ದೇಶ

ಮಾನಹಾನಿ ಪ್ರಕರಣ: ಮೇಲ್ಮನವಿ ಸಲ್ಲಿಸಿದ ರಾಹುಲ್ ಗಾಂಧಿಗೆ ಜಾಮೀನು, ವಿಚಾರಣೆ ಏಪ್ರಿಲ್ 13ಕ್ಕೆ ಮುಂದೂಡಿಕೆ

Lingaraj Badiger

ಸೂರತ್: 2019ರ ಮಾನಹಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಸೂರತ್ ಸೆಷನ್ಸ್ ನ್ಯಾಯಾಲಯ ಸೋಮವಾರ ಜಾಮೀನು ಮಂಜೂರು ಮಾಡಿದ್ದು, ಮುಂದಿನ ವಿಚಾರಣೆಯನ್ನು ಏಪ್ರಿಲ್ 13ಕ್ಕೆ ನಿಗದಿಪಡಿಸಿದೆ.

ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ಸೂರತ್ ನ್ಯಾಯಾಲಯ ನೀಡಿರುವ ಶಿಕ್ಷೆಯನ್ನು ಪ್ರಶ್ನಿಸಿ ರಾಹುಲ್ ಗಾಂಧಿ ಅವರು ಇಂದು ಮೇಲ್ಮನವಿ ಸಲ್ಲಿಸಿದರು. ಮೇಲ್ಮನವಿ ಸ್ವೀಕರಿಸಿದ ಕೋರ್ಟ್, ಆರೋಪಿ ಕಾಂಗ್ರೆಸ್ ನಾಯಕನಿಗೆ ಜಾಮೀನು ಮಂಜೂರು ಮಾಡಿ, ವಿಚಾರಣೆಯನ್ನು ಏಪ್ರಿಲ್ 13ಕ್ಕೆ ಮುಂದೂಡಿದೆ.

2019ರ ಲೋಕಸಭಾ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಕರ್ನಾಟಕದ ಕೋಲಾರದಲ್ಲಿ ನಡೆದ ಕಾರ್ಯಕ್ರಮದಲ್ಲಿ ನೀರವ್ ಮೋದಿ, ಲಲಿತ್ ಮೋದಿ, ನರೇಂದ್ರ ಮೋದಿ ಇವರೆಲ್ಲರ ಸರ್‌ನೇಮ್ ಒಂದೇ ಆಗಿದ್ದು, ಈ ಎಲ್ಲಾ ಕಳ್ಳರು ದೇಶವನ್ನು ಲೂಟಿ ಮಾಡಿದ್ದಾರೆ ಎಂದು ರಾಹುಲ್ ತಮ್ಮ ಭಾಷಣದಲ್ಲಿ ಹರಿಹಾಯ್ದಿದ್ದರು.

ಈ ಹೇಳಿಕೆಯನ್ನು ಆಧಾರಿಸಿ ಬಿಜೆಪಿ ಶಾಸಕ ಮತ್ತು ಗುಜರಾತ್ ಮಾಜಿ ಸಚಿವ ಪೂರ್ಣೇಶ್ ಮೋದಿ ಅವರು ಕ್ರಿಮಿನಲ್ ಮಾನಹಾನಿ ದೂರು ದಾಖಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ಸೂರತ್ ನ್ಯಾಯಾಲಯ ರಾಹುಲ್ ಗಾಂಧಿ ಎರಡು ವರ್ಷ ಜೈಲು ಶಿಕ್ಷೆ  ವಿಧಿಸಿದೆ. ಈ ಶಿಕ್ಷೆಯನ್ನು ಆಧರಿಸಿ ರಾಹುಲ್ ಗಾಂಧಿ ಅವರನ್ನು ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಳಿಸಲಾಗಿದೆ.

SCROLL FOR NEXT