ನವದೆಹಲಿ: ಭಾರತ ಮತ್ತು ಚೀನಾ ನಡುವಿನ ಗಡಿ ಉದ್ವಿಗ್ನತೆ ಕುರಿತು ಚರ್ಚೆಗೆ ಒತ್ತಾಯಿಸಿ ವಿವಿಧ ವಿರೋಧ ಪಕ್ಷಗಳ ನಾಯಕರು ಬುಧವಾರ ಸಂಸತ್ತಿನ ಸಂಕೀರ್ಣದಲ್ಲಿರುವ ಮಹಾತ್ಮ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದರು.
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆಯ ವಿರೋಧ ಪಕ್ಷದ ನಾಯಕ ಅಧೀರ್ ರಂಜನ್ ಚೌಧರಿ ಸೇರಿದಂತೆ ಇತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಸಿಪಿಐ, ಸಿಪಿಐ-ಎಂ, ಆರ್ಜೆಡಿ, ಜೆಡಿಯು, ಶಿವಸೇನೆ, ಡಿಎಂಕೆ ಮತ್ತು ಎನ್ಸಿಪಿ ಸೇರಿದಂತೆ ಸುಮಾರು 12 ವಿರೋಧ ಪಕ್ಷಗಳ ಸಂಸದರು ಪ್ರತಿಭಟನೆಯಲ್ಲಿ ಪಾಲ್ಗೊಂಡು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.
ಚೀನಾದ ಅಕ್ರಮಗಳ ಕುರಿತು ಸಂಸತ್ತಿನಲ್ಲಿ ಕೇಳಲಾದ ಪ್ರಶ್ನೆಗಳಿಗೆ ಸರ್ಕಾರ ಉತ್ತರಿಸಬೇಕು ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ಈ ಬಗ್ಗೆ ಮೌನ ಮುರಿಯಬೇಕು ಎಂದು ಒತ್ತಾಯಿಸಿದರು.
ಡಿಸೆಂಬರ್ 7 ರಂದು ಚಳಿಗಾಲದ ಅಧಿವೇಶನ ಪ್ರಾರಂಭವಾದಾಗಿನಿಂದ ಭಾರತ-ಚೀನಾ ಗಡಿ ಉದ್ವಿಗ್ನತೆ ಮತ್ತು ಇತ್ತೀಚಿನ ಚೀನಾದ ಉಲ್ಲಂಘನೆಗಳ ಬಗ್ಗೆ ಚರ್ಚೆಗೆ ವಿರೋಧ ಪಕ್ಷಗಳು ಒತ್ತಾಯಿಸುತ್ತಿವೆ.
ಹಲವು ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ಈ ವಿಷಯದ ಬಗ್ಗೆ ಚರ್ಚೆಗೆ ಕೋರಿ ಮುಂದೂಡಿಕೆ ನೋಟಿಸ್ ನೀಡಿದ್ದಾರೆ.
ಡಿಸೆಂಬರ್ 9 ರಂದು ಅರುಣಾಚಲ ಪ್ರದೇಶದ ತವಾಂಗ್ ಸೆಕ್ಟರ್ನಲ್ಲಿ ಭಾರತ ಮತ್ತು ಚೀನಾದ ಸೈನಿಕರು ವಾಸ್ತವ ನಿಯಂತ್ರಣ ರೇಖೆಯ ಉದ್ದಕ್ಕೂ (ಎಲ್ಎಸಿ) ಘರ್ಷಣೆ ನಡೆಸಿದರು ಮತ್ತು 'ಮುಖಾಮುಖಿಯಲ್ಲಿ ಎರಡೂ ಕಡೆಯ ಕೆಲವು ಸಿಬ್ಬಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ' ಎಂದು ಭಾರತೀಯ ಸೇನೆ ತಿಳಿಸಿದೆ.