ದೇಶ

ಉತ್ತರ ಪ್ರದೇಶ: ಶಾಲಾ ಬಸ್ ಪಲ್ಟಿ, ಓರ್ವ ಸಾವು, 8 ವಿದ್ಯಾರ್ಥಿಗಳು ಸೇರಿ 9 ಮಂದಿಗೆ ಗಾಯ

Lingaraj Badiger

ಗೋರಖ್‌ಪುರ: ಸೈಕಲ್ ಸವಾರನಿಗೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸುವ ಯತ್ನದಲ್ಲಿ ಶಾಲಾ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ 10 ಅಡಿ ಆಳದ ಹೊಂಡಕ್ಕೆ ಬಿದ್ದ ಪರಿಣಾಮ ಓರ್ವ ವ್ಯಕ್ತಿ ಮೃತಪಟ್ಟಿದ್ದು, ಒಂಬತ್ತು ಮಂದಿ ಗಾಯಗೊಂಡಿರುವ ಘಟನೆ ಭಾನುವಾರ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಖೋರಬಾರ್ ಪೊಲೀಸ್ ಠಾಣೆ ವ್ಯಾಪ್ತಿಯ ಭೈಂಸಾ ಧೋಡಾ ಗ್ರಾಮದಲ್ಲಿ ಈ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಸೈಕಲ್ ಸವಾರ ತಿಲಕಧಾರಿ(50) ಮೃತಪಟ್ಟಿದ್ದು, ಬಸ್ ಚಾಲಕ ಧರ್ಮೇಂದ್ರ ಯಾದವ್(28) ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ಅವರು ಹೇಳಿದ್ದಾರೆ.

62 ಪ್ರಯಾಣಿಕರಿದ್ದ ಬಸ್ ಡಿಯೋರಿಯಾದಿಂದ ಗೋರಖ್‌ಪುರಕ್ಕೆ ಹೋಗುತ್ತಿತ್ತು ಎಂದು ಶಾಲೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸೈಕಲ್ ಸವಾರನಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಯತ್ನಿಸಿದ ಶಾಲಾ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ 10 ಅಡಿ ಆಳದ ಹೊಂಡಕ್ಕೆ ಬಿದ್ದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸೈಕಲ್ ಸವಾರ ಸ್ಥಳದಲ್ಲೇ ಮೃತಪಟ್ಟರೆ, ಬಸ್ ಚಾಲಕ ಹಾಗೂ ಎಂಟು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.

ಅಪಘಾತದ ಬಗ್ಗೆ ಮಾಹಿತಿ ಪಡೆದ ನಂತರ ಖೋರಾಬರ್ ಠಾಣೆ ಮತ್ತು ರಾಮನಗರ ಕರ್ಜಹಾ ಪೋಸ್ಟ್‌ನ ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿದರು ಎಂದು ಅವರು ಹೇಳಿದ್ದಾರೆ.

SCROLL FOR NEXT