ನವದೆಹಲಿ: 2024 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಎದುರಿಸಲು ವಿಪಕ್ಷಗಳನ್ನು ಒಗ್ಗೂಡಿಸುವ ಪ್ರಯತ್ನದಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಆರ್ ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಭಾನುವಾರ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿಯಾದರು.
ಕಾಂಗ್ರೆಸ್ ಮತ್ತು ಕೆಲವು ಪ್ರಾದೇಶಿಕ ಪಕ್ಷಗಳ ನಡುವಿನ ಭಿನ್ನಾಭಿಪ್ರಾಯ ಸಮನ್ವಯಗೊಳಿಸುವ ಪ್ರಯತ್ನಗಳು ನಡೆಯುತ್ತಿರುವುದರಿಂದ ಸೋನಿಯಾ ಗಾಂಧಿಯವರ 10 ಜನಪಥ್ ನಿವಾಸದಲ್ಲಿ ನಡೆದ ಸಭೆಯು ವಿಪಕ್ಷಗಳನ್ನು ಒಗ್ಗೂಡಿಸುವ ನಿಟ್ಟಿನಲ್ಲಿ ಬಹಳ ನಿರ್ಣಾಯಕವೆಂದು ಪರಿಗಣಿಸಲಾಗಿದೆ.
ಕಳೆದ ತಿಂಗಳು ಬಿಹಾರದಲ್ಲಿ ಬಿಜೆಪಿಯೊಂದಿಗಿನ ಸಂಬಂಧ ಕಡಿದುಕೊಂಡು ಆರ್ ಜೆಡಿ ಮತ್ತು ಕಾಂಗ್ರೆಸ್ ನೊಂದಿಗೆ ಸರ್ಕಾರ ರಚಿಸಿದ್ದ ನಿತೀಶ್ ಕುಮಾರ್, ಸೋನಿಯಾ ಗಾಂಧಿ ಜೊತೆಗಿನ ಮೊದಲ ಭೇಟಿ ಇದಾಗಿದೆ.
ಇದನ್ನೂ ಓದಿ: 2024 ರಲ್ಲಿ ಕೇಂದ್ರದಲ್ಲಿ ಸರ್ಕಾರ ಬದಲಾವಣೆಗೆ ಎಲ್ಲರೂ ಶ್ರಮಿಸಬೇಕು- ವಿಪಕ್ಷ ನಾಯಕರ ರ್ಯಾಲಿಯಲ್ಲಿ ಶರದ್ ಪವಾರ್
ಇದಕ್ಕೂ ಮುನ್ನ ಫತೇಹಾಬಾದ್ ನಲ್ಲಿ ನಡೆದ ವಿಪಕ್ಷ ಮುಖಂಡರ ಮೆಗಾ ರ್ಯಾಲಿಯಲ್ಲಿ ಮಾತನಾಡಿದ ನಿತೀಶ್ ಕುಮಾರ್, ಬಿಜೆಪಿಯನ್ನು ಎದುರಿಸಲು ಕಾಂಗ್ರೆಸ್ ಮತ್ತು ಎಡಪಕ್ಷಗಳು ಸೇರಿದಂತೆ ಎಲ್ಲಾ ವಿಪಕ್ಷಗಳು ಒಗ್ಗೂಡಿಸಲು ಕರೆ ನೀಡಿದರು ಮತ್ತು 2024 ರ ಲೋಕಸಭೆ ಚುನಾವಣೆಯಲ್ಲಿ ಕೇಸರಿ ಪಕ್ಷಕ್ಕೆ ಹೀನಾಯ ಸೋಲು ಕಟ್ಟಿಟ್ಟ ಬುತ್ತಿ ಎಂದು ಹೇಳಿದರು.