ದೇಶ

ಹರಿಯಾಣ: ಆರ್‌ಡಿಎಕ್ಸ್ ನೊಂದಿಗೆ ಸ್ಫೋಟಕ ಸಾಧನ ವಶಪಡಿಸಿಕೊಂಡ ಪೊಲೀಸರು

Nagaraja AB

ಕುರುಕ್ಷೇತ್ರ: ಹರಿಯಾಣ ಪೊಲೀಸರ ವಿಶೇಷ ಕಾರ್ಯಪಡೆ ಗುರುವಾರ ಕುರುಕ್ಷೇತ್ರ ಜಿಲ್ಲೆಯ ಶಹಾಬಾದ್ ಬಳಿ ಸುಮಾರು 1.3 ಕೆಜಿ ಆರ್‌ಡಿಎಕ್ಸ್‌ನೊಂದಿಗೆ ಪ್ಯಾಕ್ ಮಾಡಲಾದ ಸುಧಾರಿತ ಸ್ಫೋಟಕ ಸಾಧನವನ್ನು ವಶಪಡಿಸಿಕೊಂಡಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಈ ಸಂಬಂಧ ಪಂಜಾಬ್‌ನ ತರ್ನ್ ತರನ್ ಮೂಲದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಅವರು ಹೇಳಿದ್ದಾರೆ.

 ರಾಜಧಾನಿ ಚಂಡೀಗಢದಿಂದ ಸುಮಾರು 70 ಕಿಮೀ ದೂರದಲ್ಲಿರುವ ಅಂಬಾಲಾ-ದೆಹಲಿ ರಾಷ್ಟ್ರೀಯ ಹೆದ್ದಾರಿಯ ಸರ್ವೀಸ್ ಲೇನ್ ಬಳಿಯಿಂದ ಇದನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಕುರುಕ್ಷೇತ್ರದ ಪೊಲೀಸ್ ವರಿಷ್ಠಾಧಿಕಾರಿ ಸುರೀಂದರ್ ಸಿಂಗ್ ಭೋರಿಯಾ ತಿಳಿಸಿರುವುದಾಗಿ ಪಿಟಿಐ ಸುದ್ದಿಸಂಸ್ಥೆ ವರದಿ ಮಾಡಿದೆ.

ದೊರೆತ ಮಾಹಿತಿ ಆಧಾರದ ಮೇಲೆ ಎಸ್‌ಟಿಎಫ್ ಕಾರ್ಯಾಚರಣೆ ನಡೆಸಿ ಜನನಿಬಿಡ ರಾಷ್ಟ್ರೀಯ ಹೆದ್ದಾರಿಯಿಂದ ಸ್ಫೋಟಕವನ್ನು ವಶಪಡಿಸಿಕೊಂಡಿದೆ ಎಂದು ಇನ್ನೊಬ್ಬ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಬಂಧಿತ ವ್ಯಕ್ತಿ ಭಯೋತ್ಪಾದನಾ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಮತ್ತು ಇತ್ತೀಚೆಗೆ ಐಇಡಿ ಇರಿಸಿದ್ದ ಎಂದು ಎಸ್ಪಿ ತಿಳಿಸಿದ್ದಾರೆ.

ಸ್ವಾತಂತ್ರ್ಯ ದಿನಾಚರಣೆಗೆ ಕೆಲ ದಿನಗಳು ಬಾಕಿಯಿರುವಾಗಲೇ ಸ್ಪೋಟಕವನ್ನು ಪೊಲೀಸರು ವಶಕ್ಕೆ ಪಡಿದ್ದಾರೆ. ಸ್ಪೋಟಕ ದೊರೆತ ಪ್ರದೇಶವನ್ನು ಸೀಲ್ ಮಾಡಲಾಗಿದೆ ಮತ್ತು ಬಾಂಬ್ ನಿಷ್ಕ್ರಿಯ ದಳವನ್ನು  ಕರೆಸಿ, ಸ್ಫೋಟಕವನ್ನು ನಿಷ್ಕ್ರಿಯಗೊಳಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

SCROLL FOR NEXT