ಕೋಲ್ಕತಾ: ಚಂಡಮಾರುತದ ನಿಮಿತ್ತ ಪುರಸಭೆಯಲ್ಲಿ ಸಂಗ್ರಹಿಸಿಡಲಾಗಿದ್ದ ಪರಿಹಾರ ಸಾಮಗ್ರಿಗಳನ್ನು ಕಳ್ಳತನ ಮಾಡಿದ ಆರೋಪ ಮತ್ತು ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಬಿಜೆಪಿ ನಾಯಕ ಸುವೇಂದು ಅಧಿಕಾರಿ ಮತ್ತು ಅವರ ಸಹೋದರರ ವಿರುದ್ಧ ಎಫ್ ಐಆರ್ ದಾಖಲಿಸಿ, ಅವರ ಆಪ್ತರನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.
ವಂಚನೆ ಪ್ರಕರಣ; ಸುವೇಂದು ಅಧಿಕಾರಿ ಆಪ್ತರ ಬಂಧನ
ಬಿಜೆಪಿ ಮುಖಂಡ ಮತ್ತು ಪಶ್ಚಿಮ ಬಂಗಾಳದ ವಿಧಾನಸಭೆಯ ಪ್ರತಿಪಕ್ಷದ ನಾಯಕ ಸುವೇಂದು ಅಧಿಕಾರಿಯ ಆಪ್ತ ರಾಖೇಲ್ ಬೇರಾ ಅವರನ್ನು ಕೋಲ್ಕತಾ ಪೊಲೀಸರು ಬಂಧಿಸಿದ್ದಾರೆ. ವಂಚನೆ ಪ್ರಕರಣದಲ್ಲಿ ಬೇರಾರನ್ನು ಬಂಧಿಸಲಾಗಿದ್ದು, ಸುಜಿತ್ ಡೇ ಎಂಬ ವ್ಯಕ್ತಿ ನೀಡಿದ ದೂರಿನ ಆಧಾರದ ಮೇಲೆ ಮಾಣಿಕ್ತಾಲ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.
ಕೊಲ್ಕತ್ತಾ ಪೊಲೀಸ್ ಮೂಲಗಳ ಪ್ರಕಾರ, ಬಂಧಿತ ಆರೋಪಿ ರಾಖೇಲ್ ಬೇರಾ ಅವರು 2019 ರ ಜುಲೈ ಮತ್ತು ಸೆಪ್ಟೆಂಬರ್ ನಡುವೆ ಚಂಚಲ್ ನಂದಿ ಮತ್ತು ಇತರರೊಂದಿಗೆ ಕ್ರಿಮಿನಲ್ ಪಿತೂರಿ ನಡೆಸಿದ ಆರೋಪ ಎದುರಿಸುತ್ತಿದ್ದಾರೆ. ಸರ್ಕಾರಿ ಉದ್ಯೋಗ ಕೊಡಿಸುವ ನೆಪದಲ್ಲಿ ಜನರನ್ನು ಮೋಸ ಮಾಡುವ ದಂಧೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ದೂರುದಾರ ಸುಜಿತ್ ಡೇ ಉದ್ಯೋಗ ಹುಡುಕಿಕೊಂಡು ಇಬ್ಬರನ್ನೂ ಸಂಪರ್ಕಿಸಿದ್ದನು., ಇಬ್ಬರೂ ನೀರಾವರಿ ಮತ್ತು ಜಲ ಸಂಪನ್ಮೂಲ ಸಚಿವಾಲಯದಲ್ಲಿ ಕೆಲಸ ಕೊಡಿಸುವ ಭರವಸೆ ನೀಡಿ, 2 ಲಕ್ಷ ರೂ. ಪಡೆದಿದ್ದರು ಎಂದು ಆರೋಪಿಸಲಾಗಿದೆ.
ಇನ್ನು ಈ ಹಿಂದೆ ಟಿಎಂಸಿಯಲ್ಲಿದ್ದ ಸುವೇಂದು ಅಧಿಕಾರಿ ಮಮತಾ ಬ್ಯಾನರ್ಜಿ ಸಂಪುಟದಲ್ಲಿ ಜಲ ಸಂಪನ್ಮೂಲ ಸಚಿವರಾಗಿದ್ದರು.