ಮುಂಬೈ: ಮಹಾರಾಷ್ಟ್ರದ ರಾಜಕೀಯ ಬಿಕ್ಕಟ್ಟಿನಲ್ಲಿ ಭಾಗಿಯಾಗಿರುವ ಎರಡೂ ಬಣಗಳ ಶಿವಸೇನೆ ಶಾಸಕರನ್ನು ಅನರ್ಹಗೊಳಿಸುವ ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ. ಅಲ್ಲದೆ ಈ ಪ್ರಕರಣದ ವಿಚಾರಣೆ ನಡೆಸಲು ಸ್ವಲ್ಪ ಸಮಯ ಬೇಕಾಗುತ್ತದೆ ಎಂದು ಹೇಳಿದೆ.
ಉದ್ಧವ್ ಠಾಕ್ರೆ ಬಣದ ಪರ ವಾದ ಮಂಡಿಸಿದ ಕಪಿಲ್ ಸಿಬಲ್, ಏಕನಾಥ್ ಶಿಂಧೆ ಅವರ 39 ಶಾಸಕರ ಅನರ್ಹತೆಗೆ ಸಂಬಂಧಿಸಿದ ಪ್ರಕರಣ ಜುಲೈ 27ರಂದು ನಡೆಯಲಿದೆ ಎಂದು ಸುಪ್ರೀಂ ಕೋರ್ಟ್ ಹೇಳಿರುವುದಾಗಿ ತಿಳಿಸಿದ್ದಾರೆ.
ಪ್ರಕರಣವನ್ನು ನಿರ್ಧರಿಸಲು ಹೊಸ ಪೀಠವನ್ನು ರಚಿಸುವವರೆಗೆ ಶಾಸಕರ ವಿರುದ್ಧ ಯಾವುದೇ ಕ್ರಮ ಅಥವಾ ವಿಚಾರಣೆಯನ್ನು ತೆಗೆದುಕೊಳ್ಳಬಾರದು ಎಂದು ಮಹಾರಾಷ್ಟ್ರ ವಿಧಾನಸಭೆ ಸ್ಪೀಕರ್ ರಾಹುಲ್ ನಾರ್ವೇಕರ್ ಅವರಿಗೆ ತಿಳಿಸುವಂತೆ ನ್ಯಾಯಾಲಯವು ಅರ್ಜಿದಾರರರಿಗೆ ಸೂಚಿಸಿದೆ.
ಇದನ್ನು ಓದಿ: ಸಿಎಂ ಹುದ್ದೆಗೆ ಏಕನಾಥ್ ಶಿಂಧೆ ನೇಮಕ ಪ್ರಶ್ನಿಸಿ ಅರ್ಜಿ: ಜುಲೈ 11 ರಂದು ಸುಪ್ರೀಂ ಕೋರ್ಟ್ ನಲ್ಲಿ ವಿಚಾರಣೆ
ರಾಜ್ಯಪಾಲರ ಪರ ವಾದ ಮಂಡಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು, ಈ ಕುರಿತು ಸ್ಪೀಕರ್ಗೆ ತಿಳಿಸುವುದಾಗಿ ಸುಪ್ರೀಂ ಕೋರ್ಟ್ಗೆ ಭರವಸೆ ನೀಡಿದರು.