ನವದೆಹಲಿ: ಭಾರತದಲ್ಲಿ ಕೋವಿಡ್-19 ವೈರಸ್ ನ ಹೊಸ ರೂಪಾಂತರಿ ಓಮಿಕ್ರಾನ್ ಸೋಂಕಿತರ ಸಂಖ್ಯೆ ಕ್ರಮೇಣ ಹೆಚ್ಚಳವಾಗುತ್ತಿದ್ದು, ಇದೀಗ ಕೇರಳ, ಆಂಧ್ರ ಪ್ರದೇಶ ಮತ್ತು ನಾಗಪುರದಲ್ಲಿ ಮೊದಲ ಓಮಿಕ್ರಾನ್ ಸೋಂಕು ಪ್ರಕರಣಗಳು ವರದಿಯಾಗಿದೆ.
ಆಂಧ್ರ ಪ್ರದೇಶ: ಐರ್ಲೆಂಡ್ನಿಂದ ಬಂದಿದ್ದ ವ್ಯಕ್ತಿಯಲ್ಲಿ ಸೋಂಕು
ಇನ್ನು ಆಂಧ್ರ ಪ್ರದೇಶದಲ್ಲಿ ಮೊದಲ ಓಮಿಕ್ರಾನ್ ಸೋಂಕು ಪ್ರಕರಣ ಪತ್ತೆಯಾಗಿದ್ದು, ಐರ್ಲೆಂಡ್ನಿಂದ ಮುಂಬೈ ವಿಮಾನ ನಿಲ್ದಾಣದ ಮೂಲಕ ಬಂದ 34 ವರ್ಷ ವಯಸ್ಸಿನ ವ್ಯಕ್ತಿಯಲ್ಲಿ ಕೊರೊನಾ ವೈರಸ್ನ ರೂಪಾಂತರ ತಳಿ ಓಮೈಕ್ರಾನ್ ಪತ್ತೆಯಾಗಿತ್ತು. ಆದರೆ, ಇದೀಗ ಅವರು ಗುಣಮುಖರಾಗಿದ್ದಾರೆ ಎಂದು ಆಂಧ್ರ ಪ್ರದೇಶ ಆರೋಗ್ಯ ಇಲಾಖೆ ತಿಳಿಸಿದೆ. ಆಂಧ್ರ ಪ್ರದೇಶದಲ್ಲಿ ವರದಿಯಾದ ಮೊದಲ ಓಮೈಕ್ರಾನ್ ಪ್ರಕರಣ ಇದಾಗಿದ್ದು, ಸೋಂಕಿತ ವ್ಯಕ್ತಿಯನ್ನು ಮುಂಬೈ ವಿಮಾನ ನಿಲ್ದಾಣದಲ್ಲೇ ಆರ್ಟಿಪಿಸಿಆರ್ ಪರೀಕ್ಷೆಗೆ ಒಳಪಡಿಸಲಾಗಿತ್ತು. ಆದರೆ ಆಗ ವರದಿ ನೆಗೆಟಿವ್ ಬಂದಿತ್ತು. ಹೀಗಾಗಿ ಅವರಿಗೆ ಪ್ರಯಾಣಿಸಲು ಅನುಮತಿ ನೀಡಲಾಗಿತ್ತು ಎಂದು ರಾಜ್ಯ ಆರೋಗ್ಯ ಇಲಾಖೆ ತಿಳಿಸಿದೆ.
ಇದನ್ನೂ ಓದಿ: ಆಂಧ್ರಪ್ರದೇಶ, ಚಂಡೀಗಢದಲ್ಲಿ ಮೊದಲ ಓಮಿಕ್ರಾನ್ ಪ್ರಕರಣ ಪತ್ತೆ: ದೇಶದಲ್ಲಿ 35ಕ್ಕೆ ಏರಿದ ಸೋಂಕಿತರ ಸಂಖ್ಯೆ
ನವೆಂಬರ್ 27ರಂದು ಅವರು ವಿಶಾಖಪಟ್ಟಣಕ್ಕೆ ಬಂದ್ದಿದ್ದರು. ಬಳಿಕ ವಿಜಯನಗರಂನಲ್ಲಿ ಮತ್ತೆ ಆರ್ಟಿಪಿಸಿಆರ್ ಪರೀಕ್ಷೆ ನಡೆಸಲಾಗಿದ್ದು, ಕೋವಿಡ್ ಪಾಸಿಟಿವ್ ಬಂದಿತ್ತು. ಹೀಗಾಗಿ ಅವರ ಮಾದರಿಯನ್ನು ಜೀನೋಮ್ ಸೀಕ್ವೆನ್ಸಿಂಗ್ಗಾಗಿ ಕಳುಹಿಸಿಕೊಡಲಾಗಿತ್ತು. ಬಳಿಕ ವರದಿ ಪಾಸಿಟಿವ್ ಬಂದಿತ್ತು. ಆದರೆ ಅವರಲ್ಲಿ ಸೋಂಕಿನ ಲಕ್ಷಣಗಳಿರಲಿಲ್ಲ. ಅವರನ್ನು ಶುಕ್ರವಾರ ಮತ್ತೆ ಪರೀಕ್ಷೆಗೆ ಒಳಪಡಿಸಲಾಗಿದ್ದು, ವರದಿ ನೆಗೆಟಿವ್ ಬಂದಿದೆ ಎಂದು ಆಂಧ್ರ ಪ್ರದೇಶದ ಸಾರ್ವಜನಿಕ ಆರೋಗ್ಯ ಇಲಾಖೆಯ ನಿರ್ದೇಶಕರು ತಿಳಿಸಿದ್ದಾರೆ.
ಇದನ್ನೂ ಓದಿ: ಜಿಂಬಾಬ್ವೆ, ದಕ್ಷಿಣ ಆಫ್ರಿಕಾ ಪ್ರವಾಸ ಮಾಡಿಬಂದಿದ್ದ ವ್ಯಕ್ತಿಯಲ್ಲಿ ಓಮಿಕ್ರಾನ್ ಪತ್ತೆ: ರಾಜಧಾನಿ ದೆಹಲಿಯಲ್ಲಿ ಎರಡನೇ ಪ್ರಕರಣ
ನಾಗಪುರದಲ್ಲಿ ಮೊದಲ ಪ್ರಕರಣ
ಇತ್ತ ಮಹಾರಾಷ್ಟ್ರದ ನಾಗ್ಪುರದ ವ್ಯಕ್ತಿಯೊಬ್ಬರಲ್ಲೂ ಕೊರೊನಾ ವೈರಸ್ನ ರೂಪಾಂತರ ತಳಿ ಓಮಿಕ್ರಾನ್ ಭಾನುವಾರ ದೃಢಪಟ್ಟಿದ್ದು, ನಾಗ್ಪುರದಲ್ಲಿ ವರದಿಯಾದ ಮೊದಲ ಓಮೈಕ್ರಾನ್ ಪ್ರಕರಣ ಇದಾಗಿದೆ. ಪಶ್ಚಿಮ ಆಫ್ರಿಕಾದಿಂದ ವಾಪಸಾದ 40 ವರ್ಷ ವಯಸ್ಸಿನ ವ್ಯಕ್ತಿಯಲ್ಲಿ ಓಮೈಕ್ರಾನ್ ಪತ್ತೆಯಾಗಿದೆ. ಮಹಾರಾಷ್ಟ್ರದಲ್ಲಿ ಓಮೈಕ್ರಾನ್ ಸೋಂಕಿತರ ಸಂಖ್ಯೆ 18ಕ್ಕೆ ಏರಿಕೆಯಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
‘ಸೋಂಕಿತ ವ್ಯಕ್ತಿಯು ಸ್ಥಳೀಯ ನಿವಾಸಿಯಾಗಿದ್ದು, 8 ದಿನಗಳ ಹಿಂದೆ ಪಶ್ಚಿಮ ಆಫ್ರಿಕಾದಿಂದ ವಾಪಸಾಗಿದ್ದರು. ಆ ಸಂದರ್ಭದಲ್ಲಿ ಅವರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದ್ದು, ಪಾಸಿಟಿವ್ ವರದಿ ಬಂದಿತ್ತು’ ಎಂದು ನಾಗ್ಪುರ ಮುನ್ಸಿಪಲ್ ಕಾರ್ಪೊರೇಷನ್ (ಎನ್ಎಂಸಿ) ಆಯುಕ್ತ ರಾಧಾಕೃಷ್ಣನ್ ಬಿ ತಿಳಿಸಿದ್ದಾರೆ. ಕೋವಿಡ್ ದೃಢಪಟ್ಟ ಕಾರಣ ಅವರನ್ನು ನಗರದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಅವರಿಂದ ಪಡೆದ ಮಾದರಿಯನ್ನು ಓಮೈಕ್ರಾನ್ ಪತ್ತೆಗಾಗಿ ಜೀನೋಮ್ ಸೀಕ್ವೆನ್ಸ್ಗೆ ಕಳುಹಿಸಲಾಗಿತ್ತು. ಅದರ ವರದಿ ಇಂದು ಬಂದಿದ್ದು, ಸೋಂಕು ದೃಢಪಟ್ಟಿದೆ. ಆದರೆ ಅವರ ಸಂಪರ್ಕಕ್ಕೆ ಬಂದಿದ್ದವರೆಲ್ಲರ ವರದಿಯೂ ನೆಗೆಟಿವ್ ಬಂದಿದೆ. ಸೋಂಕಿತ ವ್ಯಕ್ತಿಯ ಆರೋಗ್ಯ ಸ್ಥಿರವಾಗಿದೆ. ಅವರ ಆರೋಗ್ಯದ ಮೇಲೆ ನಿಗಾ ಇರಿಸಲಾಗಿದೆ ಎಂದು ಆಯುಕ್ತರು ತಿಳಿಸಿದ್ದಾರೆ.
ಕೇರಳದಲ್ಲೂ ಪತ್ತೆ
ಇದೇ ವೇಳೆ ಕೇರಳದಲ್ಲೂ ಮೊದಲ ಓಮಿಕ್ರಾನ್ ಸೋಂಕು ಪ್ರಕರಣ ಪತ್ತೆಯಾಗಿದ್ದು, ಈ ಬಗ್ಗೆ ರಾಜ್ಯ ಆರೋಗ್ಯ ಸಚಿವ ವೀಣಾ ಜಾರ್ಜ್ ಮಾಹಿತಿ ನೀಡಿದ್ದಾರೆ. ತಮ್ಮ ಫೇಸ್ಬುಕ್ ಪುಟದಲ್ಲಿ ಪೋಸ್ಟ್ ಮಾಡಿದ ವೀಡಿಯೊದಲ್ಲಿ, ರೋಗಿಯು ಇತ್ತೀಚೆಗೆ ಯುನೈಟೆಡ್ ಕಿಂಗ್ಡಮ್ನಿಂದ ಬಂದ ಕೇರಳ ಮೂಲದವರು ಎಂದು ಅವರು ಹೇಳಿದ್ದು, ರೋಗಿಯ ಸ್ಥಿತಿ ಸ್ಥಿರವಾಗಿದೆ ಮತ್ತು ವೈರಸ್ನ ಹೊಸ ರೂಪಾಂತರದ ಹರಡುವಿಕೆಯನ್ನು ತಡೆಯಲು ಸರ್ಕಾರ ಎಲ್ಲಾ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುತ್ತಿರುವುದರಿಂದ ಭಯಪಡುವ ಅಗತ್ಯವಿಲ್ಲ ಎಂದು ಅವರು ಹೇಳಿದರು.
ಚಂಡೀಘಢ
ಇನ್ನು ಚಂಡೀಘಡದಲ್ಲಿ ನವೆಂಬರ್ 22 ರಂದು ಭಾರತಕ್ಕೆ ಬಂದಿಳಿದಿದ್ದ ವ್ಯಕ್ತಿಯಲ್ಲಿ ಓಮಿಕ್ರಾನ್ ಸೋಂಕು ಪತ್ತೆಯಾಗಿದ್ದು, ಪ್ರಸ್ತುತ ಸಾಂಸ್ಥಿಕ ಕ್ವಾರಂಟೈನ್ನಲ್ಲಿದ್ದಾರೆ. ಅವರೊಂದಿಗೆ ಅವರ ಸಂಪರ್ಕಕ್ಕೆ ಬಂದ ಏಳು ಸದಸ್ಯರನ್ನು ಕೂಡ ಕ್ವಾರಂಟೈನ್ಗೆ ಒಳಪಡಿಸಲಾಗಿದೆ. ಅಲ್ಲದೆ ಎಲ್ಲರಿಗೂ RT-PCR ಪರೀಕ್ಷೆ ಮಾಡಲಾಗಿದೆ. ಆದರೆ ಅವರೆಲ್ಲರ ಪರೀಕ್ಷೆ ವರದಿ ನೆಗೆಟಿವ್ ಬಂದಿದೆ.
38ಕ್ಕೇರಿದ ಸೋಂಕಿತರ ಸಂಖ್ಯೆ
ಇನ್ನು ಇಂದು ಪತ್ತೆಯಾದ ನಾಲ್ಕು ಹೊಸ ಪ್ರಕರಣಗಳ ಸಂಖ್ಯೆಯೊಂದಿಗೆ ಭಾರತದಲ್ಲಿ ಓಮಿಕ್ರಾನ್ ಸೋಂಕಿತರ ಸಂಖ್ಯೆ 38ಕ್ಕೇರಿದೆ.