ಮುಂಬೈ: ಎಲ್ಗಾರ್ ಪರಿಷತ್-ಮಾವೋವಾದಿ ಸಂಪರ್ಕ ಪ್ರಕರಣದ ಆರೋಪಿ ಸಾಮಾಜಿಕ ಕಾರ್ಯಕರ್ತ ಗೌತಮ್ ನವ್ಲಾಖಾ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಇಲ್ಲಿನ ವಿಶೇಷ ಎನ್ಐಎ ನ್ಯಾಯಾಲಯ ತಿರಸ್ಕರಿಸಿದೆ.
ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ನವ್ಲಾಖಾ ಅವರನ್ನು 2018ರ ಆಗಸ್ಟ್ 28ರಂದು ಬಂಧಿಸಲಾಗಿತ್ತು. ಮೊದಲಿಗೆ ಅವರನ್ನು ಗೃಹಬಂಧನದಲ್ಲಿ ಇರಿಸಲಾಗಿತ್ತು. ನಂತರ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದ್ದು ಸದ್ಯ ನವಿ ಮುಂಬೈನ ತಲೋಜಾ ಜೈಲಿನಲ್ಲಿದ್ದಾರೆ.
ವಿಶೇಷ ನ್ಯಾಯಾಧೀಶ ರಾಜೇಶ್ ಜೆ ಕಟಾರಿಯಾ ಅವರು ನವ್ಲಾಖಾ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ್ದಾರೆ.
ಈ ಪ್ರಕರಣವು 2017ರ ಡಿಸೆಂಬರ್ 31ರಂದು ಪುಣೆಯ ಶನಿವಾರವಾಡದಲ್ಲಿ ನಡೆದ ಎಲ್ಗಾರ್ ಪರಿಷತ್ ಸಮಾವೇಶದಲ್ಲಿ ಮಾಡಿದ ಆಪಾದಿತ ಪ್ರಚೋದಕ ಭಾಷಣಗಳಿಗೆ ಸಂಬಂಧಿಸಿದ್ದಾಗಿದೆ. ಇನ್ನು ಪ್ರಚೋದಿತ ಹೇಳಿಕೆಯಿಂದಾಗಿ ಮರುದಿನ ನಗರದ ಹೊರವಲಯದಲ್ಲಿರುವ ಕೋರೆಗಾಂವ್-ಭೀಮಾ ಯುದ್ಧ ಸ್ಮಾರಕದ ಬಳಿ ಹಿಂಸಾಚಾರ ನಡೆಯಲು ಕಾರಣವಾಗಿತ್ತು ಎಂದು ಪೊಲೀಸರು ಹೇಳಿದ್ದಾರೆ.
ಇದನ್ನೂ ಓದಿ: ಎಲ್ಗರ್ ಪರಿಷದ್ ಪ್ರಕರಣ ಆರೋಪಿಗಳು ದೇಶದ ವಿರುದ್ಧ ಯುದ್ಧ ಸಾರಲು ಬಯಸಿದ್ದರು: ಎನ್ ಐಎಯಿಂದ ಕರಡು ಆರೋಪ ಸಲ್ಲಿಕೆ
ಪುಣೆ ಪೊಲೀಸರು ಕೂಡ ಸಮಾವೇಶಕ್ಕೆ ಮಾವೋವಾದಿಗಳ ಬೆಂಬಲವಿದೆ ಎಂದು ಹೇಳಿದ್ದರು. ನಂತರ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಈ ಪ್ರಕರಣದ ತನಿಖೆಯನ್ನು ವಹಿಸಿಕೊಂಡಿತು. ಇದರಲ್ಲಿ ಹತ್ತಕ್ಕೂ ಹೆಚ್ಚು ಕಾರ್ಯಕರ್ತರು ಮತ್ತು ಶಿಕ್ಷಣ ತಜ್ಞರನ್ನು ಆರೋಪಿಗಳೆಂದು ಹೆಸರಿಸಲಾಯಿತು.