ದೇಶ

'ಅಗ್ನಿಪಥ್' ಯೋಜನೆ ವಿರೋಧಿಸಿ ಭಾರತ್ ಬಂದ್: ಹಲವು ರಾಜ್ಯಗಳಲ್ಲಿ ಬಿಗಿ ಭದ್ರತೆ, 181 ರೈಲುಗಳ ಸಂಚಾರ ಸ್ಥಗಿತ

Nagaraja AB

ನವದೆಹಲಿ: ಕೇಂದ್ರ ಸರ್ಕಾರದ ನೂತನ ಅಗ್ನಿಪಥ್ ಸೇನಾ ನೇಮಕಾತಿ ಯೋಜನೆ ವಿರೋಧಿಸಿ ಹಲವು ಸಂಘಟನೆಗಳು ಇಂದು ಭಾರತ್ ಬಂದ್ ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಹಲವು ರಾಜ್ಯಗಳಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.

ಅಗ್ನಿವೀರರನ್ನು ನೇಮಕ ಮಾಡಿಕೊಳ್ಳಲು ಕೇಂದ್ರ ಸಚಿವ ಸಂಪುಟ ಜೂನ್ 14 ರಂದು ಒಪ್ಪಿಗೆ ನೀಡಿತ್ತು. ಆದರೆ, ಗುತ್ತಿಗೆ ಆಧಾರದ ಕೇವಲ ನಾಲ್ಕು ವರ್ಷದ ಸೇವೆಯನ್ನು ವಿರೋಧಿಸಿ ದೆಹಲಿ, ಉತ್ತರ ಪ್ರದೇಶ, ಬಿಹಾರ, ಹರಿಯಾಣ, ತೆಲಂಗಾಣ, ಒಡಿಶಾ, ಪಶ್ಚಿಮ ಬಂಗಾಳ, ಮಧ್ಯಪ್ರದೇಶ, ಪಂಜಾಬ್, ಜಾರ್ಖಂಡ್, ಅಸ್ಸಾಂ ಸೇರಿದಂತೆ ಅನೇಕ ರಾಜ್ಯಗಳಲ್ಲಿ ಪ್ರತಿಭಟನೆ ನಡೆಯುತ್ತಿದೆ.

ಕೆಲವು ಕಡೆಗಳಲ್ಲಿ ಪ್ರತಿಭಟನೆ ಹಿಂಸಾತ್ಮಾಕ ರೂಪ ಪಡೆದುಕೊಂಡಿದ್ದು, ಪ್ರತಿಭಟನಾಕರರು ರೈಲು, ವಾಹನಗಳಿಗೆ ಬೆಂಕಿ ಹಚ್ಚಿದ್ದು, ಸಾರ್ವಜನಿಕ ಹಾಗೂ ಖಾಸಗಿ ಆಸ್ತಿ ಪಾಸ್ತಿಗೆ ನಷ್ಟವನ್ನುಂಟು ಮಾಡಿದ್ದಾರೆ.

ಅಗ್ನಿಪಥ್ ಯೋಜನೆ ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆ ಕಾರಣದಿಂದಾಗಿ 181 ಮೇಲ್ ಎಕ್ಸ್ ಪ್ರೆಸ್ ರೈಲುಗಳು ಮತ್ತು 348 ಪ್ರಯಾಣಿಕ ರೈಲುಗಳ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ನಾಲ್ಕು ಮೇಲ್ ಎಕ್ಸ್ ಪ್ರೆಸ್ ಮತ್ತು 6 ಪ್ರಯಾಣಿಕರ ರೈಲುಗಳು ಭಾಗಶ: ಸೇವೆಯನ್ನು ಸ್ಥಗಿತಗೊಳಿಸಿವೆ ಎಂದು ರೈಲ್ವೆ ಸಚಿವಾಲಯ ಮಾಹಿತಿ ನೀಡಿದೆ.

SCROLL FOR NEXT