ದೇಶ

ನವದೆಹಲಿ: ರಾಹುಲ್ ಗಾಂಧಿ, ಕುಮಾರಸ್ವಾಮಿ ಭೇಟಿಯಾದ ನಿತೀಶ್ ಕುಮಾರ್

Nagaraja AB

ನವದೆಹಲಿ: ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಸೋಮವಾರ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ಉಭಯ ಮುಖಂಡರು ದೇಶದಲ್ಲಿನ ಪ್ರಸ್ತತದ ರಾಜಕೀಯ ಬೆಳವಣಿಗೆ ಹಾಗೂ 2024ರ ಲೋಕಸಭಾ ಚುನಾವಣೆಯಲ್ಲಿ ಪ್ರತಿಪಕ್ಷಗಳ ಮೈತ್ರಿ ಹಾದಿ ಕುರಿತು ಚರ್ಚೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

 ಬಿಹಾರದಲ್ಲಿ ಎನ್ ಡಿಎ ಜೊತೆಗಿನ ಮೈತ್ರಿ ಕಳೆದುಕೊಂಡು ಆರ್ ಜೆಡಿ, ಕಾಂಗ್ರೆಸ್ ಮತ್ತು ಎಡಪಕ್ಷಗಳೊಂದಿಗೆ ಮಹಾಘಟ್ ಬಂಧನ್ ಸರ್ಕಾರ ರಚನೆಯಾದ ನಂತರ ನಿತೀಶ್ ಕುಮಾರ್ ಇದೇ ಮೊದಲ ಬಾರಿಗೆ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ.

ಸೋಮವಾರ ರಾಷ್ಟ್ರ ರಾಜಧಾನಿಗೆ ಆಗಮಿಸಿರುವ ನಿತೀಶ್ ಕುಮಾರ್,  ಜೆಡಿಎಸ್ ಮುಖಂಡ ಹೆಚ್. ಡಿ. ಕುಮಾರಸ್ವಾಮಿ ಅವರನ್ನು ಭೇಟಿಯಾಗಿದ್ದಾರೆ. ಹೆಚ್. ಡಿ. ದೇವೇಗೌಡ ಅವರ ನಿವಾಸದಲ್ಲಿ ಕುಮಾರಸ್ವಾಮಿ ಅವರನ್ನು ಭೇಟಿಯಾಗಿರುವ ನಿತೀಶ್ ಕುಮಾರ್, ಹಲವು ವಿಚಾರ ಕುರಿತು ಚರ್ಚೆ ನಡೆಸಿದ್ದಾರೆ. ಎನ್ ಸಿಪಿ ಮುಖಂಡ ಶರದ್ ಪವಾರ್, ಎಎಪಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸೇರಿದಂತೆ ಅನೇಕ ಪ್ರತಿಪಕ್ಷಗಳ ಮುಖಂಡರನ್ನು ಭೇಟಿಯಾಗುವ ಸಾಧ್ಯತೆಯಿದೆ. 

ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಮತ್ತು ಎಡಪಕ್ಷಗಳ ಮುಖಂಡರನ್ನು ನಿತೀಶ್ ಕುಮಾರ್ ಭೇಟಿಯಾಗುವ ಸಾಧ್ಯತೆಯಿದೆ. 2024ರ ಲೋಕಸಭೆ ಚುನಾವಣೆಗೆ ಬಿಜೆಪಿ ವಿರುದ್ಧ ಎಲ್ಲಾ ವಿರೋಧ ಪಕ್ಷಗಳನ್ನು ಒಗ್ಗೂಡಿಸುವ ಪ್ರಯತ್ನವನ್ನು ನಿತೀಶ್  ಕುಮಾರ್ ಮಾಡುತ್ತಿದ್ದಾರೆ. ಈ ನಿಟ್ಟಿನಲ್ಲಿ ಪ್ರತಿಪಕ್ಷಗಳ ಹಲವು ಮುಖಂಡರನ್ನು ಭೇಟಿಯಾಗುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

SCROLL FOR NEXT