ನವದೆಹಲಿ: ಮಾನನಷ್ಟ ಮೊಕದ್ದಮೆಯಲ್ಲಿ ನೇಡಲಾಗಿರುವ ಶಿಕ್ಷೆಗೆ ತಡೆ ಕೋರಿದ್ದ ಕಾಂಗ್ರೆಸ್ ನಾಯಕನ ಮನವಿಯನ್ನು ಗುಜರಾತ್ ನ್ಯಾಯಾಲಯ ತಿರಸ್ಕರಿಸಿದ್ದು, ರಾಹುಲ್ ಗಾಂಧಿಗೆ ರಾಷ್ಟ್ರದ ಕ್ಷಮೆ ಕೇಳಲು ಇನ್ನೂ ಸಮಯವಿದೆ ಎಂದು ಮಾಹಿತಿ ಮತ್ತು ಪ್ರಸಾರ ಸಚಿವ ಅನುರಾಗ್ ಠಾಕೂರ್ ಗುರುವಾರ ಹೇಳಿದ್ದಾರೆ.
ಏಪ್ರಿಲ್ 13, 2019 ರಂದು ಕರ್ನಾಟಕದ ಕೋಲಾರದಲ್ಲಿ ಚುನಾವಣಾ ರ್ಯಾಲಿಯಲ್ಲಿ 'ಎಲ್ಲಾ ಕಳ್ಳರು ಮೋದಿ ಎಂಬ ಉಪನಾಮವನ್ನೇ ಏಕೆ ಹೊಂದಿದ್ದಾರೆ?' ಎಂದು ಹೇಳಿಕೆ ನೀಡಿದ್ದರು. ಇದನ್ನು ಪ್ರಶ್ನಿಸಿ ಸೂರತ್ ಕ್ಷೇತ್ರದ ಶಾಸಕ ಪೂರ್ಣೇಶ್ ಮೋದಿ ಅವರು ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.
ಅರ್ಜಿ ವಿಚಾರಣೆ ನಡೆಸಿದ್ದ ಸೂರತ್ ನ್ಯಾಯಾಲಯವು ರಾಹುಲ್ ಅವರನ್ನು ಅಪರಾಧಿ ಎಂದು ಘೋಷಿಸಿತ್ತು ಮತ್ತು ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿ ಮಾರ್ಚ್ 23ರಂದು ತೀರ್ಪು ನೀಡಿತ್ತು. ಮೇಲ್ಮನವಿ ಸಲ್ಲಿಸಲು ಅವಕಾಶ ನೀಡಿದ್ದ ನ್ಯಾಯಾಲಯ, ತೀರ್ಪನ್ನು 30 ದಿನಗಳ ಕಾಲ ಅಮಾನತಿನಲ್ಲಿಟ್ಟಿತ್ತು.
ಮಾನನಷ್ಟ ಮೊಕದ್ದಮೆಯಲ್ಲಿ ಸೂರತ್ನ ಕೆಳ ನ್ಯಾಯಾಲಯ ಮಾರ್ಚ್ 23ರಂದು ವಿಧಿಸಿದ ಶಿಕ್ಷೆಗೆ ತಡೆ ಕೋರಿ ರಾಹುಲ್ ಗಾಂಧಿ ಅವರು ಏಪ್ರಿಲ್ 3ರಂದು ಸೆಷನ್ಸ್ ನ್ಯಾಯಾಲಯಲ್ಲಿ ಅರ್ಜಿ ಸಲ್ಲಿಸಿದ್ದರು. ರಾಹುಲ್ ಗಾಂಧಿ ಸಲ್ಲಿಸಿದ್ದ ಮನವಿಯನ್ನು ಸೂರತ್ ಕೋರ್ಟ್ ತಿರಸ್ಕರಿಸಿದೆ.
ಇದನ್ನೂ ಓದಿ: ರಾಹುಲ್ ಗಾಂಧಿ ಸಲ್ಲಿಸಿದ್ದ ಮನವಿ ತಿರಸ್ಕಾರ; ಕಾನೂನಿನಡಿ ಲಭ್ಯವಿರುವ ಎಲ್ಲಾ ಆಯ್ಕೆಗಳನ್ನು ಬಳಸಿಕೊಳ್ಳುತ್ತೇವೆ: ಕಾಂಗ್ರೆಸ್
ಪ್ರಧಾನಿ ನರೇಂದ್ರ ಮೋದಿ ಅವರನ್ನು ನಿಂದಿಸುವ ಮತ್ತು ವಾಗ್ದಾಳಿ ನಡೆಸುವ ಹೆಸರಿನಲ್ಲಿ ಕಾಂಗ್ರೆಸ್ ರಾಜವಂಶವು ಉದ್ದೇಶಪೂರ್ವಕವಾಗಿ ಭಾರತದ ಒಬಿಸಿ ಸಮುದಾಯವನ್ನು ಅವಮಾನಿಸಿದೆ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದೆ ಎಂದು ಠಾಕೂರ್ ಹೇಳಿದ್ದಾರೆ.
ರಾಷ್ಟ್ರಕ್ಕೆ ಕ್ಷಮೆಯಾಚಿಸಲು ರಾಹುಲ್ ಗಾಂಧಿಗೆ ಇನ್ನೂ ಸಮಯವಿದೆ ಎಂದು ಲೋಕಸಭಾ ಸದಸ್ಯ ಠಾಕೂರ್ ಹೇಳಿದ್ದಾರೆ.