ದೇಶ

ಮಣಿಪುರ ಹಿಂಸಾಚಾರ: ವಿಪಕ್ಷಗಳಿಂದ ಮುಂದುವರಿದ ಪ್ರತಿಭಟನೆ, ಲೋಕಸಭೆ ಕಲಾಪ ಮಧ್ಯಾಹ್ನ 2ಕ್ಕೆ ಮುಂದೂಡಿಕೆ

Ramyashree GN

ನವದೆಹಲಿ: ಮಣಿಪುರ ಹಿಂಸಾಚಾರ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಪಕ್ಷಗಳ ಸದಸ್ಯರ ಪ್ರತಿಭಟನೆಯ ನಡುವೆಯೇ ಲೋಕಸಭೆಯ ಕಲಾಪವನ್ನು ಮಂಗಳವಾರ ಮಧ್ಯಾಹ್ನ 2 ಗಂಟೆಗೆ ಮುಂದೂಡಲಾಯಿತು.

ಕಲಾಪ ಆರಂಭವಾಗುತ್ತಿದ್ದಂತೆಯೇ, ವಿರೋಧ ಪಕ್ಷದ ಸದಸ್ಯರು ಘೋಷಣೆಗಳನ್ನು ಕೂಗಲು ಪ್ರಾರಂಭಿಸಿದರು ಮತ್ತು ಫಲಕಗಳನ್ನು ಹಿಡಿದು ಕೆಲವರು ಸದನದ ಬಾವಿಗೆ ಪ್ರವೇಶಿಸಿದರು. ಕೆಲವರು ಮಣಿಪುರ ವಿಷಯವನ್ನು ಪ್ರಸ್ತಾಪಿಸಲು ಸ್ಪೀಕರ್ ಪೀಠದ ಬಳಿ ಭಿತ್ತಿಪತ್ರಗಳನ್ನು ಹಿಡಿದು ನಿಂತರು.

ಸ್ಪೀಕರ್ ಓಂ ಬಿರ್ಲಾ ಅವರು ಪ್ರತಿಭಟನಾನಿರತ ಸದಸ್ಯರಿಗೆ ಮಣಿಪುರ ವಿಷಯವನ್ನು ಪ್ರಸ್ತಾಪಿಸಲು ಸಮಯಾವಕಾಶ ನೀಡುವುದಾಗಿ ತಿಳಿಸಿದರು.

ಬಿಎಸ್‌ಪಿ ಸದಸ್ಯ ಕುನ್ವರ್ ಡ್ಯಾನಿಶ್ ಅಲಿ ತಮ್ಮ ಆಸನದಲ್ಲಿ ನಿಂತು ಹರ್ಯಾಣದ ನುಹ್‌ನಲ್ಲಿ ನಡೆದ ಹಿಂಸಾಚಾರದ ಬಗ್ಗೆ ಘೋಷಣೆಗಳನ್ನು ಕೂಗಿದರು. 'ಸರ್, ನುಹ್ ಜಲ್ ರಹಾ ಹೈ (ನುಹ್ ಉರಿಯುತ್ತಿದೆ)' ಎಂದು ಸ್ಪೀಕರ್ ಅನ್ನು ಉದ್ದೇಶಿಸಿ ಹೇಳಿದರು.

ಸುಮಾರು 15 ನಿಮಿಷ ನಡೆದ ಪ್ರಶ್ನೋತ್ತರ ಅವಧಿಯಲ್ಲಿ ಮೂರು ಪ್ರಶ್ನೆಗಳು ಮತ್ತು ಅದಕ್ಕೆ ಸಂಬಂಧಿಸಿದ ಅನುಸರಣಾ ಪ್ರಶ್ನೆಗಳ ಬಗ್ಗೆ ಚರ್ಚಿಸಲಾಗಿದೆ ಮತ್ತು ಪರಿಹರಿಸಲಾಗಿದೆ. ಆದರೆ, ಪ್ರತಿಭಟನೆ ಮುಂದುವರಿದಿದ್ದರಿಂದ ಕಲಾಪವನ್ನು ಮಧ್ಯಾಹ್ನ 2 ಗಂಟೆಗೆ ಮುಂದೂಡಲಾಯಿತು.

ಜುಲೈ 20ರಂದು ಮುಂಗಾರು ಅಧಿವೇಶನ ಪ್ರಾರಂಭವಾದಾಗಿನಿಂದ ಮಣಿಪುರ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಸದನದಲ್ಲಿ ಹೇಳಿಕೆ ನೀಡಬೇಕು ಮತ್ತು ಚರ್ಚೆಗೆ ಅವಕಾಶ ನೀಡಬೇಕು ಎಂಬ ಪ್ರತಿಪಕ್ಷಗಳ ಒತ್ತಾಯದಿಂದಾಗಿ ಪ್ರತಿಭಟನೆಗಳು ಲೋಕಸಭೆಯ ಕಲಾಪಕ್ಕೆ ಅಡ್ಡಿಪಡಿಸುತ್ತಿವೆ.

SCROLL FOR NEXT