ದೇಶ

ಹಿಮಾಚಲ ಚುನಾವಣೆ: ಬಿಜೆಪಿ ತೊರೆದ ಇಬ್ಬರು ನಾಯಕರು, ಧರ್ಮಶಾಲಾದಿಂದ ಪಕ್ಷೇತರರಾಗಿ ಸ್ಪರ್ಧೆ

Lingaraj Badiger

ಧರ್ಮಶಾಲಾ: ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣಾ ಕಣ ರಂಗೇರುತ್ತಿದ್ದು, ಬಿಜೆಪಿಯ ಇಬ್ಬರು ಹಿರಿಯ ನಾಯಕರು ಪಕ್ಷಕ್ಕೆ ರಾಜೀನಾಮೆ ನೀಡಿ ಮಂಗಳವಾರ ಪಕ್ಷೇತರ ಅಭ್ಯರ್ಥಿಗಳಾಗಿ ನಾಮಪತ್ರ ಸಲ್ಲಿಸಿದ್ದಾರೆ.

ಪಕ್ಷದ ಎಸ್ಟಿ ಮೋರ್ಚಾ ಉಪಾಧ್ಯಕ್ಷ ವಿಪಿನ್ ನೈಹಾರಿ ಮತ್ತು ಬಿಜೆಪಿ ಜಿಲ್ಲಾ ಅಧ್ಯಕ್ಷ ಅನಿಲ್ ಚೌಧರಿ ಅವರು ಬಿಜೆಪಿ ಟಿಕೆಟ್ ಆಕಾಂಕ್ಷಿಗಳಾಗಿದ್ದರು. ಆದರೆ ಪಕ್ಷ ಒಬಿಸಿ ನಾಯಕ ರಾಕೇಶ್ ಚೌಧರಿ ಮತ್ತು ಹಾಲಿ ಶಾಸಕ ವಿಶಾಲ್ ನೈಹಾರಿ ಅವರಿಗೆ ಟಿಕೆಟ್ ನೀಡಿದೆ.

ಟಿಕೆಟ್ ವಂಚಿತ ಇಬ್ಬರು ನಾಯಕರೂ ಪಕ್ಷಕ್ಕೆ ಗುಡ್ ಬೈ ಹೇಳಿದ್ದು, ಬಂಡಾಯ ಅಭ್ಯರ್ಥಿಗಳಾಗಿ ಕಣಕ್ಕಿಳಿದಿದ್ದಾರೆ.

ಅನಿಲ್ ಚೌಧರಿ ಅವರಿಗೆ ಪಕ್ಷದ ಟಿಕೆಟ್‌ ನೀಡುವಂತೆ ಒತ್ತಾಯಿಸಿ ಬಿಜೆಪಿ ಧರ್ಮಶಾಲಾ ಮಂಡಲದ ಎಲ್ಲಾ ಪದಾಧಿಕಾರಿಗಳು ಪ್ರತಿಭಟನೆ ಮಾಡಿದ್ದಾರೆ ಎಂದು ಗಡ್ಡಿ ಸಮುದಾಯದ ಮುಖಂಡ ವಿಪಿನ್ ನೈಹಾರಿಯಾ ಅವರು ತಿಳಿಸಿದ್ದಾರೆ. 

ನಾಮಪತ್ರ ಸಲ್ಲಿಕೆಗೆ ಇಂದು ಕೊನೆಯ ದಿನವಾಗಿದ್ದು, ನಾಮಪತ್ರ ಹಿಂಪಡೆಯಲು ಅಕ್ಟೋಬರ್ 29 ಕೊನೆಯ ದಿನವಾಗಿದೆ.

 ಹಿಮಾಚಲ ಪ್ರದೇಶ ವಿಧಾನಸಭೆಗೆ ನವೆಂಬರ್ 12 ರಂದು ಮತದಾನ ನಡೆಯಲಿದ್ದು, ಡಿಸೆಂಬರ್ 8 ರಂದು ಫಲಿತಾಂಶ ಪ್ರಕಟವಾಗಲಿದೆ.

SCROLL FOR NEXT