ದೇಶ

ಬಿಜೆಪಿ ಯುವಮೋರ್ಚಾ ರಾಷ್ಟ್ರೀಯ ಅಧ್ಯಕ್ಷರಾಗಿ ಸಂಸದ ತೇಜಸ್ವಿ ಸೂರ್ಯ ನೇಮಕ, ಸಿಟಿ ರವಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ

Srinivas Rao BV

ನವದೆಹಲಿ: ಬಿಜೆಪಿ ರಾಷ್ಟ್ರೀಯ ಮಟ್ಟದಲ್ಲಿ ಹೊಸ ಪದಾಧಿಕಾರಿಗಳನ್ನು ಘೋಷಣೆ ಮಾಡಿದ್ದು, ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಅವರನ್ನು ಯುವಮೋರ್ಚಾದ ರಾಷ್ಟ್ರೀಯ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. 

ಸಚಿವ ಸಿಟಿ ರವಿ ಅವರಿಗೂ ರಾಷ್ಟ್ರೀಯ ಮಟ್ಟದಲ್ಲಿ ಜವಾಬ್ದಾರಿ ನೀಡಲಾಗಿದ್ದು,   ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ನೇಮಕ ಮಾಡಲಾಗಿದೆ. 

ಉತ್ತಮ ವಾಕ್ಚಾತುರ್ಯ ರೂಢಿಸಿಕೊಂಡು ದೇಶದ ಗಮನ ಸೆಳೆದಿರುವ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಯುವ ಸಂಸದ ತೇಜಸ್ವಿ ಸೂರ್ಯ ಅವರು ಹೊಸ ಜವಾಬ್ದಾರಿಯ ಮೂಲಕ ರಾಷ್ಟ್ರರಾಜಕಾರಣದಲ್ಲಿ ಮತ್ತಷ್ಟು ಸಕ್ರಿಯರಾಗಿ ತೊಡಗಿಸಿಕೊಳ್ಳಲಿದ್ದಾರೆ. 

ಒಬಿಸಿ ಮೋರ್ಚಾದ ಅಧ್ಯಕ್ಷರನ್ನಾಗಿ ತೆಲಂಗಾಣದ ಡಾ.ಕೆ ಲಕ್ಷ್ಮಣ್ ಅವರನ್ನು ನೇಮಕ ಮಾಡಲಾಗಿದೆ. ರಾಷ್ಟ್ರೀಯ ವಕ್ತಾರರನ್ನಾಗಿ ಉತ್ತರಾಖಂಡ್ ನ ಅನಿಲ್ ಬಲುನಿ, ಸಂಜಯ್ ಮಯೂಖ್, ಡಾ. ಸಂಬಿತ್ ಪಾತ್ರ, ಡಾ. ಸುಧಾಂಶು ತ್ರಿವೇದಿ, ಡಾ. ಸಯೀದ್ ಶಾನವಾಜ್ ಹುಸೇನ್ ಅವರನ್ನು ನೇಮಕ ಮಾಡಲಾಗಿದೆ. ಈ ವರೆಗೂ ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷರಾಗಿ ಪೂನಂ ಮಹಾಜನ್ ಕಾರ್ಯನಿರ್ವಹಿಸಿದ್ದರು.  

ರಾಷ್ಟ್ರೀಯ ಮಟ್ಟದಲ್ಲಿ ಪುನಾರಚನೆಯಾದ ಪದಾಧಿಕಾರಿಗಳ ಪಟ್ಟಿಯಿಂದ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿದ್ದ ರಾಮ್ ಮಾಧವ್ ಅವರನ್ನು ಕೈಬಿಡಲಾಗಿದೆ. 

SCROLL FOR NEXT