ನವದೆಹಲಿ: ಬಿಲ್ಕಿಸ್ ಬಾನೋ ಪ್ರಕರಣದಲ್ಲಿ 11 ಅಪರಾಧಿಗಳಿಗೆ ಕ್ಷಮಾಪಣೆ ನೀಡಿರುವುದನ್ನು ಪ್ರಶ್ನಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯೊಂದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಗುರುವಾರ ಕೇಂದ್ರ ಹಾಗೂ ಗುಜರಾತ್ ಸರ್ಕಾರಕ್ಕೆ ನೋಟಿಸ್ ನೀಡಿದೆ.
ಸಾಮಾಜಿಕ ಕಾರ್ಯಕರ್ತೆ ಸುಬಾಶಿಣಿ ಆಲಿ, ಪತ್ರಕರ್ತೆ ರೇವತಿ ಲಾಲು ಮತ್ತು ಪ್ರೊಫೆಸರ್ ರೂಪ್ ರೇಖಾ ವರ್ಮಾ ಅವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ. ಎರಡು ವಾರಗಳೊಳಗೆ ಪ್ರತಿಕ್ರಿಯೆ ನೀಡುವಂತೆ ಮುಖ್ಯ ನ್ಯಾಯಮೂರ್ತಿ ಎನ್ ವಿ ರಮಣ, ನ್ಯಾಯಮೂರ್ತಿಗಳಾದ ಅಜಯ್ ರಾಸ್ಟೊಗಿ ಮತ್ತು ವಿಕ್ರಮ್ ನಾಥ್ ಅವರನ್ನೊಳಗೊಂಡ ನ್ಯಾಯಪೀಠ ಹೇಳಿದೆ.
ಇದನ್ನೂ ಓದಿ: 'ಜೈಲಿನಿಂದ ಹೊರಬಂದ ಅಪರಾಧಿಗಳನ್ನು ಸನ್ಮಾನಿಸಿದ್ದು ಕೀಳು ಅಭಿರುಚಿಯನ್ನು ತೋರಿಸುತ್ತದೆ': ಬಿಲ್ಕಿಸ್ ಬಾನೋ ಪ್ರಕರಣದ ನ್ಯಾಯಾಧೀಶ
ಸಾಮಾಜಿಕ ಹೋರಾಟಗಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ಕಪಿಲ್ ಸಿಬಲ್, ಗರ್ಭಿಣಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಲಾಗಿದೆ. ಸುಮಾರು 14 ಜನರ ಹತ್ಯೆಯಾಗಿದೆ. ಆದಾಗ್ಯೂ, ಯಾವ ತತ್ವದ ಆಧಾರದ ಮೇಲೆ ಅಪರಾಧಿಗಳಿಗೆ ಕ್ಷಮಾಪಣೆ ನೀಡಲಾಗಿದೆ ಎಂದು ಪ್ರಶ್ನಿಸಿದರು. ಅಪರಾಧ ಭಯಾನಕವಾಗಿದ್ದು, ಕ್ಷಮಾಪಣೆ ತಪ್ಪಿನಿಂದ ಕೂಡಿದೆ ಎಂದು ನ್ಯಾಯಮೂರ್ತಿ ರಾಸ್ಟೋಗಿ ಹೇಳಿದರು.
2002ರಲ್ಲಿ ಗೋಧ್ರಾ ಹತ್ಯಾಕಾಂಡ ಸಮಯದಲ್ಲಿ ಗರ್ಭಿಣಿ ಬಿಲ್ಕಿಸ್ ಬಾನೊ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಲಾಗಿತ್ತು. ಅಲ್ಲದೇ, ಆಕೆಯ ಮೂರು ವರ್ಷದ ಮಗಳನ್ನು ಗುಂಪೊಂದು ಹತ್ಯೆ ಮಾಡಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜೀವಾವಧಿ ಶಿಕ್ಷೆ ಎದುರಿಸಿದ್ದ 11 ಮಂದಿ ಅಪರಾಧಿಗಳನ್ನು ಬಿಡುಗಡೆ ಮಾಡಿದ ಗುಜರಾತ್ ಸರ್ಕಾರದ ನಿರ್ಧಾರ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.