ದೇಶ

ಉದ್ಧವ್ ಕಪಾಳಕ್ಕೆ ಬಾರಿಸುತ್ತಿದ್ದೆ ಹೇಳಿಕೆ: ಪೊಲೀಸ್ ವಿಚಾರಣೆ ರಾಣೆ ಗೈರು; ಅವರ ಆರೋಗ್ಯ ಸರಿ ಇಲ್ಲ ಎಂದ ವಕೀಲ!

Lingaraj Badiger

ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ಕಪಾಳಕ್ಕೆ ಬಾರಿಸುತ್ತಿದ್ದೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಕೇಂದ್ರ ಸಚಿವ ನಾರಾಯಣ ರಾಣೆ ಅವರು ಪ್ರಕರಣ ಸಂಬಂಧ ರಾಯಗಡ ಪೊಲೀಸರ ವಿಚಾರಣೆಗೆ ಗೈರು ಆಗಿದ್ದಾರೆ. 

ಕೇಂದ್ರ ಸಚಿವ ನಾರಾಯಣ ರಾಣೆ ಅವರು ಕೋರ್ಟ್ ಆದೇಶದಂತೆ ಇಂದು ರಾಯಗಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಬೇಕಿತ್ತು. ಆದರೆ ಅನಾರೋಗ್ಯದ ಹಿನ್ನೆಲೆಯಲ್ಲಿ ಕೇಂದ್ರ ಸಚಿವರು ವಿಚಾರಣೆ ಹಾಜರಾಗಿಲ್ಲ ಎಂದು ಅವರ ವಕೀಲರು ತಿಳಿಸಿದ್ದಾರೆ.

ರಾಣೆ ಪರವಾಗಿ ಅವರ ವಕೀಲ ಸಂದೇಶ್ ಚಿಕ್ನೆ ಅವರು ಸ್ಥಳೀಯ ಅಪರಾಧ ವಿಭಾಗದ ಇನ್ಸ್‌ಪೆಕ್ಟರ್ ದಯಾನಂದ ಗಾವಡೆ ಅವರ ಕಚೇರಿಯಲ್ಲಿ ಹಾಜರಾಗಿ, ಆರೋಪಿ ಕೇಂದ್ರ ಸಚಿವರ ಆರೋಗ್ಯ ಸರಿಯಿಲ್ಲದ ಕಾರಣ ವಿಚಾರಣೆಗೆ ಬರಲು ಸಾಧ್ಯವಾಗಿಲ್ಲ ಎಂದು ತಿಳಿಸಿದ್ದಾರೆ.

ಇಂದು ಬೆಳಗ್ಗೆ ರಾಣೆ ಆಗಮನದ ನಿರೀಕ್ಷೆಯಲ್ಲಿ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯ ಬಳಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು, ಈಗ ಪರಿಸ್ಥಿತಿ ಸಾಮಾನ್ಯವಾಗಿದೆ ಎಂದು ಗಾವಡೆ ಹೇಳಿದರು.

ದೇಶಕ್ಕೆ ಸ್ವಾತಂತ್ರ್ಯ ಲಭಿಸಿದ್ದು ಯಾವ ವರ್ಷ ಎಂಬುದನ್ನು ತಿಳಿಯದೇ ಇರುವ ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಅವರ ಕಪಾಳಕ್ಕೆ ಬಾರಿಸುತ್ತಿದ್ದೆ ಎಂದು ರಾಯಗಡದಲ್ಲಿ ನಡೆದ ಜನಾಶೀರ್ವಾದ ಯಾತ್ರೆಯಲ್ಲಿ ನಾರಾಯಣ ರಾಣೆ ಹೇಳಿದ್ದರು.

SCROLL FOR NEXT