ದೇಶ

ಶಿಕ್ಷಕರ ನೇಮಕಾತಿ ಅಕ್ರಮ ಹಗರಣ: ಇ.ಡಿ ಅಧಿಕಾರಿಗಳಿಂದ ಟಿಎಂಸಿ ಶಾಸಕ ಮಾಣಿಕ್ ಭಟ್ಟಾಚಾರ್ಯ ಬಂಧನ

Shilpa D

ಕೋಲ್ಕತ್ತ: ಪಶ್ಚಿಮ ಬಂಗಾಳದ ಶಿಕ್ಷಕರ ನೇಮಕಾತಿ ಅಕ್ರಮ ಹಗರಣದಲ್ಲಿ ನಡೆದಿರುವ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಟಿಎಂಸಿ ಶಾಸಕ ಮಾಣಿಕ್ ಭಟ್ಟಾಚಾರ್ಯ ಅವರನ್ನು ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ಮಂಗಳವಾರ ಬಂಧಿಸಿದ್ದಾರೆ.

ಭಟ್ಟಾಚಾರ್ಯ ಅವರನ್ನು ಸೋಮವಾರ ಇ.ಡಿ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದರು. ಬಳಿಕ ಅವರನ್ನು ಹೆಚ್ಚಿನ ವಿಚಾರಣೆಗಾಗಿ ಬಂಧಿಸಲಾಗಿದ್ದು, ನಾಳೆ (ಬುಧವಾರ) ನ್ಯಾಯಾಲಯಕ್ಕೆ ಹಾಜರುಪಡಿಸುವ ಸಾಧ್ಯತೆ ಇದೆ.

ತನಿಖೆಗೆ ಸಹಕರಿಸದ ಆರೋಪದ ಹಿನ್ನೆಲೆಯಲ್ಲಿ ಭಟ್ಟಾಚಾರ್ಯ ಅವರನ್ನು ಬಂಧಿಸಲಾಗಿದೆ ಎಂದು ಇ.ಡಿ ಅಧಿಕಾರಿಗಳು ತಿಳಿಸಿದ್ದಾರೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಣಿಕ್ ಭಟ್ಟಾಚಾರ್ಯ ಅವರನ್ನು ಜುಲೈನಲ್ಲಿ ಇ.ಡಿ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದರು.

ಭಟ್ಟಾಚಾರ್ಯ ನಾಡಿಯಾ ಜಿಲ್ಲೆಯ ಪಾಲಾಶಿಪರ ಕ್ಷೇತ್ರದ ಶಾಸಕರಾಗಿದ್ದಾರೆ. ಈ ಹಿಂದೆ ಬಂಗಾಳದ ಮಾಜಿ ಸಚಿವ ಪಾರ್ಥ ಚಟರ್ಜಿ ಅವರನ್ನು ಬಂಧಿಸಲಾಗಿತ್ತು ಇದೀಗ ಮಾಣಿಕ್ ಭಟ್ಟಾಚಾರ್ಯ ಅವರ ಬಂಧನದೊಂದಿಗೆ ಹಗರಣಕ್ಕೆ ಸಂಬಂಧಿಸಿ ಬಂಧಿತರಾದ ಎರಡನೇ ತೃಣಮೂಲ ಕಾಂಗ್ರೆಸ್ ನ ನಾಯಕರಾಗಿದ್ದಾರೆ.

ಮಾಣಿಕ್ ಭಟ್ಟಾಚಾರ್ಯ ಈ ಹಿಂದೆ ಪಶ್ಚಿಮ ಬಂಗಾಳದ ಪ್ರಾಥಮಿಕ ಶಿಕ್ಷಣ ಮಂಡಳಿಯ ಅಧ್ಯಕ್ಷರಾಗಿದ್ದರು. ಅವರ ಅಧಿಕಾರಾವಧಿಯಲ್ಲಿಯೇ ನೇಮಕಾತಿ ಹಗರಣ ನಡೆದಿದೆ ಎಂದು ಇಡಿ ಮೂಲಗಳು ಹೇಳಿವೆ. ಹಗರಣದ ವಿಚಾರ ಬೆಳಕಿಗೆ ಬರುತ್ತಿದ್ದಂತೆ ಭಟ್ಟಾಚಾರ್ಯ ಅವರನ್ನು ಅಧ್ಯಕ್ಷ ಸ್ಥಾನದಿಂದ ತೆಗೆದುಹಾಕಲಾಗಿದೆ.

SCROLL FOR NEXT