ದೇಶ

ತಮಿಳುನಾಡು ವಿಧಾನಸಭಾ ಚುನಾವಣೆ ಹೊಸ್ತಿಲಲ್ಲಿ ಕಾಂಗ್ರೆಸ್ ಗೆ ಕೈ ಕೊಟ್ಟು ಕಮಲ ಹಿಡಿದ ನಟಿ ಖುಷ್ಬೂ

Nagaraja AB

ನವದೆಹಲಿ: ತಮಿಳುನಾಡು ವಿಧಾನಸಭಾ ಚುನಾವಣೆ ಹೊಸ್ತಿಲಲ್ಲಿ ಇರುವಂತೆಯೇ ನಟಿ ಖುಷ್ಬೂ ಸುಂದರ್ ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ಬಿಜೆಪಿಯ ಕೇಂದ್ರ ಕಚೇರಿಯಲ್ಲಿಂದು ನಡೆದ ಸರಳ ಸಮಾರಂಭದಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ. ಟಿ. ರವಿ , ಅಧಿಕೃತವಾಗಿ ಪಕ್ಷದ ಸದಸ್ಯತ್ವವನ್ನು ನೀಡುವ ಮೂಲಕ ಖುಷ್ಬೂ ಅವರನ್ನು ಆತ್ಮೀಯವಾಗಿ ಬರಮಾಡಿಕೊಂಡರು.ಬಿಜೆಪಿ ರಾಷ್ಟ್ರೀಯ ವಕ್ತಾರ ಸಂಬೀತ್ ಪಾತ್ರ, ತಮಿಳುನಾಡು ಬಿಜೆಪಿ ಅಧ್ಯಕ್ಷ ಎಲ್. ಮುರುಗನ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ತಮಿಳುನಾಡು ಬಿಜೆಪಿ ಅಧ್ಯಕ್ಷ ಮುರುಗನ್ ನೇತೃತ್ವದಲ್ಲಿ ನಟಿ ಖುಷ್ಬೂ ಪಕ್ಷದ ಬಲವರ್ದನೆಗೆ ಶ್ರಮಿಸಲಿದ್ದಾರೆ ಎಂಬ ವಿಶ್ವಾಸವಿದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ ಅವರ ನೇತೃತ್ವದಲ್ಲಿ ಎಲ್ಲರೂ ಒಗ್ಗಟ್ಟಾಗಿ ಶ್ರಮಿಸುವುದಾಗಿ ಸಿ. ಟಿ. ರವಿ ಹೇಳಿದರು.

ಮುಂದಿನ ವರ್ಷ ತಮಿಳುನಾಡು ವಿಧಾನಸಭಾ ಚುನಾವಣೆ ನಡೆಯಲಿದ್ದು, 2019ರ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ಸಿಗದೆ ನಿರಾಸೆಗೊಂಡಿದ್ದ ಖುಷ್ಬೂ ಅವರಿಗೆ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ನೀಡುವುದಾಗಿ ಬಿಜೆಪಿ ಭರವಸೆ ನೀಡಿದ ಬಳಿಕ ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

SCROLL FOR NEXT