ಬರ್ವಾನಿ: ಮಧ್ಯಪ್ರದೇಶದ ಬರ್ವಾನಿ ಜಿಲ್ಲೆಯಲ್ಲಿ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆಯಲ್ಲಿ ಭಾಗವಹಿಸಿದ್ದಕ್ಕಾಗಿ ಶಾಲಾ ಶಿಕ್ಷಕನನ್ನು ಅಮಾನತುಗೊಳಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.
ರಾಜ್ಯದ ಬುಡಕಟ್ಟು ವ್ಯವಹಾರಗಳ ಇಲಾಖೆಯ ಅಡಿಯಲ್ಲಿರುವ ಕನಸ್ಯ ಸರ್ಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕ ರಾಜೇಶ್ ಕನ್ನೋಜೆ ಎಂಬುವವರನ್ನು ನವೆಂಬರ್ 25 ರಂದು ಅಮಾನತುಗೊಳಿಸಲಾಗಿದೆ. ಆದರೆ, ಅವರ ಅಮಾನಚು ಆದೇಶವು ಸಾಮಾಜಿಕ ಮಾಧ್ಯಮಗಳಲ್ಲಿ ಕಾಣಿಸಿಕೊಂಡ ನಂತರ ಈ ವಿಚಾರ ಬೆಳಕಿಗೆ ಬಂದಿದೆ.
ಸೇವಾ ನೀತಿ ನಿಯಮಗಳ ಉಲ್ಲಂಘನೆ ಹಾಗೂ ರಾಜಕೀಯ ರ್ಯಾಲಿಯಲ್ಲಿ ಭಾಗವಹಿಸಿದ್ದಕ್ಕಾಗಿ ಕನ್ನೋಜೆ ಅವರನ್ನು ಅಮಾನತುಗೊಳಿಸಲಾಗಿದೆ.
ಇದನ್ನೂ ಓದಿ: ಗಣರಾಜ್ಯೋತ್ಸವ ದಿನದಂದು ಕಾಶ್ಮೀರದಲ್ಲಿ ತ್ರಿವರ್ಣ ಧ್ವಜ ಹಾರಿಸುವ ಮೂಲಕ ಭಾರತ್ ಜೋಡೋ ಯಾತ್ರೆ ಕೊನೆಗೊಳಿಸಲು ಕಾಂಗ್ರೆಸ್ ನಿರ್ಧಾರ
'ಪ್ರಮುಖ ಕೆಲಸಗಳಿರುವುದನ್ನು ಉಲ್ಲೇಖಿಸಿ ಅವರು ರಜೆ ಕೋರಿದ್ದರು. ಆದರೆ, ರಾಜಕೀಯ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ ನಂತರ ಅವರು ಸಾಮಾಜಿಕ ಮಾಧ್ಯಮದಲ್ಲಿ ಫೋಟೋಗಳನ್ನು ಪೋಸ್ಟ್ ಮಾಡಿದ್ದಾರೆ' ಎಂದು ಬುಡಕಟ್ಟು ವ್ಯವಹಾರಗಳ ಇಲಾಖೆಯ ಸಹಾಯಕ ಆಯುಕ್ತ ಎನ್.ಎಸ್. ರಘುವಂಶಿ ಹೇಳಿದ್ದಾರೆ.
ಆದೇಶದ ಪ್ರಕಾರ, ನವೆಂಬರ್ 24 ರಂದು ರಾಜಕೀಯ ಪಕ್ಷವೊಂದು ನಡೆಸುತ್ತಿರುವ ಭಾರತ್ ಜೋಡೋ ಯಾತ್ರೆಗೆ ಹಾಜರಾಗುವ ಮೂಲಕ ಕನ್ನೋಜೆ ಅವರು ಸೇವಾ ನಡವಳಿಕೆ ನಿಯಮಗಳನ್ನು ಉಲ್ಲಂಘಿಸಿದ್ದಾರೆ ಎಂದು ತಿಳಿಸಲಾಗಿದೆ.