ನವದೆಹಲಿ: ಜೈಲಿನಲ್ಲಿರುವ ಆಮ್ ಆದ್ಮಿ ಪಕ್ಷದ ನಾಯಕ ಸತ್ಯೇಂದ್ರ ಜೈನ್ ಅವರ ಜಾಮೀನು ಅರ್ಜಿಯ ವಿಚಾರಣೆಯನ್ನು ದೆಹಲಿ ಹೈಕೋರ್ಟ್ ಮಂಗಳವಾರ ಮುಂದಿನ ವರ್ಷ ಜನವರಿ 5ಕ್ಕೆ ಮುಂದೂಡಿದೆ.
ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಜಾಮೀನು ನಿರಾಕರಿಸಿದ ವಿಚಾರಣಾಧೀನ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಜೈನ್ ಮತ್ತು ಇಬ್ಬರು ಸಹ ಆರೋಪಿಗಳು (ಅಂಕುಶ್ ಜೈನ್ ಮತ್ತು ವೈಭವ್ ಜೈನ್) ಸಲ್ಲಿಸಿರುವ ಮನವಿಯನ್ನು ನ್ಯಾಯಮೂರ್ತಿ ದಿನೇಶ್ ಕುಮಾರ್ ಶರ್ಮಾ ಅವರು ಆಲಿಸುವ ನಿರೀಕ್ಷೆಯಿದೆ. ವಿಶೇಷ ನ್ಯಾಯಾಧೀಶ ವಿಕಾಸ್ ಧುಲ್ ಅವರು ನವೆಂಬರ್ 17 ರಂದು ಮೂವರಿಗೂ ಜಾಮೀನು ನಿರಾಕರಿಸಿದ್ದಾರೆ.
ಪ್ರಕರಣದಲ್ಲಿ ಜೈನ್ ಅವರ ಜಾಮೀನು ಅರ್ಜಿಯ ಕುರಿತು ಡಿಸೆಂಬರ್ 1ರಂದು ಹೈಕೋರ್ಟ್, ಜಾರಿ ನಿರ್ದೇಶನಾಲಯದ (ಇ.ಡಿ) ಪ್ರತಿಕ್ರಿಯೆ ಕೇಳಿತ್ತು. ಎರಡು ವಾರಗಳಲ್ಲಿ ಪ್ರತಿಕ್ರಿಯೆ ಸಲ್ಲಿಸುವಂತೆ ನ್ಯಾಯಮರ್ತಿ ಶರ್ಮಾ ಅವರು ಇ.ಡಿಗೆ ಸೂಚಿಸಿದ್ದರು.
ಡಿ. 12 ರಂದು ಜೈನ್ ಅವರ ಸಹ ಆರೋಪಿಗಳಾದ ಅಂಕುಶ್ ಜೈನ್ ಮತ್ತು ವೈಭವ್ ಜೈನ್ ಅವರು ಸಲ್ಲಿಸಿದ ಜಾಮೀನು ಅರ್ಜಿಗಳ ಕುರಿತು ಹೈಕೋರ್ಟ್ ಇ.ಡಿಗೆ ನೋಟಿಸ್ ಜಾರಿ ಮಾಡಿತು.
ಇದನ್ನೂ ಓದಿ: ದೆಹಲಿ ಸಚಿವ ಸತ್ಯೇಂದ್ರ ಜೈನ್ ಗೆ ತಿಹಾರ್ ಜೈಲಿನಲ್ಲಿ ಪೋಕ್ಸೋ ಅಪರಾಧಿಯಿಂದ ಒತ್ತಾಯಪೂರ್ವಕವಾಗಿ ರಾಜಾತಿಥ್ಯ!
ಪ್ರಕರಣಕ್ಕೆ ಸಂಬಂಧಿಸಿದಂತೆ ಸತ್ಯೇಂದ್ರ ಜೈನ್ ಮತ್ತು ಇತರರ ವಿರುದ್ಧ ಇ.ಡಿ ನ್ಯಾಯಾಲಯದ ಮುಂದೆ ಜುಲೈ 27 ರಂದು ಚಾರ್ಜ್ ಶೀಟ್ ಸಲ್ಲಿಸಿದೆ. ಜೈನ್ ಅವರು ದೆಹಲಿ ಸರ್ಕಾರದಲ್ಲಿ ಸಚಿವರಾಗಿದ್ದ ಅವಧಿಯಲ್ಲಿ (2015ರ ಫೆಬ್ರವರಿ 14 ರಿಂದ 2017 ರ ಮೇ 31 ರವರೆಗೆ) ಜೈನ್ ಅವರೊಂದಿಗೆ ನಂಟು ಹೊಂದಿರುವ ನಾಲ್ಕು ಕಂಪನಿಗಳ ಮೂಲಕ ಹಣ ಲಪಟಾಯಿಸಿದ್ದಾರೆ ಎಂದು ಆರೋಪಿಸಲಾಗಿದೆ.
2002 ರ ಮನಿ ಲಾಂಡರಿಂಗ್ ತಡೆ ಕಾಯ್ದೆಯ ಸೆಕ್ಷನ್ 19 ರ ಅಡಿಯಲ್ಲಿ ಕೇಂದ್ರೀಯ ಸಂಸ್ಥೆಯು ಮೇ 30 ರಂದು ಜೈನ್ ಅವರನ್ನು ಬಂಧಿಸಿತು.
2002ರ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯ ಸೆಕ್ಷನ್ 19ರ ಅಡಿಯಲ್ಲಿ ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಮೇ 30ರಂದು ಬಂಧಿಸಿದೆ.