ನವದೆಹಲಿ: ಕರ್ನಾಟಕದ ನಾಯಕರು ದೆಹಲಿಯಲ್ಲಿ ಸುದೀರ್ಘ ಚರ್ಚೆ, ಮಾತುಕತೆ ನಡೆಸಿದ ನಂತರ ಕಾಂಗ್ರೆಸ್ ಪಕ್ಷ 2023ರ ವಿಧಾನಸಭೆ ಚುನಾವಣೆಯನ್ನು ಸಾಮೂಹಿಕವಾಗಿ ಎದುರಿಸಲು ನಿರ್ಧರಿಸಿದೆ.
ದೆಹಲಿಯಲ್ಲಿ ರಾಹುಲ್ ಗಾಂಧಿಯವರ ನಿವಾಸದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇತರ ಉನ್ನತ ನಾಯಕರೊಂದಿಗೆ ಸಭೆ ನಡೆಸಿದ್ದು ಅದರಲ್ಲಿ ಮುಂಬರುವ ಚುನಾವಣೆ ಕುರಿತು ಕಾರ್ಯತಂತ್ರ ರೂಪಿಸುವ ಕುರಿತು ಚರ್ಚಿಸಲಾಯಿತು. ಎಐಸಿಸಿ ಕರ್ನಾಟಕ ಉಸ್ತುವಾರಿ ರಂದೀಪ್ ಸುರ್ಜೆವಾಲಾ ಕೂಡ ಸಭೆಯಲ್ಲಿ ಹಾಜರಿದ್ದರು.
ಮೂಲಗಳಿಂದ ಸಿಕ್ಕಿರುವ ಮಾಹಿತಿ ಪ್ರಕಾರ, ರಾಜ್ಯ ನಾಯಕತ್ವದ ಒಂದು ಬಣ, ಮುಂಬರುವ ಚುನಾವಣೆಯಲ್ಲಿ ಮುಖ್ಯಮಂತ್ರಿ ಅಭ್ಯರ್ಥಿಯ ಹೆಸರು ಘೋಷಿಸದೆ ಸಾಮೂಹಿಕ ನಾಯಕತ್ವದಡಿ ಚುನಾವಣೆಯನ್ನು ಎದುರಿಸಬೇಕೆಂದು ಹೇಳುತ್ತಿದೆ.
ಇದನ್ನೂ ಓದಿ: ಸಿದ್ದರಾಮೋತ್ಸವದ ಬಳಿಕ ನಿಮ್ಮ ಪರಿಸ್ಥಿತಿ ಇದೇ; ಈ ಎರಡೂ ಬಣಗಳ ನಡುವೆ ದೆಹಲಿಯ ನಕಲಿ ಗಾಂಧಿಗಳ ಬಣ ಮೂಕ ಪ್ರೇಕ್ಷಕರಷ್ಟೇ!
ರಾಜ್ಯದಲ್ಲಿ ಆಡಳಿತಾರೂಢ ಬಿಜೆಪಿಯನ್ನು ಎದುರಿಸಲು ಸಾಮೂಹಿಕ ಪ್ರಯತ್ನ ಮುಖ್ಯವಾಗಿದ್ದು ಒಗ್ಗಟ್ಟಿನಿಂದ ಎಲ್ಲಾ ನಾಯಕರು ಎದುರಿಸಬೇಕೆಂದು ಮೂಲಗಳು ಹೇಳುತ್ತಿವೆ.
ಕರ್ನಾಟಕ ಕಾಂಗ್ರೆಸ್ ಸದ್ಯದಲ್ಲಿಯೇ ರಾಜ್ಯದಲ್ಲಿ ಪ್ರಚಾರ ಕಾರ್ಯವನ್ನು ಪ್ರಾರಂಭಿಸಲಿದೆ. ಮುಂದಿನ ವರ್ಷ ಏಪ್ರಿಲ್ ನಲ್ಲಿ ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು ಪ್ರಮುಖ ಪಕ್ಷಗಳು ತಮ್ಮದೇ ಆದ ರೀತಿಯಲ್ಲಿ ಸಿದ್ಧತೆ ಮಾಡಿಕೊಳ್ಳುತ್ತಿವೆ.