ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣದ ಸಂಬಂಧ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ವಿರುದ್ಧದ ಜಾರಿ ನಿರ್ದೇಶನಾಲಯ ಕೈಗೊಂಡಿರುವ ಕ್ರಮವನ್ನು ಖಂಡಿಸಿ ಕಾಂಗ್ರೆಸ್ ಸೋಮವಾರ ಪ್ರತಿಭಟನೆ ಆರಂಭಿಸಿದ್ದು, ಈ ಪ್ರತಿಭಟನೆಯನ್ನು ಪೊಲೀಸರು ತಡೆದಿದ್ದಾರೆ. ಅಲ್ಲದೆ, ಹಲವು ನಾಯಕರನ್ನು ವಶಕ್ಕೆ ಪಡೆದುಕೊಂಡಿದ್ದಾರೆಂದು ತಿಳಿದುಬಂದಿದೆ.
ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಕಾಂಗ್ರೆಸ್ ನಾಯಕರು ತಮ್ಮ ನಾಯಕರಿಗೆ ಬೆಂಬಲ ವ್ಯಕ್ತಪಡಿಸಿ ಘೋಷಣೆ ಕೂಗುತ್ತಾ ಪ್ರತಿಭಟನೆ ಆರಂಭಿಸಿದ್ದರು. ಈ ವೇಳೆ ಸ್ಥಳದಲ್ಲಿದ್ದ ಪೊಲೀಸರು ಪ್ರತಿಭಟನೆಯನ್ನು ತಡೆದು, ಹಲವರನ್ನು ವಶಕ್ಕೆ ಪಡೆದುಕೊಂಡರು ಎಂದು ವರದಿಗಳು ತಿಳಿಸಿವೆ.
ಪ್ರತಿಭಟನೆ ವೇಳೆ ಮಾತನಾಡಿರುವ ಕಾಂಗ್ರೆಸ್ ನಾಯಕ ರಣದೀಪ್ ಸಿಂಗ್ ಸುರ್ಜೇವಾಲಾ ಅವರು, ರಾಹುಲ್ ಗಾಂಧಿ ನೇತೃತ್ವದಲ್ಲಿ ಸತ್ಯ ಕಾ ಸಂಗ್ರಾಮ್' ಮುಂದುವರೆಯಲಿದೆ. ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ಬ್ರಿಟಿಷರು ಕೂಡ ಕಾಂಗ್ರೆಸ್ ಧ್ವನಿಯನ್ನು ಹತ್ತಿಕ್ಕಲು ಸಾಧ್ಯವಾಗಲಿಲ್ಲ, ಇನ್ನು ಈ ಆಡಳಿತಾರೂಢ ಬಿಜೆಪಿ ಸರ್ಕಾರ ಏನು ಮಾಡುತ್ತದೆ ಎಂದು ಪ್ರಶ್ನಿಸಿದರು.
ಸೆಕ್ಷನ್ 144 ಜಾರಿ
ಕಾಂಗ್ರೆಸ್ ಪ್ರತಿಭಟನೆ ಹಿನ್ನೆಲೆಯಲ್ಲಿ ದೆಹಲಿ ಪೊಲೀಸರು ರಾಷ್ಟ್ರ ರಾಜಧಾನಿಯಲ್ಲಿ ಸೆಕ್ಷನ್ 144 ಜಾರಿಗೊಳಿಸಿದ್ದಾರೆ. ಸೆಕ್ಷನ್ 144 ಜಾರಿಯಲ್ಲಿರುವ ಹಿನ್ನೆಲೆಯಲ್ಲಿ 4ಕ್ಕೂ ಹೆಚ್ಚು ಜನರು ಒಂದೆಡೆ ಗುಂಪುಗೂಡುವಂತಿಲ್ಲ.
ದೆಹಲಿಯಲ್ಲಿ ಸೆಕ್ಷನ್ 144 ಜಾರಿಗೊಳಿಸಲಾಗಿದೆ. ನಿಯಮ ಉಲ್ಲಂಘಿಸದಂತೆ ಮನವಿ ಮಾಡಿಕೊಳ್ಳುತ್ತೇವೆ. ಒಂದು ವೇಳೆ ಯಾರಾದರೂ ನಿಯಮವನ್ನು ಉಲ್ಲಂಘಿಸಿದ್ದೇ ಆದರೆ, ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ದೆಹಲಿ ಪೊಲೀಸರು ಹೇಳಿದ್ದಾರೆ.
ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಈ ಮೊದಲು ಜೂ. 8ರಂದು ಹಾಗೂ ಅವರ ಪುತ್ರ ಸಂಸದ ರಾಹುಲ್ ಗಾಂಧಿಗೆ ಜೂ. 13ರಂದು ಫೆಡರಲ್ ಏಜೆನ್ಸಿಯ ಎದುರು ವಿಚಾರಣೆಗೆ ಬರುವಂತೆ ಸಮನ್ಸ್ ನೀಡಿತ್ತು.
ಈ ಹಿನ್ನೆಲೆ ಕೇಂದ್ರ ಸರ್ಕಾರ ಜಾರಿ ನಿರ್ದೇಶನಾಲಯ, ಕೇಂದ್ರ ತನಿಖಾ ಸಂಸ್ಥೆ ಮತ್ತಿತರ ಸಂಸ್ಥೆಗಳನ್ನು ದುರುಪಯೋಗ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿ ಇಂದು ಕಾಂಗ್ರೆಸ್ ಪಕ್ಷದ ವತಿಯಿಂದ ಎಐಸಿಸಿ ಕಚೇರಿಯಿಂದ ಇಡಿ ಕಚೇರಿವರೆಗೆ ಪಾದಯಾತ್ರೆ ನಡೆಸಲು ಮುಂದಾಗಿದೆ.
ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಕಾಂಗ್ರೆಸ್ ನಾಯಕ ಮತ್ತು ಸಂಸದ ರಾಹುಲ್ ಗಾಂಧಿ ಅವರು ಜಾರಿ ನಿರ್ದೇಶನಾಲಯ (ಇಡಿ) ಮುಂದೆ ವಿಚಾರಣೆಗೆ ಹಾಜರಾಗಲಿದ್ದಾರೆ.
ಕಾನೂನು ಮತ್ತು ಸುವ್ಯವಸ್ಥೆ ಸಮಸ್ಯೆಗಳು ಸೇರಿದಂತೆ ಕೆಲವು ಕಾರಣಗಳನ್ನು ಉಲ್ಲೇಖಿಸಿ ಸೋಮವಾರ ಜಾರಿ ನಿರ್ದೇಶನಾಲಯ (ಇಡಿ) ಕಚೇರಿವರೆಗೆ ನಡೆಸಲು ಉದ್ದೇಶಿಸಿರುವ ಕಾಂಗ್ರೆಸ್ ರ್ಯಾಲಿಗೆ ಅನುಮತಿ ನೀಡಲಾಗುವುದಿಲ್ಲ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.
ದೆಹಲಿಯಲ್ಲಿ ಪ್ರಸ್ತುತ ಕೋಮು ಪರಿಸ್ಥಿತಿ ಮತ್ತು ಕಾನೂನು ಮತ್ತು ಸುವ್ಯವಸ್ಥೆ ಗಮನದಲ್ಲಿಟ್ಟುಕೊಂಡು ದೆಹಲಿ ವ್ಯಾಪ್ತಿಯಲ್ಲಿ ರ್ಯಾಲಿಗೆ ಅನುಮತಿ ನೀಡಲಾಗುವುದಿಲ್ಲ ಎಂದು ಉಪ ಪೊಲೀಸ್ ಆಯುಕ್ತ ಅಮೃತ ಗುಗುಲೋತ್ ಹೇಳಿದ್ದಾರೆ.
ಏನಿದು ಪ್ರಕರಣ?
ನ್ಯಾಷನಲ್ ಹೆರಾಲ್ಡ್ ಪ್ರಕರಣವು ಜವಾಹರಲಾಲ್ ನೆಹರು ಸ್ಥಾಪಿಸಿದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಯ ಕುರಿತಾಗಿದೆ. ಇದರ ಮಾಲೀಕತ್ವವನ್ನು ಹೊಂದಿರುವ ಪಕ್ಷ - ಪ್ರಚಾರದ ಯಂಗ್ ಇಂಡಿಯನ್ನಲ್ಲಿನ ಹಣಕಾಸಿನ ಅಕ್ರಮ ನಡೆದಿರುವ ಕುರಿತು ತನಿಖೆ ನಡೆಯುತ್ತಿದೆ. ಪತ್ರಿಕೆಯನ್ನು ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್ ಪ್ರಕಟಿಸಿದೆ. ಯಂಗ್ ಇಂಡಿಯನ್ ಪ್ರೈವೇಟ್ ಲಿಮಿಟೆಡ್ ಒಡೆತನದಲ್ಲಿದೆ.