ದೇಶ

ಕೊರೋನಾ ವೈರಸ್: ಸ್ವಯಂ ನಿರ್ಬಂಧ ವಿಧಿಸಿಕೊಂಡ ಕೇಂದ್ರ ಸಚಿವ ಮುರಳೀಧರನ್

Lingaraj Badiger

ನವದೆಹಲಿ: ಕೇಂದ್ರ ಸಚಿವ ವಿ ಮುರಳೀಧರನ್ ಅವರು ತಮಗೂ ಕೊರೋನಾ ವೈರಸ್ ತಗುಲಿರುವ ಶಂಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ದೆಹಲಿಯ ತಮ್ಮ ಅಧಿಕೃತ ನಿವಾಸದಲ್ಲಿಯೇ ಸ್ವಯಂ ನಿರ್ಬಂಧ ವಿಧಿಸಿಕೊಂಡಿದ್ದಾರೆ.

ಸಚಿವ ಸಭೆಯಲ್ಲಿ ಭಾಗವಹಿಸಿದ್ದ ವೈದ್ಯರೊಬ್ಹರಿಗೆ ಕೊರೋನಾ ವೈರಸ್ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಸಚಿವರಿಗೂ ಕೊರೋನಾ ವೈರಸ್ ಭೀತಿ ಎದುರಾಗಿದ್ದು, ಸ್ವಯಂ ಪ್ರೇರಿತವಾಗಿ ದಿಗ್ಬಂಧನ ವಿಧಿಸಿಕೊಂಡಿದ್ದಾರೆ.

ವಿದೇಶಾಂಗ ವ್ಯವಹಾರಗಳ ಖಾತೆ ರಾಜ್ಯ ಸಚಿವ ಮುರಳೀಧರನ್ ಅವರು ಮಾರ್ಚ್ 14ರಂದು ಕೇರಳದ ತಿರುವನಂತಪುರಂನಲ್ಲಿ ನಡೆದ ಸಭೆಯೊಂದರಲ್ಲಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಸೋಂಕು ಪೀಡಿತ ವೈದ್ಯರನ್ನು ಭೇಟಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ದೆಹಲಿಗೆ ಹಿಂತಿರುಗಿದ ಬಳಿಕ ಸ್ವಯಂಪ್ರೇರಿತರಾಗಿ ದೆಹಲಿಯ ತಮ್ಮ ಮನೆಯಲ್ಲೇ ಪ್ರತ್ಯೇಕ ಕೊಠಡಿಯಲ್ಲಿದ್ದಾರೆ ಎಂದು ತಿಳಿದು ಬಂದಿದೆ.

ಮುರಳೀಧರನ್ ಅವರಿಗೆ ಅವರ ಮನೆಯಲ್ಲಿಯೇ ವೈದ್ಯಕೀಯ ನೆರವು ನೀಡಲಾಗಿದ್ದು, ಸೋಂಕು ತಗುಲಿರುವ ಬಗ್ಗೆ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ. ಪರೀಕ್ಷಾ ವರದಿಗಳು ಬರುವ ತನಕ ಕೊರೋನಾ ವೈರಸ್ ತಗುಲಿರುವ ಬಗ್ಗೆ ಸ್ಪಷ್ಟಪಡಿಸಲಾಗುವುದಿಲ್ಲ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ದೇಶಾದ್ಯಂದ ವ್ಯಾಪಕವಾಗಿ ಹಬ್ಬುತ್ತಿರುವ ಮಾರಣಾಂತಿಕ ಕೊರೋನಾ ವೈರಸ್ ಗೆ ಭಾರತದಲ್ಲಿ ಮೂವರು ಬಲಿಯಾಗಿದ್ದು, ಸೋಂಕಿತರ ಸಂಖ್ಯೆ 126ಕ್ಕೆ ಏರಿಕೆಯಾಗಿದೆ. 

ಮಹಾರಾಷ್ಟ್ರದಲ್ಲಿ 64 ವರ್ಷದ ಸೋಂಕು ಪೀಡಿತ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೇ ಇಂದು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಕೊರೋನಾ ಸೋಂಕಿಗೆ ತುತ್ತಾಗಿ ಮುಂಬೈನ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 64 ವರ್ಷದ ವ್ಯಕ್ತಿ ಇಂದು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
 

SCROLL FOR NEXT