ನವದೆಹಲಿ: ದೆಹಲಿ ವಕ್ಫ್ ಬೋರ್ಡ್ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಆಮ್ ಆದ್ಮಿ ಪಕ್ಷದ ಶಾಸಕ ಅಮಾನತುಲ್ಲಾ ಖಾನ್ ಅವರನ್ನು ದೆಹಲಿಯ ರೂಸ್ ಅವೆನ್ಯೂ ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನ ಆದೇಶಿಸಿದೆ.
ಈ ಮಧ್ಯೆ ಶಾಸಕ ಅಮಾನತುಲ್ಲಾ ಖಾನ್ ಅವರ ವಕೀಲರ ತಂಡ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದು, ನಾಳೆ ವಿಚಾರಣೆ ನಡೆಯಲಿದೆ.
ದೆಹಲಿ ವಕ್ಫ್ ಬೋರ್ಡ್ ನೇಮಕಾತಿಯಲ್ಲಿನ ಅಕ್ರಮಗಳಿಗೆ ಸಂಬಂಧಿಸಿದಂತೆ ಖಾನ್ ಅವರನ್ನು ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ಸೆಪ್ಟೆಂಬರ್ 16 ರಂದು ಅವರ ಮತ್ತು ಅವರ ಸಹಾಯಕರ ಮನೆಗಳ ಮೇಲೆ ದಾಳಿ ನಡೆಸಿ ಬಂಧಿಸಲಾಗಿತ್ತು. ಬಂಧನಕ್ಕೊಳಗಾದ ಒಂದು ದಿನದ ನಂತರ, ಅಮಾನತುಲ್ಲಾ ಖಾನ್ ಅವರನ್ನು ನಾಲ್ಕು ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿತ್ತು.
2020ರಲ್ಲಿ ಭ್ರಷ್ಟಾಚಾರ ತಡೆ ಕಾಯ್ದೆಯಡಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಓಖ್ಲಾ ಶಾಸಕ ಅಮಾನತುಲ್ಲಾ ಖಾನ್ ರನ್ನು ವಿಚಾರಣೆಗೆ ಕರೆಯಲಾಗಿತ್ತು. ವಿಚಾರಣೆ ಬೆನ್ನಲ್ಲೇ ಖಾನ್ ಅವರ ನಿವಾಸ ಹಾಗೂ ಕಚೇರಿಗಳ ಮೇಲೆ ಎಸಿಬಿ ದಾಳಿ ನಡೆಸಿದ್ದು, ದಾಳಿ ವೇಳೆ 12 ಲಕ್ಷ ರೂ. ನಗದು ಮತ್ತು ಪರವಾನಗಿ ಇಲ್ಲದ ಗನ್, ಕೆಲವು ಕಾಟ್ರಿಡ್ಜ್ಗಳನ್ನು ಜಪ್ತಿ ಮಾಡಲಾಗಿತ್ತು.