ದೇಶ

ಬಿಜೆಪಿ ಅಧಿಕಾರಕ್ಕೆ ಬಂದಾಗಿನಿಂದ ದ್ವೇಷ ಹೆಚ್ಚಾಗುತ್ತಿದೆ: ಕಾಂಗ್ರೆಸ್ ರ‍್ಯಾಲಿಯಲ್ಲಿ ರಾಹುಲ್ ಗಾಂಧಿ ವಾಗ್ದಾಳಿ

Ramyashree GN

ನವದೆಹಲಿ: ದೇಶದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ದ್ವೇಷ ಹೆಚ್ಚಾಗುತ್ತಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಇಂದು ದೆಹಲಿಯ ರಾಮಲೀಲಾ ಮೈದಾನದಲ್ಲಿ ನಡೆಯುತ್ತಿರುವ ಬೆಲೆ ಏರಿಕೆ ವಿರುದ್ಧದ ಕಾಂಗ್ರೆಸ್‌ನ ಮೆಗಾ ರ‍್ಯಾಲಿಯಲ್ಲಿ ವಾಗ್ದಾಳಿ ನಡೆಸಿದರು.

ಜನರು ಅವರ ಭವಿಷ್ಯ, ಹಣದುಬ್ಬರ ಮತ್ತು ನಿರುದ್ಯೋಗದಿಂದಾಗಿ ಭಯಭೀತರಾಗಿದ್ದಾರೆ ಮತ್ತು ಅದು ಅವರನ್ನು ದ್ವೇಷದ ಕಡೆಗೆ ತಿರುಗಿಸುತ್ತಿದೆ. ಬಿಜೆಪಿ ಮತ್ತು ಆರ್‌ಎಸ್‌ಎಸ್ ದೇಶವನ್ನು ವಿಭಜಿಸುತ್ತಿವೆ ಎಂದು ಹೇಳಿದರು.

ಕಾಂಗ್ರೆಸ್ ಆಯೋಜಿಸಿದ್ದ 'ಮೆಹಂಗೈ ಪರ್ ಹಲ್ಲಾ ಬೋಲ್ ರ‍್ಯಾಲಿ'ಗೆ ಬಿಗಿ ಭದ್ರತೆ ಕೈಗೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಭಾರಿ ಜನಸಮೂಹ ಪಾಲ್ಗೊಂಡಿತ್ತು. ಪ್ರಧಾನಿ ಮತ್ತು ಆಡಳಿತಾರೂಢ ಬಿಜೆಪಿ ವಿರುದ್ಧ ಯಾವುದೇ ಅಡೆತಡೆ ಇಲ್ಲದೆಯೇ ರಾಹುಲ್ ಗಾಂಧಿ ಸಭಿಕರನ್ನು ಉದ್ದೇಶಿಸಿ ಮಾತನಾಡಿದರು.

ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಟ್ಟುಕೊಂಡು ವಾಗ್ದಾಳಿ ನಡೆಸಿ, 'ಕೇವಲ ಇಬ್ಬರು ಉದ್ಯಮಿಗಳು' ಸರ್ಕಾರದಿಂದ ಎಲ್ಲಾ ಪ್ರಯೋಜನಗಳನ್ನು ಅನುಭವಿಸುತ್ತಿದ್ದಾರೆ. ವಿಮಾನ ನಿಲ್ದಾಣ, ಬಂದರು, ರಸ್ತೆಗಳು... ಎಲ್ಲವನ್ನೂ ಈ ಇಬ್ಬರು ವ್ಯಕ್ತಿಗಳು ಸ್ವಾಧೀನಪಡಿಸಿಕೊಳ್ಳುತ್ತಿದ್ದಾರೆ' ಎಂದು ಆರೋಪಿಸಿದರು.

'ನರೇಂದ್ರ ಮೋದಿ ಅವರು ದೇಶವನ್ನು ಹಿಂದಕ್ಕೆ ಕೊಂಡೊಯ್ಯುತ್ತಿದ್ದಾರೆ. ಅವರು ದ್ವೇಷವನ್ನು ಹರಡುತ್ತಿದ್ದಾರೆ. ಪಾಕಿಸ್ತಾನ ಮತ್ತು ಚೀನಾ ಇದರ ಲಾಭ ಪಡೆಯುತ್ತಿವೆ. ಕಳೆದ ಎಂಟು ವರ್ಷಗಳಲ್ಲಿ ಪ್ರಧಾನಿ ಮೋದಿ ಭಾರತವನ್ನು ದುರ್ಬಲಗೊಳಿಸಿದ್ದಾರೆ' ಎಂದು ಅವರು ದೂರಿದರು.

ಹಿಂದಿಯಲ್ಲಿ ಫೇಸ್‌ಬುಕ್‌ನಲ್ಲಿ ಪೋಸ್ಟ್‌ ಮಾಡಿರುವ ರಾಹುಲ್ ಗಾಂಧಿ, 'ಇಂದು ದೇಶ ಎದುರಿಸುತ್ತಿರುವ ದೊಡ್ಡ ಸಮಸ್ಯೆಗಳೆಂದರೆ ನಿರುದ್ಯೋಗ, ಹಣದುಬ್ಬರ ಮತ್ತು ಬೆಳೆಯುತ್ತಿರುವ ದ್ವೇಷ' ಎಂದಿದ್ದಾರೆ.
ಕಾಂಗ್ರೆಸ್ ವಕ್ತಾರ ಗೌರವ್ ವಲ್ಲಭ ಮಾತನಾಡಿ, 'ಕೇಂದ್ರವು ಪ್ರತಿಪಕ್ಷಗಳನ್ನು ಮೌನಗೊಳಿಸಲು ಸಿಬಿಐ ಮತ್ತು ಇ.ಡಿಯನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ. ಆದರೆ, ಹೆಚ್ಚಾಗುತ್ತಿರುವ ಹಣದುಬ್ಬರ ಮತ್ತು ಅಗತ್ಯ ವಸ್ತುಗಳ ಮೇಲೆ ಜಿಎಸ್‌ಟಿ ಹೇರುವಿಕೆಯ ವಿರುದ್ಧ ಪಕ್ಷ ಧ್ವನಿ ಎತ್ತುವುದನ್ನು ಮುಂದುವರಿಸುತ್ತದೆ' ಎಂದು ಹೇಳಿದರು.

SCROLL FOR NEXT