತಿಳಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರ ಪೊಲೀಸರು, ರಾಷ್ಟ್ರೀಯ ರೈಫಲ್ಸ್‍, ವಿಶೇಷ ಕಾರ್ಯಾಚರಣೆ ತಂಡ (ಎಸ್‌ಒಜಿ) ಮತ್ತು ಸಿಆರ್‌ಪಿಎಫ್ ಪಡೆಗಳು ಜಂಟಿಯಾಗಿ ಇಂದು ಮಧ್ಯಾಹ್ನ ಕುಲ್ಗಾಮ್‍ ಜಿಲ್ಲೆಯ ಅರ್ರಾ ಗ್ರಾಮದಲ್ಲಿ ಶೋಧ ಕಾರ್ಯಾಚರಣೆಯನ್ನು ಆರಂಭಿಸಿದ್ದವು. ಭದ್ರತಾ ಪಡೆಗಳು ಒಂದು ನಿರ್ದಿಷ್ಟ ಪ್ರದೇಶದತ್ತ ಸಾಗುತ್ತಿದ್ದಾಗ ಅಡಗಿದ್ದ ಉಗ್ರರು ಸ್ವಯಂಚಾಲಿತ ಶಸ್ತ್ರಾಸ್ತ್ರಗಳಿಂದ ಮನಸೋಚ್ಛೆ ಗುಂಡು ಹಾರಿಸಿದ ನಂತರ ಪರಸ್ಪರ ಗುಂಡಿನ ಚಕಮಕಿ ನಡೆದಿದೆ ಎಂದು ಅವರು ಹೇಳಿದ್ದಾರೆ.

ಕಾರ್ಯಾಚರಣೆಯಲ್ಲಿ ಇದುವರೆಗೆ ಅಪರಿಚಿತ ಉಗ್ರನನ್ನು ಹತ್ಯೆ ಮಾಡಲಾಗಿದ್ದು, ಇತ್ತೀಚಿನ ವರದಿಗಳು ಬಂದಾಗ ಕಾರ್ಯಾಚರಣೆ ನಡೆಯುತ್ತಿದೆ. ಇದೇ ವೇಳೆ ಓರ್ವ ಭಾರತೀಯ ಯೋಧ ಸಹ ಗಾಯಗೊಂಡಿದ್ದಾರೆ.

SCROLL FOR NEXT