ದೇಶ

ದಲಿತ ಯುವಕನಿಗೆ ಚಪ್ಪಲಿಯಿಂದ ಥಳಿತ; ಇಬ್ಬರ ವಿರುದ್ಧ ಪ್ರಕರಣ ದಾಖಲು: ಓರ್ವನ ಬಂಧನ

Ramyashree GN

ಮುಜಾಫರ್‌ನಗರ: ಉತ್ತರ ಪ್ರದೇಶದ ಮುಜಾಫರ್‌ನಗರದಲ್ಲಿ ದಲಿತ ಯುವಕನೊಬ್ಬನಿಗೆ ಚಪ್ಪಲಿಯಿಂದ ಥಳಿಸಿರುವ ಘಟನೆಯ ವಿಡಿಯೋ ಅಂತರ್ಜಾಲದಲ್ಲಿ ವೈರಲ್ ಆದ ನಂತರ ಇಬ್ಬರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಪೊಲೀಸರ ಪ್ರಕಾರ, ದಲಿತ ವ್ಯಕ್ತಿ ದಿನೇಶ್ ಕುಮಾರ್ (27) ಎಂಬಾತನನ್ನು ತಾಜ್‌ಪುರದ ಗ್ರಾಮದ ಮುಖ್ಯಸ್ಥ ಶಕ್ತಿ ಮೋಹನ್ ಗುರ್ಜರ್ ಮತ್ತು ರೆಟಾ ನಾಗ್ಲಾ ಗ್ರಾಮದ ಮಾಜಿ ಮುಖಂಡ ಗಜೆ ಸಿಂಗ್ ಚಪ್ಪಲಿಯಿಂದ ಹೊಡೆದು ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ತಿಳಿಸಿದ್ದಾರೆ.

ಭಾರತೀಯ ದಂಡ ಸಂಹಿತೆಯ (ಐಪಿಸಿ) ವಿವಿಧ ಸೆಕ್ಷನ್‌ಗಳು ಮತ್ತು ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಇಬ್ಬರ ಮೇಲೂ ಪ್ರಕರಣ ದಾಖಲಿಸಲಾಗಿದೆ. ಗ್ರಾಮದ ಮುಖಂಡ ಶಕ್ತಿ ಮೋಹನ್‌ನನ್ನು ಪೊಲೀಸರು ಬಂಧಿಸಿದ್ದು, ಎರಡನೇ ಆರೋಪಿಗಾಗಿ ಶೋಧಕಾರ್ಯ ನಡೆಸುತ್ತಿದ್ದಾರೆ ಎಂದು ನಗರದ ಪೊಲೀಸ್ ವರಿಷ್ಠಾಧಿಕಾರಿ ಅರ್ಪಿತ್ ವಿಜಯವರ್ಗಿಯ ಸುದ್ದಿಗಾರರಿಗೆ ತಿಳಿಸಿದ್ದಾರೆ.

ದಲಿತ ಸಮುದಾಯದ ಸದಸ್ಯರೊಂದಿಗೆ ಭೀಮ್ ಆರ್ಮಿ ಸಂಘಟನೆಯ ಕಾರ್ಯಕರ್ತರು ಘಟನೆಯನ್ನು ಖಂಡಿಸಿ ಛಾಪರ್ ಪೊಲೀಸ್ ಠಾಣೆ ಹೊರಗೆ ಧರಣಿ ನಡೆಸಿ ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿದ್ದಾರೆ. ಈ ಪ್ರದೇಶದಲ್ಲಿ ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದಾರೆ.

SCROLL FOR NEXT