ದೇಶ

ಅಂಫಾನ್ ಚಂಡಮಾರುತವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿ: ಕೇಂದ್ರ ಸರ್ಕಾರಕ್ಕೆ ಪ್ರತಿಪಕ್ಷಗಳ ಆಗ್ರಹ

Srinivasamurthy VN

ನವದೆಹಲಿ: ಅಂಫಾನ್ ಚಂಡಮಾರುತವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿ ಪ್ರತಿಪಕ್ಷಗಳು ಕೇಂದ್ರ ಸರ್ಕಾರಕ್ಕೆ ಆಗ್ರಹಿಸಿವೆ.

ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರು ಆಯೋಜಿಸಿದ್ದ ಪ್ರತಿಪಕ್ಷಗಳ ವಿಡಿಯೋ ಕಾನ್ಫರೆನ್ಸ್ ಸಭೆ ಬಳಿಕ ವಿಪಕ್ಷ ನಾಯಕರು ಒಕ್ಕೋರಲಿನ ನಿರ್ಣಯ ಕೈಗೊಂಡಿದ್ದು. ಅಂಫಾನ್ ಚಂಡಮಾರುತವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಬೇಕು ಎಂದು ಕೇಂದ್ರ ಸರ್ಕಾರಕ್ಕೆ  ಆಗ್ರಹಿಸಿವೆ. 

ಅಂಫಾನ್ ಚಂಡಮಾರುತದಿಂದಾಗಿ ಪಶ್ಚಿಮ ಬಂಗಾಳ ಮತ್ತು ಒಡಿಶಾದಲ್ಲಿ ಸಂಭವಿಸಿರುವ ಹಾನಿಯನ್ನು ಕೂಡಲೇ ರಾಷ್ಟ್ರೀಯ ವಿಪತ್ತು ಎಂದು ಘೋಷಿಸುವಂತೆ 22 ಪ್ರತಿಪಕ್ಷಗಳು ಕೇಂದ್ರ ಸರ್ಕಾರವನ್ನು ಒತ್ತಾಯಿಸಿವೆ. ಅಲ್ಲದೆ ಚಂಡಮಾರುತದಿಂದ ಸಂಕಷ್ಟಕ್ಕೀಡಾಗಿರುವ ರಾಜ್ಯಗಳಿಗೆ  ಹೆಚ್ಚಿನ ಸಹಾಯ ನೀಡಬೇಕು. ಕೇಂದ್ರ ಸರ್ಕಾರ ಚಂಡಮಾರುತದಿಂದ ಸಂಕಷ್ಟಕ್ಕೀಡಾದವರಿಗೆ ಪರಿಹಾರ ಮತ್ತು ಪುನರ್ವಸತಿ ಕಲ್ಪಿಸುವುದಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ಪಶ್ಚಿಮ ಬಂಗಾಳ ಮತ್ತು ಒಡಿಶಾದ ಸರ್ಕಾರಗಳು ಮತ್ತು ಜನರಿಗೆ ನಮ್ಮ ಬೆಂಬಲ ಸದಾ ಇದೆ. ಕೊರೋನಾ  ವೈರಸ್‌ ಸಂಕಟದ ಬೆನ್ನಲ್ಲೇ ಅಂಫಾನ್ ಚಂಡಮಾರುತವೂ ಅಪ್ಪಳಿಸಿದ್ದು ಸಮಸ್ಯೆ ಉಲ್ಬಣಗೊಳ್ಳುವಂತೆ ಮಾಡಿದ್ದು, ಸಾಂಕ್ರಾಮಿಕದ ವಿರುದ್ಧದ ಜನರ ಹೋರಾಟದ ಉತ್ಸಾಕ್ಕೆ ಅಂಫಾನ್ ತಡೆಯೊಡ್ಡಿದೆ ಎಂದು ಪ್ರತಿಪಕ್ಷಗಳು ಕೈಗೊಂಡಿರುವ ನಿರ್ಣಯದಲ್ಲಿ ಉಲ್ಲೇಖಿಸಲಾಗಿದೆ.

ಸೋನಿಯಾ ಗಾಂಧಿ ಅವರು ಆಯೋಜಿಸಿದ್ದ ಪ್ರತಿಪಕ್ಷಗಳ ವಿಡಿಯೋ ಕಾನ್ಫರೆನ್ಸ್ ಸಭೆಯಲ್ಲಿ ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಸೇರಿದಂತೆ ಟಿಎಂಸಿ, ಎನ್‌ಸಿಪಿ, ಡಿಎಂಕೆ ಮತ್ತು ಎಡ ಪಕ್ಷಗಳ ಮುಖಂಡರು ಭಾಗಿಯಾಗಿದ್ದರು.

SCROLL FOR NEXT