ಚಂಡೀಗಢ: ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥ ನವಜೋತ್ ಸಿಂಗ್ ಸಿಧು ಅವರು ತಮ್ಮ ಪಕ್ಷದ ಇಬ್ಬರು ನಾಯಕರನ್ನು ಹೊಗಳಿ ವಿವಾದಕ್ಕೆ ಕಾರಣವಾಗಿದ್ದಾರೆ. ಆ ಶಾಸಕರು ಪೊಲೀಸರ ಪ್ಯಾಂಟ್ ಒದ್ದೆ ಮಾಡಲು ಸಮರ್ಥರಾಗಿದ್ದಾರೆ ಎಂದು ಹೇಳಿದ್ದಾರೆ.
ಮಾಜಿ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಮತ್ತು ಶಿರೋಮಣಿ ಅಕಾಲಿದಳ(ಎಸ್ಎಡಿ) ನಾಯಕ ದಲ್ಜಿತ್ ಸಿಂಗ್ ಚೀಮಾ ಅವರು ವಿವಾದಾತ್ಮಕ ಹೇಳಿಕೆ ನೀಡಿದ ಸಿಧು ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ ಮತ್ತು ಚಂಡೀಗಢ ಪೊಲೀಸ್ ಅಧಿಕಾರಿಯೊಬ್ಬರು ಪಂಜಾಬ್ ಕಾಂಗ್ರೆಸ್ ಅಧ್ಯಕ್ಷರಿಗೆ ಮಾನಹಾನಿ ನೋಟಿಸ್ ನೀಡಿದ್ದಾರೆ.
"ಪೊಲೀಸರನ್ನು ಅವಮಾನಿಸಿದ್ದಕ್ಕಾಗಿ ನಾನು ಅವರಿಗೆ ಮಾನನಷ್ಟ ನೋಟಿಸ್ ಕಳುಹಿಸಿದ್ದೇನೆ" ಎಂದು ಚಂಡೀಗಢ ಉಪ ಪೊಲೀಸ್ ವರಿಷ್ಠಾಧಿಕಾರಿ ದಿಲ್ಶರ್ ಸಿಂಗ್ ಚಂದೇಲ್ ಅವರು ಹೇಳಿದ್ದಾರೆ.
ಸಿಧು ಅವರ ಹೇಳಿಕೆಯನ್ನು ಖಂಡಿಸಿ ಸಬ್ ಇನ್ಸ್ಪೆಕ್ಟರ್ ಒಬ್ಬರು ಸಹ ವಿಡಿಯೋ ಸಂದೇಶ ನೀಡಿದ್ದಾರೆ.
ಲುಧಿಯಾನದ ಕಾಂಗ್ರೆಸ್ ಸಂಸದ ರವನೀತ್ ಸಿಂಗ್ ಬಿಟ್ಟು ಅವರ ಸಹ ಪೊಲೀಸರನ್ನು ಬೆಂಬಲಿಸಿದ್ದು, ಉಗ್ರರ ವಿರುದ್ಧ ಮತ್ತು ಕೋವಿಡ್-19 ವಿರುದ್ಧದ ಹೋರಾಟದಲ್ಲಿ ಅವರ ಪಾತ್ರವನ್ನು ಶ್ಲಾಘಿಸಿದ್ದಾರೆ.
ಸುಲ್ತಾನ್ಪುರ ಲೋಧಿಯಲ್ಲಿ ಇತ್ತೀಚೆಗೆ ನಡೆದ ರ್ಯಾಲಿಯಲ್ಲಿ ಹಾಲಿ ಶಾಸಕ ನವತೇಜ್ ಸಿಂಗ್ ಚೀಮಾ ಅವರ ಕಡೆಗೆ ಕೈತೋರಿಸಿ, ಅವರು "ತಾನೇದಾರ್"(ಪೊಲೀಸ್) ಪ್ಯಾಂಟ್ ಒದ್ದೆಯಾಗುವಂತೆ ಮಾಡಬಹುದು" ಎಂದು ಸಿಧು ಹೇಳಿದ ನಂತರ ವಿವಾದ ಭುಗಿಲೆದ್ದಿದೆ.