ದೇಶ

'ದೇಶದ ಎಲ್ಲಾ ನಾಗರಿಕರಿಗೆ ಉಚಿತ ಲಸಿಕೆ ನೀಡಿ, ಪರೀಕ್ಷೆ ಹೆಚ್ಚಿಸಿ': 116 ಮಾಜಿ ನಾಗರಿಕ ಸೇವಾ ಅಧಿಕಾರಿಗಳಿಂದ ಪ್ರಧಾನಿಗೆ ಪತ್ರ

Lingaraj Badiger

ನವದೆಹಲಿ: ಕೇಂದ್ರ ಸರ್ಕಾರವು ಎಲ್ಲಾ ಭಾರತೀಯ ನಾಗರಿಕರಿಗೆ ಉಚಿತವಾಗಿ ಕೋವಿಡ್ ಲಸಿಕೆ ನೀಡಬೇಕು ಮತ್ತು ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಆರ್‌ಟಿ-ಪಿಸಿಆರ್ ಪರೀಕ್ಷೆಯನ್ನು ಹೆಚ್ಚಿಸಬೇಕು ಎಂದು ಮಾಜಿ ನಾಗರಿಕ ಸೇವಾ ಅಧಿಕಾರಿಗಳ ತಂಡ ಗುರುವಾರ ಪ್ರಧಾನಿ ನರೇಂದ್ರ ಮೋದಿಯವರಿಗೆ ಬಹಿರಂಗ ಪತ್ರ ಬರೆದಿದೆ.

ಕೋವಿಡ್ ಬಿಕ್ಕಟ್ಟಿನ "ಸಮರ್ಥ" ನಿರ್ವಹಣೆಯ ಬಗ್ಗೆ ಕೇಂದ್ರ ಸರ್ಕಾರ ಹೆಚ್ಚು ಕಾಳಜಿ ತೋರುತ್ತಿದೆ ಎಂದಿರುವ ಮಾಜಿ ಅಧಿಕಾರಿಗಳು, "ಈ ಸಾಂಕ್ರಾಮಿಕ ರೋಗವು ಇಡೀ ಜಗತ್ತಿಗೆ ಅಪಾಯಕಾರಿಯಾಗಿದ್ದು, ಅದು ಭಾರತದ ನಾಗರಿಕರನ್ನು ಬಿಡುವುದಿಲ್ಲ ಎಂದು ನಮಗೆ ತಿಳಿದಿದೆ" ಎಂದಿದ್ದಾರೆ.

ಕೋವಿಡ್ ಎರಡನೇ ಅಲೆಯ ಬಗ್ಗೆ ಅಂತರರಾಷ್ಟ್ರೀಯ ಸಮುದಾಯ ಮತ್ತು ಭಾರತೀಯ ವಿಜ್ಞಾನಿಗಳ ಎಚ್ಚರಿಕೆಗಳ ಹೊರತಾಗಿಯೂ, ವೈದ್ಯಕೀಯ ಸಿಬ್ಬಂದಿ, ಆಸ್ಪತ್ರೆ ಹಾಸಿಗೆಗಳು, ಆಮ್ಲಜನಕ ಸರಬರಾಜು, ವೆಂಟಿಲೇಟರ್‌ಗಳು, ಔಷಧಿಗಳು ಮತ್ತು ಇತರ ವೈದ್ಯಕೀಯ ಸರಬರಾಜುಗಳಂತಹ ನಿರ್ಣಾಯಕ ಸಂಪನ್ಮೂಲಗಳನ್ನು ವೃದ್ಧಿಸಿಕೊಳ್ಳಲು ಸಾಧ್ಯವಾಗಿಲ್ಲ ಎಂದು ಮಾಜಿ ಅಧಿಕಾರಿಗಳು ಹೇಳಿದ್ದಾರೆ.

ಮಾಜಿ ಕ್ಯಾಬಿನೆಟ್ ಕಾರ್ಯದರ್ಶಿ ಕೆ.ಎಂ.ಚಂದ್ರಶೇಖರ್, ಮಾಜಿ ಆರೋಗ್ಯ ಕಾರ್ಯದರ್ಶಿ ಕೆ. ಹಬೀಬುಲ್ಲಾ ಮತ್ತು ದೆಹಲಿಯ ಮಾಜಿ ಲೆಫ್ಟಿನೆಂಟ್ ಗವರ್ನರ್ ನಜೀಬ್ ಜಂಗ್. ಮಾಜಿ ಆರೋಗ್ಯ ಕಾರ್ಯದರ್ಶಿ ಕೆ ಸುಜಾತಾ ರಾವ್, ಮಾಜಿ ವಿದೇಶಾಂಗ ಕಾರ್ಯದರ್ಶಿ ಮತ್ತು ಮಾಜಿ ರಾಷ್ಟ್ರೀಯ ಭದ್ರತಾ ಸಲಹೆಗಾರ ಶಿವಶಂಕರ್ ಮೆನನ್, ಪ್ರಧಾನ ಮಂತ್ರಿ ಮಾಜಿ ಸಲಹೆಗಾರ ಟಿ ಕೆ ಎ ನಾಯರ್ ಸೇರಿದಂತೆ 116 ನಾಗರಿಕ ಸೇವಾ ಅಧಿಕಾರಿಗಳು ಪ್ರಧಾನಿಗೆ ಬರೆದ ಪತ್ರಕ್ಕೆ ಸಹಿ ಹಾಕಿದ್ದಾರೆ.

SCROLL FOR NEXT